ದೆಹಲಿ ಗಣರಾಜ್ಯೋತ್ಸವಕ್ಕೆ ಕರ್ನಾಟಕದ ಸ್ತಬ್ಧಚಿತ್ರ ಇಲ್ಲ

KannadaprabhaNewsNetwork | Updated : Jan 10 2024, 04:24 PM IST

ಸಾರಾಂಶ

ಗಣರಾಜ್ಯೋತ್ಸವದ ಪ್ರಯುಕ್ತ ಜ.26ರಂದು ನವದೆಹಲಿಯಲ್ಲಿ ನಡೆಯಲಿರುವ ಪಥ ಸಂಚಲನದಲ್ಲಿ ಭಾಗವಹಿಸಲು ಕರ್ನಾಟಕದ ಸ್ತಬ್ಧಚಿತ್ರಕ್ಕೆ ಅನುಮತಿ ನಿರಾಕರಿಸಿದ್ದು, ಕನ್ನಡಗರಿಗೆ ನಿರಾಸೆ ಮೂಡಿಸಿದೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ಗಣರಾಜ್ಯೋತ್ಸವದ ಪ್ರಯುಕ್ತ ಜ.26ರಂದು ನವದೆಹಲಿಯಲ್ಲಿ ನಡೆಯಲಿರುವ ಪಥ ಸಂಚಲನದಲ್ಲಿ ಭಾಗವಹಿಸಲು ಕರ್ನಾಟಕದ ಸ್ತಬ್ಧಚಿತ್ರಕ್ಕೆ ಅನುಮತಿ ನಿರಾಕರಿಸಿದ್ದು, ಕನ್ನಡಗರಿಗೆ ನಿರಾಸೆ ಮೂಡಿಸಿದೆ. ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಸತೀಶ್‌ ಜಾರಕಿಹೊಳಿ, ದಿನೇಶ್‌ ಗುಂಡೂರಾವ್ ಸೇರಿದಂತೆ ವಿವಿಧ ರಾಜಕೀಯ ನಾಯಕರು ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. 

ಸತತ 14 ವರ್ಷಗಳಿಂದ ಗಣರಾಜೋತ್ಸವ ಪರೇಡ್‌ನಲ್ಲಿ ತನ್ನ ಸ್ತಬ್ಧಚಿತ್ರ ಪ್ರದರ್ಶಿಸುತ್ತಾ ಬಂದಿರುವ ಕರ್ನಾಟಕವು ಈ ಬಾರಿಯೂ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಸಿದ್ಧವಾಗಿತ್ತು. ಪ್ರತೀ ವರ್ಷ ಪರೇಡ್‌ಗೆ ಸ್ತಬ್ಧಚಿತ್ರ ಕಳುಹಿಸುವ ಜವಾಬ್ದಾರಿ ಹೊತ್ತ ರಾಜ್ಯ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಈ ಬಾರಿಯೂ ನಿಯಮಾನುಸಾರ ನಾಲ್ಕು ಸ್ತಬ್ಧಚಿತ್ರಗಳ ಪರಿಕಲ್ಪನೆಯನ್ನು ಕೇಂದ್ರ ಆಯ್ಕೆ ಸಮಿತಿಗೆ ಕಳುಹಿಸಿತ್ತು. 

ಬ್ರ್ಯಾಂಡ್‌ ಬೆಂಗಳೂರು, ನಾಲ್ವಡಿ ಕೃಷ್ಣರಾಜ ಒಡೆಯರ್‌, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (ಕೆಐಎಎಲ್‌) ಟರ್ಮಿನಲ್‌-2 ಮತ್ತು ಬೆಂಗಳೂರಿನ ಅಣ್ಣಮ್ಮದೇವಿ ದೇವಸ್ಥಾನದ ಮಾದರಿಯನ್ನು ಕೇಂದ್ರ ಆಯ್ಕೆ ಸಮಿತಿಗೆ ಕಳುಹಿಸಲಾಗಿತ್ತು. ಆದರೆ, ಆಯ್ಕೆ ಸಮಿತಿ ಬೇರೆ ರಾಜ್ಯಗಳ ಸ್ತಬ್ಧಚಿತ್ರಗಳಿಗೆ ಅವಕಾಶ ಕಲ್ಪಿಸುವ ಸಬೂಬು ಹೇಳಿ ರಾಜ್ಯಕ್ಕೆ ಅನುಮತಿ ನಿರಾಕರಿಸಿದೆ ಎಂದು ಮೂಲಗಳು ತಿಳಿಸಿವೆ. 

7 ಕೋಟಿ ಕನ್ನಡಿಗರಿಗೆ ಅಪಮಾನ-ಸಿಎಂ: ಜನವರಿ 26ರಂದು ನವದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ ಮಾಡುವ ಮೂಲಕ ಕೇಂದ್ರ ಸರ್ಕಾರ ನಾಡಿನ ಏಳು ಕೋಟಿ ಕನ್ನಡಿಗರಿಗೆ ಅಪಮಾನ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅಲ್ಲದೆ, ಈಗಲೂ ಕಾಲ ಮಿಂಚಿಲ್ಲ. ಕೇಂದ್ರ ಸರ್ಕಾರ ತಕ್ಷಣ ತನ್ನ ತಪ್ಪನ್ನು ತಿದ್ದಿಕೊಂಡು ಕರ್ನಾಟಕಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಿಕೊಂಡು ದೇಶದ ಹೆಮ್ಮೆಯ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಸ್ತಬ್ಧಚಿತ್ರ ಪ್ರದರ್ಶನದಲ್ಲಿ ನಮಗೆ ಅವಕಾಶ ನೀಡಬೇಕು ಎಂದು ಒತ್ತಾಯ ಮಾಡಿದ್ದಾರೆ.ಈ ಸಂಬಂಧ ಟ್ವೀಟ್‌ ಮಾಡಿರುವ ಅವರು, ಕಳೆದ ವರ್ಷ ಕೂಡ ಮೊದಲಿಗೆ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾರಣೆ ಮಾಡಿ ವಿವಾದದ ಸ್ವರೂಪ ಪಡೆದ ನಂತರ ಅನುಮತಿ ನೀಡಿತ್ತು. ಈ ಬಾರಿ ಮತ್ತೆ ಕನ್ನಡಿಗರನ್ನು ಅವಮಾನಿಸುವ ತನ್ನ ಚಾಳಿಯನ್ನು ಮುಂದುವರೆಸಿದೆ ಎಂದು ಹೇಳಿದ್ದಾರೆ.

ನವಕರ್ನಾಟಕದ ಅಭಿವೃದ್ಧಿಯ ದೃಷ್ಟಾರ, ಸಾಮಾಜಿಕ ನ್ಯಾಯದ ಹರಿಕಾರ, ನೀರಾವರಿ, ಬ್ಯಾಂಕಿಂಗ್‌, ಮೂಲಸೌಕರ್ಯದ ಕ್ಷೇತ್ರಗಳ ಅಭಿವೃದ್ದಿಯ ಮೂಲಕ ಮೈಸೂರನ್ನು ಒಂದು ಮಾದರಿ ರಾಜ್ಯವಾಗಿ ಕಟ್ಟಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರ ಸ್ತಬ್ಧಚಿತ್ರ, ರಾಜಧಾನಿ ಬೆಂಗಳೂರಿನ ಗ್ರಾಮದೇವತೆ, ಸುಮಾರು 10ನೇ ಶತಮಾನದಲ್ಲಿ ನಿರ್ಮಿಸಿಲ್ಪಟ್ಟ ಅಣ್ಣಮ್ಮದೇವಿಯ ದೇವಸ್ಥಾನದ ಸ್ತಬ್ಧಚಿತ್ರ ಒಳಗೊಂಡಂತೆ ಸುಮಾರು 4 ಸ್ತಬ್ಧಚಿತ್ರ ಮಾದರಿಗಳಿಗೆ ಅವಕಾಶ ಕೋರಿ ಕೇಂದ್ರಕ್ಕೆ ಮನವಿ ಮಾಡಲಾಗಿತ್ತು. ಆದರೆ ಕೇಂದ್ರದ ಆಯ್ಕೆ ಸಮಿತಿಯು ನಮ್ಮ ಮನವಿಯನ್ನು ತಿರಸ್ಕರಿಸಿ, ನಾಡಿನ ಅಸೀಮ ಸಾಧನೆ ಮತ್ತು ಮಾದರಿ ಸಾಧಕರನ್ನು ದೇಶಕ್ಕೆ ಪರಿಚಯಿಸುವ ಅವಕಾಶವನ್ನು ಕಸಿದುಕೊಂಡಿದೆ.

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದಿರುವುದು ಕೇಂದ್ರದ ಬಿಜೆಪಿ ಸರ್ಕಾರಕ್ಕೆ ನುಂಗಲಾರದ ತುತ್ತಾಗಿದೆ. ತೆರಿಗೆ ಪಾಲಿನಲ್ಲಿ ವಂಚನೆ, ಬರಪರಿಹಾರದಲ್ಲಿ ಅನ್ಯಾಯ, ಕನ್ನಡಿಗರು ಕಟ್ಟಿರುವ ಬ್ಯಾಂಕು, ಬಂದರು, ವಿಮಾನ ನಿಲ್ದಾಣಗಳ ಮಾರಾಟ ಹೀಗೆ ಹೆಜ್ಜೆಹೆಜ್ಜೆಗೂ ಕನ್ನಡಿಗರ ಮೇಲೆ ಕೇಂದ್ರ ಸರ್ಕಾರ ರಾಜಕೀಯ ದುರುದ್ದೇಶದಿಂದ ಪ್ರಹಾರ ಮಾಡುತ್ತಿದೆ. 

ಇದರ ಜೊತೆಗೆ ಈಗ ಸ್ತಬ್ಧಚಿತ್ರ ಪ್ರದರ್ಶನದಲ್ಲಿ ರಾಜ್ಯಕ್ಕೆ ಅವಕಾಶ ನಿರಾಕರಿಸಿ ನಮ್ಮ ಅಸ್ಮಿತೆಯ ಮೇಲೆ ದಾಳಿಗೆ ಇಳಿದಿದೆ. ಕನ್ನಡ-ಕನ್ನಡಿಗ ಮತ್ತು ಕರ್ನಾಟಕಕ್ಕೆ ನಿರಂತರವಾಗಿ ಕೇಂದ್ರ ಸರ್ಕಾರದಿಂದ ಆಗುತ್ತಿರುವ ಅನ್ಯಾಯದಿಂದ ಕನ್ನಡಿಗರು ಈಗಾಗಲೇ ರೋಸಿಹೋಗಿದ್ದಾರೆ. ಅವರ ತಾಳ್ಮೆಯನ್ನು ಪರೀಕ್ಷಿಸಲು ಕೇಂದ್ರ ಸರ್ಕಾರ ಹೋಗಬಾರದು ಎಂದು ಹೇಳಿದ್ದಾರೆ.

 

Share this article