ಏ.19 ರವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶ: ಜಿಲ್ಲಾಧಿಕಾರಿ ಗುರುದತ್ತ ಹೆಗಡೆ

KannadaprabhaNewsNetwork |  
Published : Apr 13, 2024, 01:03 AM IST
ಪೊಟೊ: 12ಎಸ್ಎಂಜಿಕೆಪಿ02ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ಏರ್ಪಡಿಸಿದ್ದ ವಿವಿಧ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಚುನಾವಣಾ ನಾಮಪತ್ರ ಸಲ್ಲಿಕೆ ಮತ್ತು ಚುನಾವಣಾ ಪ್ರಕ್ರಿಯೆ ಕುರಿತು ಏರ್ಪಡಿಸಿದ್ದ ಸಭೆಯಲ್ಲಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಮಾತನಾಡಿದರು. | Kannada Prabha

ಸಾರಾಂಶ

ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ಏರ್ಪಡಿಸಿದ್ದ ವಿವಿಧ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಚುನಾವಣಾ ನಾಮಪತ್ರ ಸಲ್ಲಿಕೆ ಮತ್ತು ಚುನಾವಣಾ ಪ್ರಕ್ರಿಯೆ ಕುರಿತು ಏರ್ಪಡಿಸಿದ್ದ ಸಭೆಯಲ್ಲಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಮಾತನಾಡಿದರು.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಶಿವಮೊಗ್ಗ ಲೋಕಸಭಾ ಕ್ಷೇತ್ರ ಚುನಾವಣೆಯ ಅಭ್ಯರ್ಥಿಗಳು ಏ.19ರವರೆಗೆ ಜಿಲ್ಲಾಧಿಕಾರಿ ಕಾರ್ಯಾಲಯದಲ್ಲಿ ನಾಮಪತ್ರಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದರು.

ಇಲ್ಲಿನ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ವಿವಿಧ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಚುನಾವಣಾ ನಾಮಪತ್ರ ಸಲ್ಲಿಕೆ ಮತ್ತು ಚುನಾವಣಾ ಪ್ರಕ್ರಿಯೆ ಕುರಿತು ಏರ್ಪಡಿಸಿದ್ದ ಸಭೆಯಲ್ಲಿ ಅವರು ಮಾತನಾಡಿ, ಭಾರತ ಚುನಾವಣಾ ಆಯೋಗವು ಮಾ.16 ರಂದು ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಅಧಿಸೂಚನೆ ಹೊರಡಿಸಿದ್ದು, ಅದರಂತೆ ಶಿವಮೊಗ್ಗ ಲೋಕಸಭಾ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ಸಂಬಂಧಿಸಿದಂತೆ ಉಮೇದು ವಾರರು ಅಥವಾ ಅವರ ಸೂಚಕರು ನಾಮಪತ್ರಗಳನ್ನು ಚುನಾವಣಾಧಿಕಾರಿಗಳಿಗೆ ಏ.19ರವರೆಗೆ ಬೆಳಿಗ್ಗೆ 11 ರಿಂದ ಮಧ್ಯಾಹ್ನ 3ರವರೆಗೆ ಸಲ್ಲಿಸಬಹುದಾಗಿದೆ. ನಾಮ ಪತ್ರದ ನಮೂನೆಗಳನ್ನು ಜಿಲ್ಲಾಧಿಕಾರಿ ಕಚೇರಿಯಲ್ಲಿ ಪಡೆದುಕೊಳ್ಳಬಹುದು ಎಂದು ತಿಳಿಸಿದರು.

ನಾಮ ಪತ್ರಗಳನ್ನು ಜಿಲ್ಲಾಧಿಕಾರಿ ಕಚೇರಿಯಲ್ಲಿ ಏ.20ರಂದು ಬೆಳಿಗ್ಗೆ 11ಕ್ಕೆ ಗಂಟೆಗೆ ಪರಿಶೀಲನೆಗೆ ತೆಗೆದುಕೊಳ್ಳಲಾಗುತ್ತದೆ. ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳುವ ತಿಳಿವಳಿಕೆ ಪತ್ರವನ್ನು ನಿಗದಿಪಡಿಸಿದ ಕಚೇರಿಯಲ್ಲಿ ಏ.22 ರಂದು ಮಧ್ಯಾಹ್ನ 3ರೊಳಗೆ ಸಲ್ಲಿಸಬಹುದು ಎಂದರು.

ಮೇ.7ರಂದು ಬೆಳಗ್ಗೆ 7ರಿಂದ ಸಂಜೆ 6ರವರೆಗೆ ಮತದಾನ ನಡೆಯಲಿದೆ. ನಾಮಪತ್ರ ಸಲ್ಲಿಸುವ ಅಭ್ಯರ್ಥಿಗಳು ಚುನಾವಣಾ ಆಯೋಗ ನೀಡಿರುವ ಎಲ್ಲಾ ಸೂಚನೆಗಳನ್ನು ಪಾಲಿಸುವ ಮೂಲಕ ಅಗತ್ಯ ದಾಖಲೆಗಳೊಂದಿಗೆ ನಾಮಪತ್ರ ಸಲ್ಲಿಸಬೇಕು.

ಅಭ್ಯರ್ಥಿಗಳು ನಾಮಪತ್ರವನ್ನು ನಮೂನೆ-2ಎ ನಲ್ಲಿ ಸಲ್ಲಿಸಬೇಕು. ನಮೂನೆ-26 ರಲ್ಲಿ 100 ರು.ಗಳ ಛಾಪಾ ಕಾಗದದಲ್ಲಿ ಅಭ್ಯರ್ಥಿಯ ಘೋಷಣಾ ಪತ್ರ, ಬೇಬಾಕಿಗೆ ಸಂಬಂಧಿಸಿದ ಇಲಾಖೆ ಹಾಗೂ ನೋಟರಿ ಪಬ್ಲಿಕ್ ರವರಿಂದ ದೃಢೀಕರಣ ಪತ್ರ ಸಲ್ಲಿಸಬೇಕು. ಸಾಮಾನ್ಯ ಅಭ್ಯರ್ಥಿಗಳು 25000 ರು., ಪರಿಶಿಷ್ಠ ಜಾತಿ, ಪರಿಶಿಷ್ಠ ಪಂಗಡದ ಅಭ್ಯರ್ಥಿಗಳು 12500 ರು. ಗಳ ಭದ್ರತಾ ಠೇವಣಿಯನ್ನು ನಿಗದಿಪಡಿಸಲಾಗಿದೆ. ಅಭ್ಯರ್ಥಿಗಳು ಹೊಸದಾಗಿ ಬ್ಯಾಂಕ್ ಖಾತೆ ತೆರೆದು ಅದರಲ್ಲೇ ತಮ್ಮ ಚುನಾವಣಾ ವೆಚ್ಚಗಳನ್ನು ನಿರ್ವಹಿಸಬೇಕಾಗುತ್ತದೆ. ಒಬ್ಬ ಅಭ್ಯರ್ಥಿ ಗರಿಷ್ಟ 4 ನಾಮಪತ್ರಗಳನ್ನು ಸಲ್ಲಿಸಬಹುದು ಎಂದು ವಿವರಿಸಿದರು.

ರಾಷ್ಟ್ರೀಯ, ರಾಜ್ಯ ಮಾನ್ಯತೆ ಪಡೆದ ಪಕ್ಷದ ಅಭ್ಯರ್ಥಿಗೆ ಒಬ್ಬ ಸೂಚಕರು, ನೋಂದಾಯಿತ ಮಾನ್ಯತೆ ಪಡೆಯದ ಪಕ್ಷ, ಪಕ್ಷೇತರರಿಗೆ 10 ಸೂಚಕರು ಸಹಿ ಮಾಡಿರಬೇಕು. ನಾಮಪತ್ರ ಸಲ್ಲಿಸುವ ಅಭ್ಯರ್ಥಿಯ ಜೊತೆಗೆ 4 ಇತರ ಅಧಿಕೃತ ವ್ಯಕ್ತಿಗಳಿಗೆ ಮಾತ್ರ ನಾಮಪತ್ರ ಸ್ವೀಕೃತಿ ಕೇಂದ್ರದಿಂದ 100 ಮೀಟರ್ ಅಂತರದೊಳಗೆ ಪ್ರವೇಶಿಸಲು ಅವಕಾಶವಿರುತ್ತದೆ.

ನಾಮಪತ್ರ ಸ್ವೀಕೃತಿ ಕೇಂದ್ರದ ಒಳಗಡೆ, ಪ್ರವೇಶ ದ್ವಾರದಲ್ಲಿ, ನಿರ್ಗಮನ ದ್ವಾರದಲ್ಲಿ ಕಣ್ಗಾವಲಿಗೆ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ನಾಮಪತ್ರ ಸ್ವೀಕೃತಿ ಕಾರ್ಯದ ಚಿತ್ರೀಕರಣ ಮಾಡಲು ವೀಡಿಯೋ ಕ್ಯಾಮೇರಾದೊಂದಿಗೆ ಸಿಬ್ಬಂದಿ ನಿಯೋಜಿಸಲಾಗಿದೆ. ಚುನಾವಣಾ ಆಯೋಗದ ಮಾರ್ಗದರ್ಶಗಳನ್ವಯ ನಾಮಪತ್ರ ಸ್ವೀಕೃತಿ ಕಾರ್ಯಕ್ಕೆ ಅವಶ್ಯವಿರುವ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ವಿವಿಧ ರಾಜಕೀಯ ಪಕ್ಷಗಳ ಮುಖಂಡರು, ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನೀಟ್ ರದ್ದಾಗಿದ್ದಕ್ಕೆ ಜೀವ ಕಳಕೊಂಡ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್ !
ಹೆಣ ಹುಡುಕಿಕೊಂಡು ಹೋದ ಖಾಕಿಗೆ ಸಿಕ್ಕಿದ್ದು ಸತ್ತ ಹೆಗ್ಗಣ!