ಕಾರ್ಮಿಕರ ಮೂಲಭೂತ ಹಕ್ಕು ದಮನಕ್ಕೆ ಯತ್ನ: ಮುಖಂಡರ ಆರೋಪ

KannadaprabhaNewsNetwork |  
Published : Jul 10, 2025, 01:46 AM IST
ಅಖಿಲ ಭಾರತ ಮುಷ್ಕರ ಹಿನ್ನಲೆಯಲ್ಲಿ ಬಳ್ಳಾರಿಯಲ್ಲಿ ಬುಧವಾರ ವಿವಿಧ ಕಾರ್ಮಿಕ ಸಂಘಟನೆಗಳು ಹಾಗೂ ರೈತ ಸಂಘಟನೆಗಳ ಸದಸ್ಯರು ಮೆರವಣಿಗೆ ನಡೆಸಿ, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.  | Kannada Prabha

ಸಾರಾಂಶ

ಕಾರ್ಮಿಕರ ಕಲ್ಯಾಣಕ್ಕೆ ಕಂಟಕವಾಗಿ ಪರಿಣಮಿಸಿರುವ ನಾಲ್ಕು ದುಡಿಯುವ ಜನ ವಿರೋಧಿ ಕಾರ್ಮಿಕ ಸಂಹಿತೆಗಳನ್ನು ಕೂಡಲೇ ರದ್ದುಗೊಳಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಕರೆ ನೀಡಿದ್ದ ಅಖಿಲ ಭಾರತ ಮುಷ್ಕರಕ್ಕೆ ಬಳ್ಳಾರಿ ಜಿಲ್ಲೆಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.

ಬಳ್ಳಾರಿ: ಕಾರ್ಮಿಕರ ಕಲ್ಯಾಣಕ್ಕೆ ಕಂಟಕವಾಗಿ ಪರಿಣಮಿಸಿರುವ ನಾಲ್ಕು ದುಡಿಯುವ ಜನ ವಿರೋಧಿ ಕಾರ್ಮಿಕ ಸಂಹಿತೆಗಳನ್ನು ಕೂಡಲೇ ರದ್ದುಗೊಳಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಕರೆ ನೀಡಿದ್ದ ಅಖಿಲ ಭಾರತ ಮುಷ್ಕರಕ್ಕೆ ಜಿಲ್ಲೆಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.

ಮುಷ್ಕರ ಹಿನ್ನೆಲೆಯಲ್ಲಿ ಎಡ ಪಕ್ಷಗಳ ಕಾರ್ಮಿಕ ಸಂಘಟನೆಗಳ ಸದಸ್ಯರು ನಗರ ಸೇರಿದಂತೆ ತಾಲೂಕು ಕೇಂದ್ರಗಳಲ್ಲೂ ಪ್ರತಿಭಟನೆ ನಡೆಸಿ, ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನಿಲುವುಗಳನ್ನು ಖಂಡಿಸಿದರು. ಬ್ಯಾಂಕ್, ವಿಮೆ, ಅಂಚೆ ಸೇರಿದಂತೆ ವಿವಿಧ ಇಲಾಖೆಗಳ ಕಾರ್ಮಿಕ ಸಂಘಟನೆಗಳ ಸದಸ್ಯರು ಸೇವೆಯಿಂದ ದೂರ ಉಳಿದು ಮುಷ್ಕರದಲ್ಲಿ ಭಾಗವಹಿಸಿದ್ದರಿಂದ ಸಾರ್ವಜನಿಕ ಸೇವೆಯಲ್ಲಿ ವ್ಯತ್ಯಯ ಕಂಡು ಬಂತು. ಕರ್ನಾಟಕ ರಾಜ್ಯ ರೈತ ಸಂಘ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಸಂಘ, ಆಶಾ ಕಾರ್ಯಕರ್ತೆಯರು, ಜನವಾದಿ ಮಹಿಳಾ ಸಂಘಟನೆಗಳ ಸದಸ್ಯರು ಸೇರಿದಂತೆ 20ಕ್ಕೂ ಹೆಚ್ಚು ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾಧಿಕಾರಿ ಕಚೇರಿ ಬಳಿ ಜರುಗಿದ ಪ್ರತಿಭಟನಾ ಸಮಾವೇಶದಲ್ಲಿ ಮಾತನಾಡಿದ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಮುಖಂಡರು, ಕೇಂದ್ರದ ಬಿಜೆಪಿ ಸರ್ಕಾರ ಕಾರ್ಮಿಕ ಸಂಹಿತೆ ಜಾರಿಗೆ ತಂದು ದುಡಿಯುವ ವರ್ಗದ ಜನರ ಮೇಲೆ ಹೇರಲು ಹವಣಿಸುತ್ತಿದೆ. ಕೆಲಸ ಹಾಗೂ ಕೆಲಸದ ಪರಿಸ್ಥಿತಿಗಳಿಗೆ ಸಂಬಂಧಿಸಿದ ದುಡಿಮೆಯ ಸಮಯ, ಕನಿಷ್ಠ ವೇತನಗಳು, ಸಾಮಾಜಿಕ ಭದ್ರತೆ ಇತ್ಯಾದಿ ಮತ್ತು ಸಂಘಟಿತರಾಗುವ ಹಕ್ಕು, ಅವರ ಸಾಮೂಹಿಕ ಚೌಕಾಶಿ ಹಕ್ಕುಗಳು, ಆಂದೋಲನಗಳು, ಹೋರಾಟಗಳು ಮತ್ತು ಮುಷ್ಕರದ ಹಕ್ಕು ಸೇರಿದಂತೆ ಪ್ರತಿಭಟನೆಗಳ ಯಾವುದೇ ರೀತಿಯ ಸಾಮೂಹಿಕ ಅಭಿವ್ಯಕ್ತಿಗಳ ಮೇಲೆ ಕಾರ್ಮಿಕರ ಎಲ್ಲ ಮೂಲಭೂತ ಹಕ್ಕುಗಳನ್ನು ದಮನ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ. ಮಾಲೀಕವರ್ಗದ ಹಿತಾಸಕ್ತಿಯಲ್ಲಿ ವ್ಯಾಪಾರವನ್ನು ಸುಲಭಗೊಳಿಸುವ ಹೆಸರಿನಲ್ಲಿ ಕಾರ್ಮಿಕ ಸಂಹಿತೆಗಳನ್ನು ಜಾರಿಗೊಳಿಸಲಾಗುತ್ತಿದೆ ಎಂದು ಟೀಕಿಸಿದರು.

ಜಂಟಿ ಸಮಿತಿಯ ಜಿಲ್ಲಾ ಪ್ರಮುಖರಾದ ಸೋಮಶೇಖರಗೌಡ, ಜೆ. ಸತ್ಯಬಾಬು, ಕೆ. ಸೋಮಶೇಖರ ಹಾಗೂ ರೈತ ಸಂಘದ ಮಾಧವರೆಡ್ಡಿ ಕರೂರು ಮಾತನಾಡಿದರು.

ಅಖಿಲ ಭಾರತ ವಿಮಾ ನೌಕರರ ಸಂಘದ ಸೂರ್ಯನಾರಾಯಣ, ಟಿ.ಜಿ. ವಿಠಲ, ಜನವಾದಿ ಮಹಿಳಾ ಸಂಘಟನೆಯ ಚಂದ್ರಕಲಾ, ಎಐಯುಟಿಸಿ ಸಂಘಟನೆಯ ಡಾ. ಪ್ರಮೋದ, ಈ. ಹನುಮಂತಪ್ಪ, ಗೋವಿಂದ, ಸುರೇಶ, ರೈತ ಸಂಘದ ಸಂಗನಕಲ್ಲು ಕೃಷ್ಣ, ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಕಾರ್ಯದರ್ಶಿ ನಾಗಲಕ್ಷ್ಮಿ, ವಿ. ಘನ ಮಲ್ಲಿಕಾರ್ಜುನ, ಚೆನ್ನಪ್ಪ, ಬಸವರಾಜ, ಕೀರ್ತಿರಾಜ, ವೇಣಗೋಪಾಲ್ ಶೆಟ್ಟಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಇಲ್ಲಿನ ಗಾಂಧಿಭವನದಿಂದ ಮೆರವಣಿಗೆ ಹೊರಟ ಪ್ರತಿಭಟನಾಕಾರರು ನಗರದ ಪ್ರಮುಖ ಬೀದಿಗಳ ಮೂಲಕ ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾಯಿಸಿ, ಸಮಾವೇಶಗೊಂಡರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿದ್ದರಾಮಯ್ಯ ಭೇಟಿ ಮಾಡಿದ ರಮೇಶ್‌ ಜಾರಕಿಹೊಳಿ : ಕುತೂಹಲ!
ಬೆಂಗ್ಳೂರಲ್ಲಿರುವ ನಟಿ ಶಿಲ್ಪಾ ಶೆಟ್ಟಿ ಪಬ್‌ ಮೇಲೆ ಐಟಿ ದಾಳಿ