1ನೇ ಕ್ಲಾಸ್‌ ಪ್ರವೇಶಕ್ಕೆ 6 ವರ್ಷ ಪೂರ್ಣ: ಮತ್ತೆ ಗೊಂದಲ?

KannadaprabhaNewsNetwork |  
Published : Feb 27, 2024, 01:31 AM IST
education | Kannada Prabha

ಸಾರಾಂಶ

ಈ ವರ್ಷದಿಂದಲೇ ಜಾರಿಗೆ ಕೇಂದ್ರದಿಂದ ರಾಜ್ಯಕ್ಕೆ ಪತ್ರ ಬಂದಿದ್ದರೂ ಮುಂದಿನ ವರ್ಷದಿಂದ ಜಾರಿಗೆ ರಾಜ್ಯ ಸರ್ಕಾರದ ಆದೇಶ ನೀಡಿರುವುದು ಗೊಂದಲಕ್ಕೆ ಕಾರಣವಾಗಿದೆ.

ಲಿಂಗರಾಜು ಕೋರಾಕನ್ನಡಪ್ರಭ ವಾರ್ತೆ ಬೆಂಗಳೂರು

ರಾಜ್ಯದಲ್ಲಿ ಒಂದನೇ ತರಗತಿ ಪ್ರವೇಶಕ್ಕೆ ಮಕ್ಕಳ ವಯಸ್ಸು ಕಡ್ಡಾಯವಾಗಿ ಕನಿಷ್ಠ 6 ವರ್ಷ ಪೂರ್ಣಗೊಂಡಿರಬೇಕೆಂಬ ನಿಯಮ 2025-26ನೇ ಸಾಲಿನಿಂದ ಜಾರಿಗೆ ಬರಲಿದೆ ಎಂದು ರಾಜ್ಯ ಸರ್ಕಾರ ಈಗಾಗಲೇ ಎರಡು ವರ್ಷದ ಹಿಂದೆಯೇ ಆದೇಶಿಸಿದೆ. ಆದರೆ, ಇದೀಗ ಕೇಂದ್ರ ಸರ್ಕಾರ ಈ ನಿಯಮವನ್ನು 2024-25ನೇ ಸಾಲಿನಿಂದಲೇ ಜಾರಿಗೊಳಿಸುವಂತೆ ಸೂಚಿಸಿ ಮತ್ತೊಂದು ಪತ್ರ ರವಾನಿಸಿದೆ.

ಕೇಂದ್ರದ ಈ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದು, ಪೋಷಕರ ವಲಯದಲ್ಲಿ 1ನೇ ತರಗತಿ ಪ್ರವೇಶಾತಿಗೆ ಸಂಬಂಧಿಸಿದ ವಯೋಮಿತಿ ಸಂಬಂಧ ಮತ್ತೆ ಗೊಂದಲ ಸೃಷ್ಟಿಸಿದೆ. ಕೇಂದ್ರದಿಂದ ಪತ್ರ ಬಂದು 10 ದಿನ ಕಳೆದರೂ ರಾಜ್ಯ ಶಿಕ್ಷಣ ಇಲಾಖೆಯು ಈ ಬಗ್ಗೆ ಪೋಷಕರಿಗೆ ಯಾವುದೇ ಸ್ಪಷ್ಟನೆ ನೀಡದಿರುವುದಕ್ಕೆ ಸಾರ್ವಜನಿಕ ವಲಯದಲ್ಲಿ ಆಕ್ಷೇಪ, ಅಸಮಾಧಾನ ವ್ಯಕ್ತವಾಗಿದೆ.

ಕೇಂದ್ರ ಸರ್ಕಾರ ಕೆಲ ದಿನಗಳ ಹಿಂದೆ ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಶಿಕ್ಷಣ ಇಲಾಖೆಗಳಿಗೆ ಪತ್ರ ಕಳುಹಿಸಿ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ (ಎನ್‌ಇಪಿ) ಜೊತೆ ವಯಸ್ಸನ್ನು ಹೊಂದಿಸಲು 1ನೇ ತರಗತಿಗೆ ಪ್ರವೇಶ ಪಡೆಯುವ ಮಕ್ಕಳ ವಯಸ್ಸು ಆರು ವರ್ಷ ಅಥವಾ ಅದಕ್ಕಿಂತ ಮೇಲ್ಪಟ್ಟಿರಬೇಕು ಎಂಬ ನಿಯಮವನ್ನು ಮುಂಬರುವ ಶೈಕ್ಷಣಿಕ ಸಾಲಿನಿಂದಲೇ ಜಾರಿಗೊಳಿಸುವಂತೆ ಸೂಚಿಸಿದೆ. ಕೇಂದ್ರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವಾಲಯದ ಜಂಟಿ ಕಾರ್ಯದರ್ಶಿ (ಎಸ್‌ಎಸ್‌.ಐ ಮತ್ತು ಎಇ) ಅರ್ಚನಾ ಶರ್ಮಾ ಅವಸ್ಥಿ ಅವರು ಇದೇ ಫೆ.15ರಂದು ಬರೆದಿರುವ ಪತ್ರ ಕರ್ನಾಟಕ ಸರ್ಕಾರಕ್ಕೆ ಬಂದಿದೆ.

ರಾಜ್ಯದಲ್ಲಿ ಎಲ್‌ಕೆಜಿಗೂ ವಯೋಮಿತಿ:

‘2025-26ನೇ ಶೈಕ್ಷಣಿಕ ಸಾಲಿನಿಂದ ಅನ್ವಯಿಸುವಂತೆ’ ಆಯಾ ಶೈಕ್ಷಣಿಕ ವರ್ಷದ ಜೂನ್‌ 1ನೇ ತಾರೀಖಿಗೆ ಕಡ್ಡಾಯವಾಗಿ 6 ವರ್ಷಗಳು ಪೂರ್ಣಗೊಂಡಿರುವ ಮಗುವನ್ನು ಮಾತ್ರ ಒಂದನೇ ತರಗತಿಗೆ ದಾಖಲಿಸಲು ವಯೋಮಿತಿಯನ್ನು ನಿಗದಿಪಡಿಸಿ ರಾಜ್ಯ ಸರ್ಕಾರ 2022ರ ನವೆಂಬರ್‌ 15ರಂದು ಆದೇಶ ಮಾಡಿದೆ.

ಅಲ್ಲದೆ, ಎಲ್‌ಕೆಜಿ-ಯುಕೆಜಿಗೆ ಮಕ್ಕಳನ್ನು ದಾಖಲಿಸುವಾಗ ಅವರು 1ನೇ ತರಗತಿಗೆ ಬರುವಾಗ 6 ವರ್ಷ ಪೂರ್ಣಗೊಂಡಿರುವಂತೆ ನೋಡಿಕೊಳ್ಳಲು ಸಮಗ್ರ ಶಿಕ್ಷಣ ಕರ್ನಾಟಕದ ರಾಜ್ಯ ಯೋಜನಾ ನಿರ್ದೇಶಕರು ಕಳೆದ ವರ್ಷದ ಏಪ್ರಿಲ್‌ 27ರಂದು 2023-24ನೇ ಸಾಲಿನಿಂದ ಎಲ್‌ಕೆಜಿ ತರಗತಿಯ ದಾಖಲಾತಿಗೆ ಆಯಾ ಶೈಕ್ಷಣಿಕ ಸಾಲಿನ ಜೂನ್‌ 1ನೇ ತಾರೀಖಿಗೆ ಮಗುವಿನ ವಯಸ್ಸು 4 ವರ್ಷ ಪೂರ್ಣಗೊಂಡಿರಬೇಕೆಂದು ಜ್ಞಾಪನ ಪತ್ರ ಹೊರಡಿಸಿದ್ದಾರೆ. ಇನ್ನು ಈ ನಿರ್ದೇಶನವನ್ನು ಪ್ರಶ್ನಿಸಿ ಕೆಲವರು ಹೈಕೋರ್ಟ್‌ನಲ್ಲಿ ರಿಟ್‌ ಅರ್ಜಿ ಸಲ್ಲಿಸಿದ್ದರಾದರೂ ಅದನ್ನು ನ್ಯಾಯಾಲಯ ತಿರಸ್ಕರಿಸಿತ್ತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪಿಎಂ ಹೇಳ್ತಿರೋ ಆರೆಂಜ್‌ ಆರ್ಥಿಕತೆ ರಾಜ್ಯದಲ್ಲಿ 2016ಲ್ಲೇ ನೀತಿ ಜಾರಿ: ಡಿಕೆ
ಸರ್ಕಾರಕ್ಕೆ ನಿಧಿ ನೀಡಿದ್ದ ಲಕ್ಕುಂಡಿ ಪ್ರಜ್ವಲ್‌ಗೆ ಸರ್ಕಾರದಿಂದ ಸಿಕ್ತು ಬಂಪರ್ ಗಿಫ್ಟ್