ಕೇಂದ್ರ ಸರ್ಕಾರದ ವಿಶೇಷ ಅನುದಾನದ ಅಡಿಯಲ್ಲಿ ರಾಜ್ಯಕ್ಕೆ ಗ್ರಾಮ ಗ್ರಂಥಾಲಯಗಳನ್ನು ಪ್ರಾರಂಭಿಸಲು ಅನುಮತಿ ನೀಡಿದೆ
ಶಿರಸಿ: ಕೇಂದ್ರ ಸರ್ಕಾರದ ವಿಶೇಷ ಅನುದಾನದ ಅಡಿಯಲ್ಲಿ ರಾಜ್ಯಕ್ಕೆ ಗ್ರಾಮ ಗ್ರಂಥಾಲಯಗಳನ್ನು ಪ್ರಾರಂಭಿಸಲು ಅನುಮತಿ ನೀಡಿದೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.
ಅವರು ಈ ಕುರಿತು ಪ್ರಕಟಣೆ ನೀಡಿ, ಶಾಲಾ ವಿದ್ಯಾರ್ಥಿಗಳ ಓದುವಿಕೆ ಮತ್ತು ಡಿಜಿಟಲ್ ಮೂಲಸೌಕರ್ಯ ಕಾರ್ಯಕ್ರಮದ ಅಡಿಯಲ್ಲಿ ಈ ಯೋಜನೆಯನ್ನು ಪ್ರಾರಂಭಿಸಲು ನಿರ್ದೇಶಿಸಿರುವುದನ್ನು ಶ್ಲಾಘಸಿದರು. ಗ್ರಾಮ ಪಂಚಾಯತ ವ್ಯಾಪ್ತಿಯ ಆಯ್ದ ಗ್ರಾಮಗಳ ಶಾಲೆಗಳಲ್ಲಿ ಈ ಯೋಜನೆಯನ್ನು ಅನುಷ್ಠಾನಗೊಳಿಸಲು ತಿಳಿಸಿರುವುದು ಸ್ವಾಗತಾರ್ಹ ಬೆಳವಣಿಗೆ. ಉತ್ತರ ಕನ್ನಡ ಜಿಲ್ಲೆಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕಿತ್ತೂರು ಮತ್ತು ಖಾನಾಪುರ ಸೇರಿದಂತೆ ಒಟ್ಟೂ ೩೩೦ ಗ್ರಂಥಾಲಯಗಳು ಮಂಜೂರಾಗಿರುವುದು ಅತ್ಯಂತ ಸಂತಸದ ವಿಷಯ. ಈ ಗ್ರಂಥಾಲಯಗಳಿಗೆ ಅಗತ್ಯವಿರುವ ಪುಸ್ತಕಗಳು, ಪೀಠೋಪಕರಣಗಳು ಮತ್ತು ಇತರೆ ಸಾಮಗ್ರಿಗಳು ಈಗಾಗಲೇ ತಲುಪಿರುವುದು ಯೋಜನೆಯ ಸಕಾಲಿಕ ಅನುಷ್ಠಾನಕ್ಕೆ ಸಹಕಾರಿಯಾಗಿದೆ. ಈ ಯೋಜನೆಯು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರ ಬೌದ್ಧಿಕ ವಿಕಸನಕ್ಕೆ ಗಣನೀಯವಾಗಿ ಸಹಾಯಕವಾಗಲಿದೆ ಎನ್ನುವುದರಲ್ಲಿ ಸಂಶಯವಿಲ್ಲ. ಇದು ಪ್ರಧಾನ ಮಂತ್ರಿಗಳ "ವಿಕಸಿತ ಭಾರತ " ಕಲ್ಪನೆಯ ಸಾಕಾರಕ್ಕೆ ಒಂದು ಪ್ರಮುಖ ಹೆಜ್ಜೆಯಾಗಿದೆ. ಇದು ನಮ್ಮ ಸಮುದಾಯದಲ್ಲಿ ಜ್ಞಾನ ಪ್ರಸಾರಕ್ಕೆ ಮತ್ತು ಶೈಕ್ಷಣಿಕ ಪ್ರಗತಿಗೆ ಉತ್ತಮ ಅವಕಾಶವನ್ನು ಒದಗಿಸುತ್ತದೆ, ಸಾರ್ವಜನಿಕರು ಇದರ ಪ್ರಯೋಜನ ಪಡೆದು ಕೊಳ್ಳಬೇಕು ಮತ್ತು ಎಲ್ಲ ಗ್ರಾಮ ಪಂಚಾಯತ್ಗಳಲ್ಲೂ ಇದನ್ನು ಅನುಷ್ಠಾನ ಗೊಳಿಸಬೇಕು ಎಂದು ಹೇಳಿದ್ದಾರೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.