ಭಾರತಪ್ರಪಂಚವಿಶೇಷರಾಜಕೀಯಮನರಂಜನೆಅಪರಾಧಕ್ರೀಡೆಕರ್ನಾಟಕಇ- ಪೇಪರ್

ಕೇಂದ್ರದ ಯೋಜನೆಗಳು ಅರ್ಹರಿಗೆ ತಲುಪುತ್ತಿವೆ: ಸಂಸದ ಸಿದ್ದೇಶ್ವರ

KannadaprabhaNewsNetwork | Published : Jan 11, 2024 1:31 AM

ಕೇಂದ್ರ ಸರ್ಕಾರದ ಪ್ರತಿಯೊಂದು ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪುತ್ತಿದ್ದು, 2024ರ ಲೋಕಸಭೆ ಚುನಾವಣೆಯಲ್ಲಿ ಮತ್ತೊಮ್ಮೆ ಭಾರಿ ಬಹುಮತದಿಂದ ಬಿಜೆಪಿ ಗೆದ್ದು, ನರೇಂದ್ರ ಮೋದಿ ಪ್ರಧಾನಿಯಾಗಿ ದೇಶದ ಚಿತ್ರಣವೇ ಸಂಪೂರ್ಣ ಬದಲಾಗಿ ವಿಶ್ವದ ಮುಂಚೂಣಿ ರಾಷ್ಟ್ರವಾಗಿ ಭಾರತ ಹೊರ ಹೊಮ್ಮಲಿದೆ.

ಹಲವು ಯೋಜನೆಗಳಿಂದ 13 ಕೋಟಿಗೂ ಅಧಿಕ ಜನರು ಬಡತನ ರೇಖೆಯಿಂದ ಹೊರಕ್ಕೆ

ಕನ್ನಡಪ್ರಭ ವಾರ್ತೆ ದಾವಣಗೆರೆ

ರಾಜ್ಯ ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ಯೋಜನೆಗಳು ಜನರಿಗೆ ತಲುಪುತ್ತಿಲ್ಲ. ಆದರೆ, ಕೇಂದ್ರ ಸರ್ಕಾರದ ಸ್ವನಿಧಿ ಸೇರಿದಂತೆ ಹಲವು ಯೋಜನೆಗಳು ನಿಜವಾದ, ಅರ್ಹ ಫಲಾನುಭವಿಗಳಿಗೆ ತಲುಪುತ್ತಿದ್ದು, ಇದರಿಂದ ದೇಶದ 13 ಕೋಟಿಗೂ ಅಧಿಕ ಜನರು ಬಡತನ ರೇಖೆಯಿಂದ ಹೊರಬರಲು ಸಾಧ್ಯವಾಗಿದೆ ಎಂದು ಸಂಸದ ಡಾ.ಜಿ.ಎಂ.ಸಿದ್ದೇಶ್ವರ ತಿಳಿಸಿದರು.

ನಗರದ ನಿಟುವಳ್ಳಿಯಲ್ಲಿ ಬುಧವಾರ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕೇಂದ್ರ ಸರ್ಕಾರದ ಪ್ರತಿಯೊಂದು ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪುತ್ತಿದ್ದು, 2024ರ ಲೋಕಸಭೆ ಚುನಾವಣೆಯಲ್ಲಿ ಮತ್ತೊಮ್ಮೆ ಭಾರಿ ಬಹುಮತದಿಂದ ಬಿಜೆಪಿ ಗೆದ್ದು, ನರೇಂದ್ರ ಮೋದಿ ಪ್ರಧಾನಿಯಾಗಿ ದೇಶದ ಚಿತ್ರಣವೇ ಸಂಪೂರ್ಣ ಬದಲಾಗಿ ವಿಶ್ವದ ಮುಂಚೂಣಿ ರಾಷ್ಟ್ರವಾಗಿ ಭಾರತ ಹೊರ ಹೊಮ್ಮಲಿದೆ ಎಂದರು.

ಬೀದಿ ಬದಿ ವ್ಯಾಪಾರಸ್ಥರ ಕಲ್ಯಾಣಕ್ಕಾಗಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೆ ತಂದ ಪ್ರಧಾನ ಮಂತ್ರಿ ಸ್ವನಿಧಿ ಯೋಜನೆಯು ನಗರ ಮತ್ತು ಪಟ್ಟಣ ಪ್ರದೇಶಗಳ ಬೀದಿ ಬದಿ ವ್ಯಾಪಾರಸ್ಥರಿಗೆ ವರದಾನವಾಗಿದೆ. ನಗರ ಪ್ರದೇಶದ ನಿವಾಸಿಗಳಿಗೆ ಕೇಂದ್ರವು ಜಾರಿಗೆ ತಂದ ಪ್ರಧಾನ ಮಂತ್ರಿ ನಗರ ವಸತಿ ಯೋಜನೆ, ಸ್ವನಿಧಿ, ಸ್ಟಾಂಡ್ ಅಪ್ ಇಂಡಿಯಾ, ಅಮೃತ್ ಯೋಜನೆ, ಉಜ್ವಲಾ, ಪ್ರಧಾನ ಮಂತ್ರಿ ಜನೌಷಧಿ ಸೇರಿ 50ಕ್ಕೂ ಯೋಜನೆಗಳ ಜನರು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು.

ಹೊರಗುಳಿದವರ ಯೋಜನೆ ವ್ಯಾಪ್ತಿಗೆ ತನ್ನಿ:

ಗ್ರಾಮೀಣ ಪ್ರದೇಶವೂ ಸೇರಿ ನಗರ, ಪಟ್ಟಣ ಪ್ರದೇಶದಲ್ಲಿ ಪಿಎಂ ವಿಶ್ವಕರ್ಮ, ಮುದ್ರಾ, ಜನಧನ್‌, ಆಯುಷ್ಮಾನ್ ಭಾರತ್ ಸೇರಿ 70 ಯೋಜನೆಗಳನ್ನು ಜನರ ಕಲ್ಯಾಣಕ್ಕಾಗಿ ಕೇಂದ್ರವು ಜಾರಿಗೊಳಿಸಿದೆ. ಯೋಜನೆಗಳನ್ನು ಜನರು ಸದ್ಭಳಕೆ ಮಾಡಿ ಆರ್ಥಿಕವಾಗಿ ಸಬಲರಾಗಬೇಕು. ಕೇಂದ್ರದ ಯೋಜನೆಗಳ ಬಗ್ಗೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಜನರಿಗೆ ಸೌಲಭ್ಯ, ಯೋಜನೆಗಳ ಬಗ್ಗೆ ಮನವರಿಕೆ ಮಾಡಿಕೊಡಬೇಕು. ಯೋಜನೆಯಿಂದ ಹೊರಗುಳಿದವರ ಯೋಜನೆ ವ್ಯಾಪ್ತಿಗೆ ತರಬೇಕು ಎಂದು ಸೂಚಿಸಿದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಎಸ್‌.ಜಗದೀಶ, ಪಾಲಿಕೆ ವಿಪಕ್ಷ ನಾಯಕ ಕೆ.ಪ್ರಸನ್ನಕುಮಾರ, ಸದಸ್ಯರಾದ ಮಾಜಿ ಮೇಯರ್ ಡಿ.ಎಸ್.ಉಮಾ ಪ್ರಕಾಶ, ಎಸ್.ಟಿ.ವೀರೇಶ, ಕೆ.ಎಂ.ವೀರೇಶ, ಮಂಜಾನಾಯ್ಕ, ದೂಡಾ ಮಾಜಿ ಅಧ್ಯಕ್ಷರಾದ ಕೆ.ಎಂ.ಸುರೇಶ, ಎ.ವೈ.ಪ್ರಕಾಶ, ಲೀಡ್ ಬ್ಯಾಂಕ್ ವ್ಯವಸ್ಥಾಪಕ ಪ್ರಕಾಶ, ಬಿಜೆಪಿ ಮುಖಂಡರಾದ ಎಲ್.ಎನ್.ಕಲ್ಲೇಶ, ಮಾಜಿ ಉಪ ಮೇಯರ್ ಪಿ.ಎಸ್.ಜಯಣ್ಣ, ಕೊಟ್ರೇಶಗೌಡ, ಪಿ.ಎಸ್.ಬಸವರಾಜ ಇತರರಿದ್ದರು. ಈ ವೇಳೆ ಉಜ್ವಲ ಸೇರಿ ವಿವಿಧ ಯೋಜನೆಗಳ ಫಲಾನುಭ‍ವಿಗಳಿಗೆ ಸಂಸದ ಡಾ.ಜಿ.ಎಂ.ಸಿದ್ದೇಶ್ವರ ಸೌಲಭ್ಯ ವಿತರಿಸಿದರು.

ನಯಾಪೈಸೆ ಹಣ ಕೊಡಬೇಕಾಗಿಲ್ಲ

ಕೇಂದ್ರ ಸರ್ಕಾರದ ಯಾವುದೇ ಯೋಜನೆಗಳ ಪಡೆಯಲು ಸಾರ್ವಜನಿಕರು, ಫಲಾನುಭವಿಗಳು ಯಾರಿಗೂ ನಯಾಪೈಸೆ ಹಣ ಕೊಡಬೇಕಾಗಿಲ್ಲ. ಆದರೆ, ಜಿಲ್ಲೆಯ ಕೆಲವು ಸೇವಾ ಕೇಂದ್ರಗಳಲ್ಲಿ ಜನರಿಂದ ಹಣ ಪಡೆಯುತ್ತಿರುವ ಬಗ್ಗೆ ದೂರು ಕೇಳಿ ಬರುತ್ತಿವೆ. ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡುತ್ತೇನೆ. ಸಾರ್ವಜನಿಕರು ಕೇಂದ್ರ ಸರ್ಕಾರದ 70ಕ್ಕೂ ಹೆಚ್ಚು ಯೋಜನೆಗಳ ಬಗ್ಗೆ ಅರಿತು ಆರ್ಥಿಕ ಸಬಲತೆ ಹೊಂದಬೇಕು.

ಡಾ.ಜಿ.ಎಂ.ಸಿದ್ದೇಶ್ವರ, ಸಂಸದ

........