ಕುಶಾಲನಗರ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ 805 ವಿದ್ಯಾರ್ಥಿಗಳು ವ್ಯಾಸಂಗ: ಡಾ. ಕೆ ಐ ಪರಶಿವಮೂರ್ತಿ
ಕನ್ನಡಪ್ರಭ ವಾರ್ತೆ ಕುಶಾಲನಗರಕುಶಾಲನಗರ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ 2025-26ನೇ ಪ್ರಸ್ತುತ ಸಾಲಿನಲ್ಲಿ ಪ್ರಥಮ ವರ್ಷದ ಇಂಜಿನಿಯರಿಂಗ್ ಕೋರ್ಸ್ ಗಳಿಗೆ ಸಿಇಟಿಯ ಕೌನ್ಸಿಲಿಂಗ್ ಮೂಲಕ ಪ್ರವೇಶವಕಾಶ ಕಲ್ಪಿಸಲಾಗಿದೆ ಎಂದು ಕುಶಾಲನಗರ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ. ಕೆ ಐ ಪರಶಿವಮೂರ್ತಿ ತಿಳಿಸಿದ್ದಾರೆ. ಅವರು ಕಾಲೇಜಿನ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು, ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳ ಪೈಕಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಕುಶಾಲನಗರ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಸ್ತುತ ಸಿವಿಲ್, ಮೆಕ್ಯಾನಿಕಲ್, ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯೂನಿಕೇಶನ್ (ಇ ಅಂಡ್ ಸಿ )ವಿಭಾಗ ಹಾಗೂ ಕಂಪ್ಯೂಟರ್ ಸೈನ್ಸ್ ವಿಭಾಗ ಸೇರಿದಂತೆ ಒಟ್ಟು 4 ಕೋರ್ಸ್ ಗಳಿಗೆ ತಲಾ 60 ವಿದ್ಯಾರ್ಥಿಗಳಂತೆ ಪ್ರವೇಶವಕಾಶ ಕಲ್ಪಿಸಲಾಗಿದೆ. ಪ್ರಸ್ತುತ ಕಾಲೇಜಿನಲ್ಲಿ ಪ್ರಸ್ತುತ 805 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ ಎಂದು ತಿಳಿಸಿದರು.ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ತೇರ್ಗಡೆ ಹೊಂದಿ ಸಿಇಟಿ ಕೌನ್ಸಿಲಿಂಗ್ ಮೂಲಕ ಸ್ಥಳ ಆಯ್ಕೆ ಮಾಡಿ ಕೊಳ್ಳುವ ವಿದ್ಯಾರ್ಥಿಗಳು ಪ್ರಥಮ ಆದ್ಯತೆ ಮೇರೆಗೆ ಕೊಡಗು ಜಿಲ್ಲೆ ಮತ್ತು ನೆರೆಯ ಜಿಲ್ಲೆಗಳ ಅಭ್ಯರ್ಥಿಗಳು ಕುಶಾಲನಗರ ಸರ್ಕಾರಿ ಇಂಜಿನಿಯರಿಂಗ್ ಕಾಲೇಜನ್ನು ಆಯ್ಕೆ ಮಾಡಿಕೊಳ್ಳುವಂತೆ ಪ್ರಾಂಶುಪಾಲರು ಮನವಿ ಮಾಡಿದರು.
ಉತ್ತಮ ತಾಂತ್ರಿಕ ಸೌಲಭ್ಯಗಳು: ಸರ್ಕಾರಿ ಕಾಲೇಜುಗಳ ಪೈಕಿ ಉತ್ತಮ ಮೂಲ ಸೌಲಭ್ಯ ಹಾಗೂ ತಾಂತ್ರಿಕ ಸೌಲಭ್ಯಗಳು, ಸುಸಜ್ಜಿತ ಸೆಮಿನಾರ್ ಹಾಲ್ ಗಳು, ಪ್ರಯೋಗಾಲಯಗಳು ಸೇರಿದಂತೆ ಕಂಪ್ಯೂಟರ್ ಗಳ ತರಬೇತಿ ಹಾಗೂ ಗ್ರಂಥಾಲಯ ಸೌಲಭ್ಯಗಳನ್ನು ಒಳಗೊಂಡಂತೆ ನುರಿತ ಹಿರಿಯ ಬೋಧಕ ವರ್ಗದವರನ್ನು ಹೊಂದಿರುವ ಈ ಕಾಲೇಜು ಕೊಡಗಿನ ಪ್ರತಿಷ್ಠಿತ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಆಗಿದ್ದು, ಸಾವಿರಾರು ವಿದ್ಯಾರ್ಥಿಗಳು ಇಂಜಿನಿಯರಿಂಗ್ ಪದವಿ ಪಡೆದು ಉತ್ತಮ ಭವಿಷ್ಯ ರೂಪಿಸಿಕೊಂಡಿದ್ದಾರೆ ಎಂದು ಪ್ರಾಂಶುಪಾಲರಾದ ಡಾ. ಕೆ.ಐ ಪರಶಿವಮೂರ್ತಿ ತಿಳಿಸಿದರು.ಶೇಕಡಾ 90ರಷ್ಟು ಕೃಷಿಕರ ಗ್ರಾಮಾಂತರ ಬಡ ಮಧ್ಯಮ ವರ್ಗದ ವಿದ್ಯಾರ್ಥಿಗಳು ಕಾಲೇಜಿನಲ್ಲಿ ಉನ್ನತ ಶಿಕ್ಷಣ ಪಡೆಯುತ್ತಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.ಕಾಲೇಜಿನ ಸರ್ವತೋಮುಖ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಬೇಕಾಗಿದೆ ಎಂದು ಅವರು ಕೋರಿದರು. ಜಿಲ್ಲೆಯ ಹಾಗೂ ಸ್ಥಳೀಯ ಅರ್ಹ ವಿದ್ಯಾರ್ಥಿಗಳು ಕಾಲೇಜಿನಲ್ಲಿ ವ್ಯಾಸಂಗ ಮಾಡುವ ಮೂಲಕ ಸರಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳ ಬೇಕಾಗಿದೆ ಎಂದು ಹೇಳಿದರು.ತರಬೇತಿ ಮತ್ತು ಪ್ಲೇಸ್ಮೆಂಟ್: ಕಳೆದ 18 ವರ್ಷಗಳ ಹಿಂದೆ ಆರಂಭಗೊಂಡ ಕುಶಾಲನಗರ ಸರಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಅಂತಿಮ ವರ್ಷದ ಕೋರ್ಸ್ ಪೂರೈಸುವ ವಿದ್ಯಾರ್ಥಿಗಳಿಗೆ ಮುಂದಿನ ಉದ್ಯೋಗ ಕಂಡುಕೊಳ್ಳುವ ದಿಸೆಯಲ್ಲಿ ಕಾಲೇಜಿನಲ್ಲಿ ಟಿ.ಸಿ.ಎಸ್ ಕಂಪನಿ, ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ ಸೇರಿದಂತೆ ಇನ್ನಿತರ ಕಂಪನಿಗಳಿಂದ ನಿಶ್ಚಿತ ಉದ್ಯೋಗ ಕೊಡುವ ವ್ಯವಸ್ಥೆ ಮತ್ತು ತರಬೇತಿಗಾಗಿ ಆಯ್ಕೆ ಮಾಡಿಕೊಳ್ಳುವ ಕಾರ್ಯವನ್ನು ಪ್ರತಿ ವರ್ಷ ನಡೆಸಲಾಗುತ್ತಿದೆ. ಕಳೆದ ವರ್ಷ ನಡೆದ ಪ್ಲೇಸ್ಮೆಂಟ್ ಆಯ್ಕೆ ಪ್ರಕ್ರಿಯೆಯಲ್ಲಿ 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿವಿಧ ಜಾಗತಿಕ ಹಾಗೂ ಖಾಸಗಿ ಕಂಪನಿಗಳಿಗೆ ನೇಮಕಗೊಂಡು ಉದ್ಯೋಗ ಮಾಡುತ್ತಿದ್ದಾರೆ ಎಂದು ಮಾಹಿತಿ ಒದಗಿಸಿದರು.ಹಿಂದಿನ ಶಾಸಕರು, ಮಾಜಿ ಸಚಿವರಾದ ಎಂ ಪಿ ಅಪ್ಪಚ್ಚು ರಂಜನ್ ಅವರ ಅವಧಿಯಲ್ಲಿ ಎಲ್ಲಾ ರೀತಿಯ ಸಹಕಾರ ನೀಡಿದ್ದು, ಇದೀಗ ಮಡಿಕೇರಿ ಕ್ಷೇತ್ರದ ಶಾಸಕರಾದ ಡಾ ಮಂತರ್ ಗೌಡ ಅವರು ಕಾಲೇಜಿನ ಅಭಿವೃದ್ಧಿಗಾಗಿ ಎಲ್ಲಾ ರೀತಿಯ ಸಹಕಾರ ನೀಡುತ್ತಿದ್ದಾರೆ. ತಮ್ಮ ಬೇಡಿಕೆಗಳನ್ನು ತಕ್ಷಣ ಈಡೇರಿಸಿ ಬಹುತೇಕ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿರುವ ಬಗ್ಗೆ ಮಾಹಿತಿ ನೀಡಿದರು.ಉತ್ತಮ ಫಲಿತಾಂಶ:
ಕುಶಾಲನಗರ ಸರಕಾರಿ ಇಂಜಿನಿಯರಿಂಗ್ ಕಾಲೇಜಿಗೆ ಸತತವಾಗಿ ಎಲ್ಲಾ ವಿಭಾಗಗಳಿಗೂ ಅತ್ಯುತ್ತಮ ಫಲಿತಾಂಶ ಲಭಿಸುತ್ತಿದ್ದು, ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. 2024-25ನೇ ಸಾಲಿನಲ್ಲಿ ನಡೆದ ಅಂತಿಮ ವರ್ಷದ ಸಿವಿಲ್ ವಿಭಾಗದ ವಿ.ಜೆ. ಜಾಸ್ ಲೀನಾ ಎಂಬ ವಿದ್ಯಾರ್ಥಿನಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯಕ್ಕೆ 2ನೇ ಸ್ಥಾನ ಪಡೆದು ಕಾಲೇಜಿಗೆ ಕೀರ್ತಿ ತಂದಿರುತ್ತಾರೆ ಎಂದು ಸಿವಿಲ್ ವಿಭಾಗದ ಮುಖ್ಯಸ್ಥರಾದ ಡಾ. ಎನ್ ಎಸ್ ಸತೀಶ್ ಅವರು ತಿಳಿಸಿದರು.ಗ್ರಾಮಾಂತರ ಪ್ರದೇಶದ ಹಾಗೂ ಬಡ ವಿದ್ಯಾರ್ಥಿಗಳ ಆಶಾಕಿರಣವಾಗಿರುವ ಈ ಇಂಜಿನಿಯರಿಂಗ್ ಕಾಲೇಜಿನಲ್ಲಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ವೈಫೈ ಹಾಗೂ ಸ್ಮಾರ್ಟ್ ಕ್ಲಾಸ್ ನಂತಹ ತಾಂತ್ರಿಕ ವ್ಯವಸ್ಥೆಯೊಂದಿಗೆ ಉತ್ತಮ ಗುಣಮಟ್ಟದ ತಾಂತ್ರಿಕ ಶಿಕ್ಷಣ ನೀಡಲಾಗುತ್ತಿದೆ . ಉತ್ತಮ ತಾಂತ್ರಿಕ ಸೌಲಭ್ಯಗಳನ್ನು ಹೊಂದಿರುವ ಕಾಲೇಜು ಭವಿಷ್ಯದಲ್ಲಿ ಮತ್ತಷ್ಟು ಎತ್ತರಕ್ಕೆ ಬೆಳೆಯಲು ಎಲ್ಲರ ಸಹಕಾರದ ಅಗತ್ಯತೆ ಇದೆ ಎಂದರು. ಸಿಇಟಿ ಕೌನ್ಸಿಲಿಂಗ್ ನಲ್ಲಿ ಕೊಡಗು ಜಿಲ್ಲೆ ಸೇರಿದಂತೆ ನೆರೆಯ ಹಾಗೂ ಇತರೆ ಜಿಲ್ಲೆಗಳ ವಿದ್ಯಾರ್ಥಿಗಳು ತಮ್ಮ ಕಾಲೇಜನ್ನು ಆಯ್ಕೆ ಮಾಡಿಕೊಳ್ಳಲು ಮನವಿ ಮಾಡಿದರು.ದೈಹಿಕ ಶಿಕ್ಷಣ ವಿಭಾಗದ ಮುಖ್ಯಸ್ಥ ಎನ್.ರಮೇಶ್ ಮಾತನಾಡಿ, ಕಾಲೇಜಿನಲ್ಲಿ ಕ್ರೀಡೆ ಮತ್ತು ಎನ್.ಎಸ್.ಎಸ್.ಚಟುವಟಿಕೆಗಳಿಗೂ ಆದ್ಯತೆ ನೀಡಲಾಗುತ್ತಿದೆ ಎಂದರು. ಸರಕಾರ ಎಲ್ಲಾ ಸೌಲಭ್ಯಗಳನ್ನು ಕಲ್ಪಿಸಿದೆ ಎಂದರು.ಹಾಸ್ಟೆಲ್ ಸೌಲಭ್ಯ:ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕಾಲೇಜು ಆವರಣದಲ್ಲಿ ಬಾಲಕರು ಮತ್ತು ಬಾಲಕಿಯರಿಗೆ ಪ್ರತ್ಯೇಕ ವಸತಿ ನಿಲಯ ಸೌಲಭ್ಯಗಳಿದ್ದು ವಿದ್ಯಾರ್ಥಿಗಳು ಇದರ ಸದುಪಯೋಗ ಪಡಿಸಿಕೊಳ್ಳುವಂತೆ ಮನವಿ ಮಾಡಿದರು.ಹಿರಿಯ ಸಂದರ್ಭ ಕಾಲೇಜಿನ ಮಾಹಿತಿಗಳನ್ನು ಒಳಗೊಂಡ ಭಿತ್ತಿ ಪತ್ರ ಬಿಡುಗಡೆಗೊಳಿಸಿದರು.ಗೋಷ್ಠಿಯಲ್ಲಿ ಕಂಪ್ಯೂಟರ್ ವಿಭಾಗದ ಮುಖ್ಯಸ್ಥರೂ ಆದ ಸಹ ಪ್ರಾಧ್ಯಾಪಕ ಡಾ ಎಸ್.ರಂಗನಾಥ್, ದೈಹಿಕ ಶಿಕ್ಷಣ ವಿಭಾಗದ ಮುಖ್ಯಸ್ಥ ಎನ್.ರಮೇಶ್, ಕಂಪ್ಯೂಟರ್ ವಿಭಾಗದ ಜಿ.ಶ್ರೀನಾಥ್, ಕಚೇರಿಯ ಅಧೀಕ್ಷಕರಾದ ಎಚ್.ಎ.ರೂಪಾ, ಎಂ.ಮಂಜು ಇದ್ದರು.
ಕಾಲೇಜಿನ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕಚೇರಿ -08276 298230, ಪ್ರಾಂಶುಪಾಲರು ಡಾ. ಕೆ.ಐ ಪರಶಿವಮೂರ್ತಿ -9449 624 417, ಡಾ. ಎನ್ ಎಸ್ ಸತೀಶ್-944 810 1220, ಶ್ರೀನಾಥ್ ಜಿ - 944 866 1470 ನಂಬರ್ ಗಳನ್ನು ಸಂಪರ್ಕಿಸಲು ಕೋರಿದ್ದಾರೆ.