ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿದ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ
ಕನ್ನಡಪ್ರಭ ವಾರ್ತೆ ಕಾರವಾರರಾಜ್ಯ ಸರ್ಕಾರಿ ನೌಕರರಿಗೆ 2026-27 ಅಂತ್ಯದೊಳಗೆ ಕೇಂದ್ರ ವೇತನ ಜಾರಿಗೆ ತರಲು ಸಂಘ ಬದ್ಧವಾಗಿದ್ದು, ಹಬ್ಬದ ಮುಂಗಡವನ್ನು ₹25 ಸಾವಿರದಿಂದ 50 ಸಾವಿರ ತನಕ ಹೆಚ್ಚಳ, ಎನ್ಪಿಎಸ್ ಬದಲಾಗಿ ಒಪಿಎಸ್ ಜಾರಿಗೆ ತರುವ ಬಗ್ಗೆ ಸಂಘ ಸತತವಾಗಿ ಪ್ರಯತ್ನಿಸುತ್ತಿದ್ದು, ರಾಜ್ಯದ ನೌಕರರು ನೆಮ್ಮದಿಯಂದ ಇರುವಂತೆ ಮಾಡುವುದು
ಸಂಘದ ಕರ್ತವ್ಯ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಹೇಳಿದರು.ಶನಿವಾರ ನಗರದ ದೈವಜ್ಞ ಕಲ್ಯಾಣ ಮಂಟಪದಲ್ಲಿ ನಡೆದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಉತ್ತರ ಕನ್ನಡ ಹಾಗೂ ಶಿರಸಿ ಶೈಕ್ಷಣಿಕ ಜಿಲ್ಲೆಯ ರಾಜ್ಯ ಸರ್ಕಾರಿ ನೌಕರರ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ರಾಜ್ಯದ ನೌಕರರಿಗೆ ಮಿಲಿಟರಿ ಕ್ಯಾಂಟಿನ್ ಮಾದರಿಯಲ್ಲಿ ಶೇ. 20ರಿಂದ 25ರಷ್ಟು ರಿಯಾಯತಿ ದರದಲ್ಲಿ ಗೃಹಪಯೋಗಿ ವಸ್ತು ಸೇರಿದಂತೆ ವಿವಿಧ ವಸ್ತುಗಳ ಖರೀದಿಗೆ ಎಂಎಸ್ಐಎಲ್ ಮುಖಾಂತರ ಕ್ಯಾಂಟಿನ್ ಯೋಜನೆ ರೂಪಿಸಲಾಗುತ್ತಿದ್ದು, ಮೊದಲ ಹಂತದಲ್ಲಿ ಬೆಂಗಳೂರಿನಲ್ಲಿ ಜಾರಿಗೆ ತಂದು ನಂತರದಲ್ಲಿ ಎಲ್ಲಾ ಜಿಲ್ಲೆಗಳಲ್ಲಿ ಜಾರಿಗೆ ತರಲಾಗುವುದು ಎಂದರು.ಸರ್ಕಾರಿ ನೌಕರರು ಕರ್ತವ್ಯದಲ್ಲಿರುವಾಗ ಮರಣ ಹೊಂದಿದರೆ ₹1 ಕೋಟಿ ವಿಮೆ ದೊರೆಯುವ ಸ್ಯಾಲರಿ ಪ್ಯಾಕೇಜ್ ಜಾರಿಗೆ ತರಲಾಗಿದೆ. ಆರೋಗ್ಯ ಸಂಜೀವಿನಿ ಯೋಜನೆ ಅ. 1ರಿಂದ ಜಾರಿಗೆ ತರಲಾಗಿದ್ದು, ಮೊದಲ ಹಂತದಲ್ಲಿ ಒಳರೋಗಿಗಳಾಗಿ ಹಾಗೂ ಮುಂದಿನ ದಿನಗಳಲ್ಲಿ ಹೊರ ರೋಗಿ ಸೌಲಭ್ಯ ಪಡೆಯಲು ಕ್ರಮವಹಿಸಲಾಗಿದೆ. ಮಹಿಳಾ ನೌಕರರು ತಮ್ಮ ತಂದೆ-ತಾಯಿಗಳನ್ನು ಈ ಯೋಜನೆಗೆ ಸೇರಿಸಲು ಅವಕಾಶ ನೀಡಲಾಗಿದ್ದು, ಈ ಯೋಜನೆಯ ಬಗ್ಗೆ ಯಾವುದೇ ಗೊಂದಲ ಬೇಡ ಎಂದರು.
ಮಹಿಳೆಯರಿಗೆ ಋತುಚಕ್ರದ ಸಂದರ್ಭದಲ್ಲಿ ಪ್ರತಿ ತಿಂಗಳು 1ರಂತೆ ವರ್ಷಕ್ಕೆ 12 ವಿಶೇಷ ಸಾಂದರ್ಭಿಕ ರಜೆಯನ್ನು ನೀಡುವಂತೆ ಕೋರಿದ ಸಂಘದ ಮನವಿಗೆ ಸ್ಪಂದಿಸಿದ ಸರ್ಕಾರವು ಸಚಿವ ಸಂಪುಟದಲ್ಲಿ ಇದಕ್ಕೆ ಅನುಮೋದನೆ ನೀಡಿದೆ. ಇನ್ನು ಕೆಲವೇ ದಿನಗಳಲ್ಲಿ ಅಧಿಕೃತ ಆದೇಶ ಸರ್ಕಾರ ಹೊರಡಿಸಲಿದ್ದು, ಇದರಿಂದ ರಾಜ್ಯದಲ್ಲಿ 2 ಲಕ್ಷ 25 ಸಾವಿರ ಮಹಿಳಾ ನೌಕರರಿಗೆ ಅನುಕೂಲವಾಗಲಿದೆ ಎಂದರು.ರಾಜ್ಯ ನೌಕರರ ಸಂಘದ ರಾಜ್ಯ ಸಂಘಟನೆಯಲ್ಲಿ, ಪಾರದರ್ಶಕತೆ, ಪ್ರಾಮಾಣಿಕತೆ ಹಾಗೂ ನೌಕರರ ಬಗ್ಗೆ ಕಳಕಳಿ, ಅಭಿಮಾನ ಇರುವ ಶಾಖೆ ಎಂದರೆ ಉತ್ತರ ಕನ್ನಡ ಜಿಲ್ಲೆ ಎಂಬುದು ಹೆಮ್ಮೆಯ ವಿಷಯ ಎಂದರು.
ಎಸ್.ಎಸ್.ಎಲ್.ಸಿ ಮತ್ತು ಪಿಯುಸಿಯಲ್ಲಿ ಗರಿಷ್ಠ ಅಂಕ ಪಡೆದ ಸರ್ಕಾರಿ ನೌಕರರ ಮಕ್ಕಳಿಗೆ ನಗದು ಬಹುಮಾನ, ಪ್ರಶಸ್ತಿ ನೀಡಿ ಗೌರವಿಸಲಾಯಿತು.ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಗಿರಿಗೌಡ ಎಚ್., ಗೌರವಾಧ್ಯಕ್ಷ ಎಸ್. ಬಸವರಾಜು, ಕಾರ್ಯಾಧ್ಯಕ್ಷ ಮಲ್ಲಿಕಾರ್ಜುನ ಬಿ. ಬಳ್ಳಾರಿ, ಹಿರಿಯ ಉಪಾಧ್ಯಕ್ಷ ಆರ್. ಮೋಹನಕುಮಾರ್, ಉಪಾಧ್ಯಕ್ಷ ಸದಾನಂದ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಂಜೀವ್ ಕುಮಾರ್ ಎಸ್. ನಾಯ್ಕ, ಶಿರಸಿ ಶೈಕ್ಷಣಿಕ ಜಿಲ್ಲೆಯ ಜಿಲ್ಲಾಧ್ಯಕ್ಷ ಕಿರಣಕುಮಾರ ಎಚ್. ನಾಯಕ್ ಮತ್ತಿತರರು ಇದ್ದರು.