ಸಿರಿಗೆರೆ: ತಾಲೂಕಿನ ವಿವಿಧ ಗ್ರಾಮ ಪಂಚಾಯತಿಗಳಿಗೆ ದಿಢೀರ್ ಭೇಟಿ ನೀಡಿದ ಜಿಪಂ ಸಿಇಒ ಎಸ್.ಜೆ.ಸೋಮಶೇಖರ್ ಅವರು ಜಾಬ್ ಕಾರ್ಡ್ ಹೊಂದಿರುವ ಬಡ ಕುಟುಂಬಗಳಿಗೆ ಬೇಡಿಕೆ ಆಧಾರದಲ್ಲಿ ನರೇಗಾ ಯೋಜನೆಯಡಿ ತಕ್ಷಣ ಉದ್ಯೋಗ ನೀಡಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.ಚಿತ್ರದುರ್ಗ ತಾಲೂಕಿನ ಹುಲ್ಲೂರು ಮತ್ತು ಗೊಡಬನಾಳ್ ಗ್ರಾಮ ಪಂಚಾಯಿತಿಗಳಿಗೆ ಹಾಗೂ ಪಂಡರಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಜಿ.ಪಂ. ಸಿಇಒ ಸೋಮಶೇಖರ್ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಹುಲ್ಲೂರು ಮತ್ತು ಗೊಡಬನಾಳ್ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ, ಗ್ರಾಮ ಪಂಚಾಯತಿ ಜನಪ್ರತಿನಿಧಿಗಳು ಮತ್ತು ಸಾರ್ವಜನಿಕರೊಂದಿಗೆ ಗ್ರಾಮಗಳ ಅಭಿವೃದ್ಧಿ ಬಗ್ಗೆ ಸಂವಾದ ನಡೆಸಿದರು.
ಈ ವೇಳೆ ಸಾರ್ವಜನಿಕರು, ಪರಿಶಿಷ್ಟ ಜಾತಿ ಜನಾಂಗದವರಿಗೆ ರುದ್ರಭೂಮಿ ನೀಡುವಂತೆ ಮನವಿ ಮಾಡಿಕೊಂಡರು. ಕುರುಬರಹಳ್ಳಿ ಗ್ರಾಮದಲ್ಲಿ ಅಂಗನವಾಡಿ ಕೇಂದ್ರ ಪ್ರಸ್ತುತ ಬಾಡಿಗೆಯಲ್ಲಿ ಕಟ್ಟಡದಲ್ಲಿ ನಡೆಸುತ್ತಿದ್ದು, ಸರ್ಕಾರಿ ಜಾಗ ನೀಡುವಂತೆ ಗ್ರಾಮಸ್ಥರು ಕೋರಿದರು. ನಂತರ ಪಂಡರಹಳ್ಳಿ ಮತ್ತು ಗೊಡಬನಾಳ್ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ, ಪರಿಶೀಲಿಸಿದರು. ಅದರಲ್ಲಿ ಮುಖ್ಯವಾಗಿ ಔಷಧಿಗಳ ದಾಸ್ತಾನು ಕೊಠಡಿಗಳು, ಚುಚ್ಚುಮದ್ದು ನೀಡುವ ಕೊಠಡಿಗಳು, ಪ್ರಯೋಗ ಶಾಲಾ ಕೊಠಡಿಗಳಿಗೆ ಭೇಟಿ ನೀಡಿ ಪರಿಶೀಲಿಸಿ, ಮಾಹಿತಿ ಪಡೆದುಕೊಂಡ ಅವರು, ವೈದ್ಯಾಧಿಕಾರಿಗಳು, ನರ್ಸ್ ಮತ್ತು ಸಿಬ್ಬಂದಿಗಳೊಂದಿಗೆ ಸಂವಾದ ನಡೆಸಿದರು.
ಸ್ವತಃ ಜಿ.ಪಂ. ಸಿಇಓ ಅವರು ಬಿ.ಪಿಯನ್ನು ವೈದ್ಯಾಧಿಕಾರಿಗಳಿಂದ ಪರಿಶೀಲಿಸಿಕೊಂಡು, ಅಲ್ಲೇ ಇದ್ದ ಹೊರ ರೋಗಿಗಳ ಆರೋಗ್ಯ ವಿಚಾರಿಸಿದರು. ಸರ್ಕಾರಿ ಆಸ್ಪತ್ರೆಗಳಲ್ಲಿ ಎಲ್ಲಾ ಸೌಲಭ್ಯಗಳಿದ್ದು, ಸುತ್ತ-ಮುತ್ತಲಿನ ಗ್ರಾಮಸ್ಥರು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವಂತೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ಹುಲ್ಲೂರು ಗ್ರಾಪಂ ಅಧ್ಯಕ್ಷೆ ಪರ್ವೀನ್ ಬಾನು, ಉಪಾಧ್ಯಕ್ಷ ಬಸವರಾಜಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರೇಣುಪ್ರಸಾದ್, ಚಿತ್ರದುರ್ಗ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರವಿಕುಮಾರ್, ಸಹಾಯಕ ನಿರ್ದೇಶಕ (ನರೇಗಾ) ಯರ್ರಿಸ್ವಾಮಿ, ಗ್ರಾಪಂ ಸದಸ್ಯರು, ಪಿಡಿಒಗಳು, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರು, ಸಿಬ್ಬಂದಿ ಇದ್ದರು.