ಕನ್ನಡಪ್ರಭ ವಾರ್ತೆ ಚಾಮರಾಜನಗರ
ಮಹಾಶಿವರಾತ್ರಿಯನ್ನು ಮಠ ದೇವಾಲಯಗಳಲ್ಲಿ ಅಷ್ಟೇ ಅಲ್ಲದೇ ಮನೆಗಳಲ್ಲಿಯೂ ಆಚರಣೆ ಮಾಡಲಾಯಿತು, ಕೆಲವರು ಉಪವಾಸ ವ್ರತ ಕೈಗೊಂಡರು, ಪ್ರಾತಃಕಾಲ ಸೂರ್ಯೋದಯಕ್ಕೂ ಮುನ್ನ ಎದ್ದು ಸ್ನಾನ ಮಾಡಿ ಶುಭ್ರವಾದ ಶ್ವೇತ ವಸ್ತ್ರ ಧರಿಸಿ ಶಿವನ ಪೂಜೆಯಲ್ಲಿ ತೊಡಗಿದರು. ಶಿವಲಿಂಗಕ್ಕೆ ಹಾಲು, ಬಿಲ್ವಪತ್ರೆ, ಶ್ರೀಗಂಧ, ತುಪ್ಪ, ಸಕ್ಕರೆ ಮತ್ತು ಇತರ ವಸ್ತುಗಳನ್ನು ಅರ್ಪಿಸಿ ಪೂಜೆ ಮಾಡಿದರು.
ಶಿವನ ದೇಗುಲಗಳಲ್ಲಿ ಜನರು ಕಿಕ್ಕಿರಿದು ತುಂಬಿದ್ದರು, ಮಹಾ ಮೃತ್ಯುಂಜಯ ಮಂತ್ರ ಹಾಗೂ ಶಿವ ತಾಂಡವ ಸ್ತೋತ್ರದಂತಹ ಮಂತ್ರಗಳನ್ನು ಅರ್ಚಕರು, ಪಠಿಸಿದರು, ಗ್ರಾಮೀಣ ಭಾಗದ ಶಿವ ದೇವಾಲಯಗಳು ಮತ್ತು ಮಠಗಳಲ್ಲಿ ಸಾಮೂಹಿಕ ಲಿಂಗ ಪೂಜೆ ನೆರವೇರಿತು.ಜಿಲ್ಲೆಯ ಚಾಮರಾಜನಗರ, ಕೊಳ್ಳೇಗಾಲ, ಹನೂರು, ಯಳಂದೂರು, ಗುಂಡ್ಲುಪೇಟೆ ತಾಲೂಕು ವ್ಯಾಪ್ತಿಯ ಶಿವನ ದೇವಸ್ಥಾನಗಳಲ್ಲಿ ಮಹಾಶಿವರಾತ್ರಿ ಪ್ರಯುಕ್ತ ಬೆಳಗ್ಗೆಯಿಂದಲೇ ದೇವರಿಗೆ ವಿವಿಧ ಅಭಿಷೇಕ ಹಾಗೂ ವಿಶೇಷ ಪೂಜೆ ಮಾಡಲಾಯಿತು. ದೇವಸ್ಥಾನ ಹಾಗೂ ದೇವರ ಮೂರ್ತಿಗಳನ್ನು ವಿವಿಧ ಹೂವುಗಳಿಂದ ಅಲಂಕರಿಸಲಾಗಿತ್ತು. ಭಕ್ತರು ಬೆಳಗ್ಗೆಯಿಂದಲೇ ದೇವಸ್ಥಾನಗಳಿಗೆ ತೆರಳಿ ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದು ಪುನೀತರಾದರು.
ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ನಗರದ ವಿರಕ್ತ ಮಠದ ಅವರಣದಲ್ಲಿ ಭಾನುವಾರ ರಾತ್ರಿ ಜಾಗರಣೆ ಹಾಗೂ ಇಷ್ಟ ಲಿಂಗಪೂಜೆಯು ನೂರಾರು ಭಕ್ತರ ನಡುವೆ ನಡೆಯಿತು.
ಮಠದ ಅವರಣದಲ್ಲಿ ಬದನವಾಳು ಶಾಸ್ತ್ರೀ ಅವರ ಮಕ್ಕಳಿಂದ ಶಿವಕಥೆ ಮತ್ತು ಭಕ್ತಿ ಗೀತೆಗಳ ಗಾಯನ, ಉಮ್ಮತ್ತೂರು ಬಸವರಾಜು ಅವರಿಂದ ಹಾಸ್ಯ ಕಾರ್ಯಕ್ರಮ, ಭಜನಾ ತಂಡಗಳಿಂದ ಭಜನೆ ನಡೆಯಿತು. ಬಂದಿದ್ದ ಎಲ್ಲಾ ಭಕ್ತರಿಗೂ ಪ್ರಸಾದ ವ್ಯವಸ್ಥೆ ಮಾಡಲಾಯಿತು.