ಹುಬ್ಬಳ್ಳಿ:
ನಗರದಲ್ಲಿ ಮಂಗಳವಾರ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅದಿರು ಮಾರಾಟಕ್ಕೆ ನಾನು ಸಹಿ ಹಾಕಿಲ್ಲ. 2005ರಲ್ಲಿ ಗಣಿಗಾರಿಕೆ ನಿಂತು ಹೋಗಿತ್ತು. ಅದರ ನಂತರ, ಅಲ್ಲಿ ಗುತ್ತಿಗೆ ಪಡೆದ ಕಂಪನಿಯು ರಾಜ್ಯ ಹಾಗೂ ಕೇಂದ್ರ ಸರಕಾರದ ಜತೆ ಸಾಕಷ್ಟು ಪ್ರಕ್ರಿಯೆ ನಡೆಸಿತ್ತು. 2016ರಲ್ಲಿ ರಾಜ್ಯ ಸರಕಾರ ದೇವದಾರಿ ಅರಣ್ಯ ಪ್ರದೇಶದಲ್ಲಿ 404 ಹೆಕ್ಟೇರ್ ಪ್ರದೇಶದಲ್ಲಿ ಅದಿರು ಉತ್ಪಾದನೆ ಮಾಡುವ ಕುರಿತು ಕೇಂದ್ರಕ್ಕೆ ಪ್ರಸ್ತಾವ ಸಲ್ಲಿಸಿತ್ತು. ಅದರ ಮುಂದುವರಿದ ಭಾಗವಾಗಿ ಕೇಂದ್ರ ಸರ್ಕಾರ ಸಹಮತ ನೀಡಿದೆ ಎಂದು ಸ್ಪಷ್ಟಪಡಿಸಿದರು.
ಉದ್ದೇಶಿತ ಗಣಿಗಾರಿಕೆ ಪ್ರದೇಶದಲ್ಲಿ 90 ಸಾವಿರ ಮರಗಳಿವೆ ಎನ್ನುವ ಸ್ಪಷ್ಟತೆಯೂ ಇಲ್ಲ. ಗಣಿಗಾರಿಕೆ 40-50 ವರ್ಷ ನಡೆಯುವ ನಿರಂತರ ಪ್ರಕ್ರಿಯೆಯಾಗಿರುವುದರಿಂದ ಹಂತ-ಹಂತವಾಗಿ ಮರ ಕಡಿಯಲಾಗುತ್ತದೆ. ಅದೇ ಸಮಯಕ್ಕೆ ಅರಣ್ಯೀಕರಣ ಸಹ ನಡೆಯುತ್ತದೆ ಎಂದು ಸಮರ್ಥಿಸಿಕೊಂಡರು.ಇಲಾಖೆಯಲ್ಲಿರುವ ಸಕಾರಾತ್ಮಕ, ನಕಾರಾತ್ಮಕ ಅಂಶಗಳನ್ನು ಕ್ರೋಡ್ರೀಕರಿಸಿ, ಅಭಿವೃದ್ಧಿ ಕುರಿತು ಸೂಕ್ತ ಯೋಜನೆ ರೂಪಿಸಲಾಗುವುದು ಎಂದರು.
ರಾಜ್ಯ ಸರ್ಕಾರ ಏಕಾಏಕಿ ಇಂಧನ ಮೇಲಿನ ಸೆಸ್ ಹೆಚ್ಚಿಸಿರುವುದು ಸರ್ಕಾರದ ಪರಿಸ್ಥಿತಿ ಹೇಗಿದೆ ಎನ್ನುವುದು ಸ್ಪಷ್ಟವಾಗುತ್ತದೆ. ಜನರಿಂದ ಹಣ ಪಡೆದು, ಜನರಿಗೆ ನೀಡುವುದರಲ್ಲಿ ಯಾವ ಎದೆಗಾರಿಕೆಯಿದೆ? ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವುದಾಗಿ ಸಚಿವ ಎಂ.ಬಿ. ಪಾಟೀಲ ಅವರೇ ಹೇಳಿಕೆ ನೀಡಿದ್ದಾರೆ. ಕೇಂದ್ರಕ್ಕೆ ಬೊಟ್ಟು ಮಾಡುವುದರಲ್ಲಿ ಯಾವುದೇ ಅರ್ಥವಿಲ್ಲ. ಕೇಂದ್ರವನ್ನು ಕೇಳಿ ಇವರು ತೈಲ ಬೆಲೆ ಹೆಚ್ಚಿಸಿಲ್ಲ ಎಂದು ಕಿಡಿಕಾರಿದರು.ನಟ ದರ್ಶನ್ ಪ್ರಕರಣದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕೇಂದ್ರ ಸಚಿವನಾಗಿ ನಾನು ಈ ಕುರಿತು ಮಾತನಾಡುವುದು ಸರಿಯಲ್ಲ. ಆದರೆ, ಕಾನೂನಿನ ಅಡಿ ಯಾರೇ ತಪ್ಪು ಮಾಡಿದರೂ ಶಿಕ್ಷೆ ಅನುಭವಿಸಲೇಬೇಕು. ಕಾನೂನಿನ ಎದುರು ಯಾರೂ ದೊಡ್ಡವರಲ್ಲ ಎಂದು ಹೇಳಿದರು.
ಜೆಡಿಎಸ್ ಜಿಲ್ಲಾಧ್ಯಕ್ಷ ಗುರುರಾಜ ಹುಣಸಿಮರದ, ಮಾಜಿ ಶಾಸಕ ವೀರಭದ್ರಪ್ಪ ಹಾಲಹರವಿ, ಮಾಜಿ ಸಚಿವ ಅಲ್ಕೋಡ ಹನುಮಂತಪ್ಪ, ಸಾ.ರಾ. ಮಹೇಶ, ನಾಡಗೌಡ, ಶಿವಶಂಕರ ಕಲ್ಲೂರ ಸೇರಿದಂತೆ ಇತರರು ಇದ್ದರು.