ರಾಜ್ಯದ 240 ತಾಲೂಕುಗಳ ಪೈಕಿ 220 ತಾಲೂಕುಗಳನ್ನು ಬರಪೀಡಿತ ತಾಲೂಕುಗಳನ್ನಾಗಿ ರಾಜ್ಯ ಸರ್ಕಾರ ಘೋಷಣೆ ಮಾಡಿದ್ದು, ಸದ್ಯದಲ್ಲಿಯೇ ರೈತರಿಗೆ ಬರ ಪರಿಹಾರದ ಹಣ ನೀಡಲು ಕ್ರಮ ಕೈಗೊಳ್ಳಲಾಗುತ್ತದೆ. ಈ ಬಗ್ಗೆ ಈಗಾಗಲೇ ಕಂದಾಯ ಇಲಾಖೆ ಮತ್ತು ಕೃಷಿ ಇಲಾಖೆಯಿಂದ ಬರ ಪರಿಹಾರ ಹಣ ನೀಡಲು ರೈತರಿಂದ ಸಂಬಂಧಪಟ್ಟ ದಾಖಲೆಗಳನ್ನು ಸಂಗ್ರಹಿಸಲಾಗಿದೆ.
ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ ಆರೋಪ । ಅತ್ತಿಹಳ್ಳಿ ಗ್ರಾಮದ ಭೈರವೇಶ್ವರ ಸ್ವಾಮಿಯ ಧಾರ್ಮಿಕ ಕಾರ್ಯಕ್ರಮ । ಕೆ.ಎನ್.ರಾಜಣ್ಣ ಭಾಗಿ
ಕನ್ನಡಪ್ರಭ ವಾರ್ತೆ ನುಗ್ಗೇಹಳ್ಳಿ
ರಾಜ್ಯ ತೀವ್ರ ಬರಗಾಲ ಎದುರಿಸುತ್ತಿದ್ದು, ರಾಜ್ಯಕ್ಕೆ ಹೆಚ್ಚಿನ ನೆರವು ನೀಡುವಂತೆ ಕೋರಿ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಪ್ರಧಾನ ಮಂತ್ರಿಗಳಿಗೆ ಮನವಿ ಸಲ್ಲಿಸಿದ್ದರೂ ಕೇಂದ್ರ ಸರ್ಕಾರ ಇದುವರೆಗೂ ಬರ ಪರಿಹಾರ ಘೋಷಿಸಿಲ್ಲ ಎಂದು ಕೃಷಿ ಸಚಿವ ಎನ್. ಚೆಲುರಾಯಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದರು.
ಹೋಬಳಿ ಅತ್ತಿಹಳ್ಳಿ ಗ್ರಾಮದ ಶ್ರೀ ಕುಂಠ ಭೈರವೇಶ್ವರ ಸ್ವಾಮಿ ಮತ್ತು ಶ್ರೀ ದೊಡ್ಡಮ್ಮ ಶ್ರೀ ಚಿಕ್ಕಮ್ಮ ದೇವಿಯವರ ಮಂಡಲ ಪೂಜೆ ಮತ್ತು ಅಭಿಷೇಕ ಮಹೋತ್ಸವದ ಅಂಗವಾಗಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ರಾಜ್ಯದ 240 ತಾಲೂಕುಗಳ ಪೈಕಿ 220 ತಾಲೂಕುಗಳನ್ನು ಬರಪೀಡಿತ ತಾಲೂಕುಗಳನ್ನಾಗಿ ರಾಜ್ಯ ಸರ್ಕಾರ ಘೋಷಣೆ ಮಾಡಿದ್ದು, ಸದ್ಯದಲ್ಲಿಯೇ ರೈತರಿಗೆ ಬರ ಪರಿಹಾರದ ಹಣ ನೀಡಲು ಕ್ರಮ ಕೈಗೊಳ್ಳಲಾಗುತ್ತದೆ. ಈ ಬಗ್ಗೆ ಈಗಾಗಲೇ ಕಂದಾಯ ಇಲಾಖೆ ಮತ್ತು ಕೃಷಿ ಇಲಾಖೆಯಿಂದ ಬರ ಪರಿಹಾರ ಹಣ ನೀಡಲು ರೈತರಿಂದ ಸಂಬಂಧಪಟ್ಟ ದಾಖಲೆಗಳನ್ನು ಸಂಗ್ರಹಿಸಲಾಗಿದೆ. ರಾಜ್ಯದ ಇತಿಹಾಸದಲ್ಲಿಯೇ ಇಷ್ಟೊಂದು ಕಾರ್ಯಕ್ರಮಗಳನ್ನು ಯಾವ ಸರ್ಕಾರವೂ ಕೂಡ ನೀಡಿದ ಉದಾಹರಣೆಗಳಿಲ್ಲ, ರಾಜ್ಯದ 5 ಗ್ಯಾರಂಟಿಗಳು ಇಡೀ ದೇಶಕ್ಕೆ ಮಾದರಿಯಾಗಿವೆ. ರಾಜ್ಯದಿಂದ ಕೇಂದ್ರಕ್ಕೆ ವಾರ್ಷಿಕ 4 ಲಕ್ಷ ಕೋಟಿ ತೆರಿಗೆ ಸಂದಾಯವಾಗುತ್ತಿದ್ದು, ರಾಜ್ಯಕ್ಕೆ ಮಾತ್ರ ಕೇಂದ್ರ ಸರ್ಕಾರ 50 ಸಾವಿರ ಕೋಟಿ ನೀಡುತ್ತಿದ್ದು, ಇದರಿಂದ ರಾಜ್ಯದ ಅಭಿವೃದ್ಧಿ ಕೆಲಸಗಳಿಗೆ ಹಿನ್ನಡೆಯಾಗಿದೆ. ಕನಿಷ್ಠ 1.50 ಲಕ್ಷ ಕೋಟಿಯನ್ನಾದರೂ ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಬೇಕು ಎಂದು ಒತ್ತಾಯಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಕೆ. ಎನ್. ರಾಜಣ್ಣ ಮಾತನಾಡಿ, ಮುಂಬರುವ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ನಮ್ಮ ಪಕ್ಷದ ಕಾರ್ಯಕರ್ತರು ಒಮ್ಮತದಿಂದ ಪಕ್ಷ ಟಿಕೆಟ್ ನೀಡುವ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಬೇಕು. ರಾಜ್ಯ ಸರ್ಕಾರ ನುಡಿದಂತೆ ನಡೆದಿದ್ದು ಮಹಿಳೆಯರಿಗೆ ಕೊಟ್ಟ ಮಾತಿನಂತೆ ಗೃಹಲಕ್ಷ್ಮೀ ಮತ್ತು ಶಕ್ತಿ ಯೋಜನೆ ಮೂಲಕ ಮಹಿಳೆಯರ ಕೈ ಹಿಡಿಯುವ ಕೆಲಸ ಮಾಡಿದೆ. ಈ ಬಾರಿಯ ಹಾಸನಂಬ ಜಾತ್ರಾ ಮಹೋತ್ಸವವನ್ನು ಅಚ್ಚುಕಟ್ಟಾಗಿ ಜಿಲ್ಲಾಡಳಿತ ನಿಭಾಯಿಸಿದ್ದು, ಶಕ್ತಿ ಯೋಜನೆಯ ಪರಿಣಾಮ ಹಾಸನಂಬ ದೇವಾಲಯಕ್ಕೆ ಭಕ್ತರಿಂದ ಸುಮಾರು 9 ಕೋಟಿ 70 ಲಕ್ಷ ರು. ಹಣ ಸಂಗ್ರಹವಾಗಿದೆ. ಕೇಂದ್ರ ಸರ್ಕಾರಕ್ಕೆ ತಕ್ಷಣ ಕೊಬ್ಬರಿ ಖರೀದಿ ಕೇಂದ್ರವನ್ನು ತೆರೆಯುವಂತೆ ಒತ್ತಾಯಿಸಲಾಗಿದ್ದು, ಕೇಂದ್ರ ಸರ್ಕಾರ ನಿಗದಿ ಮಾಡಿರುವಂತೆ ಪ್ರತಿ ಕ್ವಿಂಟಾಲ್ ಗೊಬ್ಬರಿಗೆ ರು. 12 ಸಾವಿರ ಘೋಷಿಸಿದ್ದು, ರಾಜ್ಯ ಸರ್ಕಾರ ಬೆಂಬಲ ಬೆಲೆಗಾಗಿ 1,500 ರು. ಗಳನ್ನು ಹೆಚ್ಚುವರಿಯಾಗಿ ನೀಡಲಿದೆ ಎಂದರು.
ಅರಸೀಕೆರೆ ಕ್ಷೇತ್ರದ ಶಾಸಕ ಕೆಎಂ ಶಿವಲಿಂಗೇಗೌಡ ಮಾತನಾಡಿ, ಇಡೀ ಜಿಲ್ಲೆಯಲ್ಲಿ ಅರಸೀಕೆರೆ ಮತ್ತು ಚನ್ನರಾಯಪಟ್ಟಣ ತಾಲೂಕುಗಳಲ್ಲಿ ಹೆಚ್ಚು ತೆಂಗು ಬೆಳೆಗಾರರಿದ್ದು, ಕಳೆದ 2 ವರ್ಷಗಳಿಂದ ರೈತರು ಬೆಲೆ ಬೆಲೆ ಕುಸಿತದಿಂದ ಸಂಕಷ್ಟದಲ್ಲಿದ್ದಾರೆ. ಕೇಂದ್ರ ಸರ್ಕಾರ ಕೇವಲ ಖರೀದಿ ಕೇಂದ್ರ ತೆರೆಯಲು ಮನಸ್ಸಿಲ್ಲದೆ ಕುಂಟು ನೆಪ ಹೇಳುತ್ತಿದೆ ಎಂದರು.
ಮಾಜಿ ವಿಧಾನ ಪರಿಷತ್ ಸದಸ್ಯ ಎಂಎ ಗೋಪಾಲಸ್ವಾಮಿ ಮಾತನಾಡಿ, ಕಳೆದ ಬಾರಿ ವಿಧಾನಸಭಾ ಚುನಾವಣೆಯಲ್ಲಿ ತಾವು ಕಡಿಮೆ ಅಂತರದಿಂದ ಸೋತಿದ್ದು, ಈ ಸೋಲಿನಿಂದ ನಾವು ದೃತಿಗೆಟ್ಟಿಲ್ಲ. ಸದಾ ಕ್ಷೇತ್ರದ ಜನರ ಕಷ್ಟ-ಸುಖಗಳನ್ನು ಆಲಿಸುತ್ತಿದ್ದು, ಅವರ ಸಮಸ್ಯೆಗಳಿಗೆ ಸ್ಪಂದಿಸಲಾಗುತ್ತಿದೆ. ಅತ್ತಿಹಳ್ಳಿ ಗ್ರಾಮದಲ್ಲಿ ನಿರ್ಮಾಣಗೊಂಡಿರುವ ಶ್ರೀ ಕುಂಠ ಬೈರವೇಶ್ವರ ಸ್ವಾಮಿ ದೇವಾಲಯ ನಿರ್ಮಾಣಕ್ಕೆ ತಮ್ಮ ವಿಧಾನ ಪರಿಷತ್ ಅನುದಾನದಲ್ಲಿ 10 ಲಕ್ಷ ಅನುದಾನವನ್ನು ಕೊಟ್ಟಿರುವುದಾಗಿ ತಿಳಿಸಿದರು.
ಮಾಜಿ ಶಾಸಕ ಸಿ ಎಸ್ ಪುಟ್ಟೇಗೌಡ ಮಾತನಾಡಿದರು.
ನುಗ್ಗೇಹಳ್ಳಿ ಪುರವರ್ಗ ಹಿರೇಮಠದ ಡಾ. ಮಹೇಶ್ವರ ಶಿವಾಚಾರ್ಯ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು.
ಕಾರ್ಯಕ್ರಮದ ಮುನ್ನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್. ರಾಜಣ್ಣ ನೂತನ ದೇವಾಲಯಕ್ಕೆ ಭೇಟಿ ನೀಡಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಗ್ರಾಮದ ವತಿಯಿಂದ ಉಸ್ತುವಾರಿ ಸಚಿವ ಕೆ.ಎನ್. ರಾಜಣ್ಣ ಮತ್ತು ಎನ್. ಚೆಲುವರಾಯಸ್ವಾಮಿ ಅವರನ್ನು ಸನ್ಮಾನಿಸಲಾಯಿತು.
ಹೊಳೆನರಸೀಪುರ ಕ್ಷೇತ್ರದ ಕಾಂಗ್ರೆಸ್ ಮುಖಂಡ ಶ್ರೇಯಸ್ ಪಟೇಲ್, ಪಿ ಎಲ್ ಡಿ ಬ್ಯಾಂಕ್ ಅಧ್ಯಕ್ಷ ಎಂ. ಶಂಕರ್ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಬಾಗೂರು ಮಂಜೇಗೌಡ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಾವಗಲ್ ಮಂಜುನಾಥ್, ಮುಖಂಡರಾದ ಲಲಿತ್ ರಾಘವ್ ದೀಪು, ಬಾಂಬೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ್, ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ರಘುವೀರ್ ಗೌಡ, ಮುರಳಿ ಮೋಹನ್, ಕಾಂಗ್ರೆಸ್ ಮಹಿಳಾ ನಾಯಕಿ ಗೀತಾ ಗೋಪಾಲಸ್ವಾಮಿ, ಗ್ರಾಪಂ ಅಧ್ಯಕ್ಷ ರತ್ನಮ್ಮ, ಉಪಾಧ್ಯಕ್ಷ ಹರೀಶ್, ಮುಖಂಡರಾದ ಎಚ್.ಎಂ. ಜಯರಾಮ್, ಕೆ. ಮಹಾಲಿಂಗ, ಎ. ಎಲ್. ಲಿಂಗರಾಜ್, ಕೃಷ್ಣಮೂರ್ತಿ, ನರೇಂದ್ರ ಪ್ರಸಾದ್, ಅಶೋಕ್, ದೊರೆ, ದೇವರಾಜ್, ಶಶಿಧರ್, ಜಯಪಾಲ್, ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.