ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮಕ್ಕೆ ಚಾಲನೆ
ಇಂದು ಕೇಂದ್ರ ಸರ್ಕಾರ ನೀಡುತ್ತಿರುವ ಯೋಜನೆಗಳು ಬಡವರ ಪಾಲಿಗೆ ಆಶಾ ಕಿರಣವಾಗಿವೆ ಎಂದು ಮಾಜಿ ಸಚಿವ ಡಿ.ಎನ್.ಜೀವರಾಜ್ ಹೇಳಿದರು.
ಶನಿವಾರ ಪಟ್ಟಣದಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ನರೇಂದ್ರ ಮೋದೀಜಿಯವರು ಪ್ರಧಾನಮಂತ್ರಿಯಾದ ಬಳಿಕ ಬಡವರ ಮನೆಗೆ ಉಜ್ವಲ ಯೋಜನೆಯಡಿ ಬಿಪಿಎಲ್ ಕಾರ್ಡು ದಾರ ರಿಗೆ ಉಚಿತವಾಗಿ ಗ್ಯಾಸ್ ಸಂಪರ್ಕ ನೀಡಿದ್ದಾರೆ. ಇದರಿಂದ ಮಹಿಳೆಯರಿಗೆ ಬಹಳ ಉಪಯೋಗವಾಗಿದೆ. ವರ್ಷಕ್ಕೆ 15 ಸಿಲಿಂಡರ್ಗಳನ್ನು ನೀಡಲಾಗುತ್ತಿದೆ. ಇದೀಗ 300 ರು. ಸಬ್ಸಿಡಿ ನೀಡಲಾಗುತ್ತಿದೆ. ಇದರಿಂದ ಕೇವಲ 600 ರು.ಗಳಿಗೆ ಸಿಲಿಂಡರ್ ದೊರಕುವಂತಾಗುತ್ತಿದೆ. ಇದರ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಬೇಕು. ರೈತರಿಗೆ ಡ್ರೋನ್ ಮೂಲಕ ಔಷಧಿ ಸಿಂಪಡಿಸುವ ಯೋಜನೆಯನ್ನೂ ಜಾರಿಗೆ ತರುವ ಮೂಲಕ ರೈತರಿಗೆ ವರದಾನವಾಗಿದ್ದಾರೆ.ಜೆಜೆಎಂ ಯೋಜನೆ ಮೂಲಕ ಪ್ರತಿಯೊಂದು ಮನೆಗೂ ಕುಡಿಯುವ ನೀರನ್ನು ಒದಗಿಸುವ ಕಾರ್ಯಕ್ರಮವಾಗಿದ್ದು ಇದು ಮೋದಿ ಅವರ ಕನಸಿನ ಕಾರ್ಯಕ್ರಮವಾಗಿದೆ. ಕೇಂದ್ರ ಸರ್ಕಾರ ಜಲ್ ಜೀವನ್ ಯೋಜನೆಯಡಿ ಕುಡಿಯುವ ನೀರಿನ ಯೋಜನೆ ತಂದಿದ್ದರೂ ಸಮರ್ಪಕವಾಗಿ ಈ ಯೋಜನೆ ಅನುಷ್ಠಾನಗೊಳಿಸಲು ರಾಜ್ಯ ಸರ್ಕಾರ ಸಂಪರ್ಣ ವಿಫಲವಾಗಿದೆ ಎಂದು ಆರೋಪಿಸಿದರು.
ಕಾರ್ಯಕ್ರಮದಲ್ಲಿ ಉಜ್ವಲ ಯೋಜನೆ, ಬ್ಯಾಂಕ್ ಸೌಲಭ್ಯ, ಅಂಚೆ ಇಲಾಖೆಯಿಂದ ದೊರಕುವ ಸೌಲಭ್ಯಗಳ ಮಾಹಿತಿ ನೀಡಲಾಯಿತು. ಕೆಲವು ಫಲಾನುಭವಿಗಳು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.