ಬಳ್ಳಾರಿ: ಪ್ರಜಾಪ್ರಭುತ್ವದ ಮೂಲವಾದ ಸಂವಿಧಾನವನ್ನು ರಚಿಸಿ, ರಾಷ್ಟ್ರದಲ್ಲಿ ಅಳವಡಿಸಿಕೊಂಡಿರದಿದ್ದಲ್ಲಿ ಸಾಮಾನ್ಯ ವ್ಯಕ್ತಿಯಾದ ನಾನು ವಿವಿಯ ಕುಲಪತಿ ಹುದ್ದೆ ಹೊಂದಲು ಸಾಧ್ಯವಾಗುತ್ತಿರಲಿಲ್ಲ ಎಂದು ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಂ.ಮುನಿರಾಜು ಹೇಳಿದರು.
ಭಾರತ ಸಂವಿಧಾನವನ್ನು ದೇಶಕ್ಕೆ ಸಮರ್ಪಿಸಿಕೊಂಡಿದ್ದನ್ನು ಇಂದು ಸ್ಮರಿಸುವ ದಿನವಾಗಿದೆ. ನಮಗೆ ಸ್ವಾತಂತ್ರ್ಯ ಬಂದು ಹಲವು ವರ್ಷಗಳಾದರೂ ದೇಶವು ಇಂದಿಗೂ ಸುಸ್ಥಿರವಾದ ಅಭಿವೃದ್ಧಿ ಕಂಡಿಲ್ಲ. ಭವಿಷ್ಯದಲ್ಲಿ ಭಾರತ ಅಭಿವೃದ್ಧಿ ಹೊಂದಲು ನಮ್ಮಲ್ಲಿರುವ ಸಮಸ್ಯೆಗಳನ್ನು ನಿರ್ಮೂಲನೆ ಮಾಡಬೇಕಾಗಿದೆ. ಯುವಕರು ಸಮೃದ್ಧ ದೇಶವನ್ನು ನಿರ್ಮಿಸಲು ಮುಂದಾಗಬೇಕು ಎಂದು ಹೇಳಿದರು.
ಸರ್ವರಿಗೂ ಉನ್ನತ ಶಿಕ್ಷಣ ಒದಗಿಸುವ ಸಂಕಲ್ಪವನ್ನು ನಮ್ಮ ವಿಶ್ವವಿದ್ಯಾಲಯವು ಮಾಡಿದೆ. ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಾಗಿ ತುರ್ತು ಚಿಕಿತ್ಸೆಗೆ ಅಗತ್ಯ ವಾಹನ ಸೌಲಭ್ಯವನ್ನು ಕಲ್ಪಿಸಲಾಗಿದೆ. ನಂದಿಹಳ್ಳಿ ಸ್ನಾತಕೋತ್ತರ ಕೇಂದ್ರದಲ್ಲಿ ಅಂತರಾಷ್ಟ್ರೀಯ ಕ್ರೀಡಾಶಾಲೆ ನಿರ್ಮಿಸಲಾಗುವುದು. ಆರ್ಥಿಕವಾಗಿ ಹಿಂದುಳಿದ ಪೌರ ಕಾರ್ಮಿಕರ, ದೇವದಾಸಿಯರ ಹಾಗೂ ತೃತಿಯಲಿಂಗಿ 12 ಅಭ್ಯರ್ಥಿಗಳಿಗೆ ಉಚಿತ ಪ್ರವೇಶವನ್ನು ನೀಡಲಾಗಿದೆ. ಮುಂಬರುವ ದಿನಗಳಲ್ಲಿ ವಿದ್ಯಾರ್ಥಿಗಳು ಜೀವನ ರೂಪಿಸಿಕೊಳ್ಳಲು ಕೌಶಲ್ಯಭರಿತವಾದ ಸ್ನಾತಕೋತ್ತರ/ಡಿಪ್ಲೋಮಾ ಕೋರ್ಸ್ಗಳನ್ನು ಆರಂಭಿಸಲಾಗುವುದು. ಸಮಾಜ ವಿಜ್ಞಾನ ಭವನ, ಭಾಷಾ ಭವನ ಕಟ್ಟಡ ನಿರ್ಮಿಸಲಾಗುವುದು. ಆರೋಗ್ಯ ಕೇಂದ್ರ ಮತ್ತು ವಸತಿ ಗೃಹಗಳು ತುರ್ತು ಅಗತ್ಯಗಳಾಗಿದ್ದು ಅವುಗಳನ್ನು ಶೀಘ್ರವೇ ನಿರ್ಮಿಸಲಾಗುವುದು ಎಂದು ಘೋಷಿಸಿದರು.ಈ ಸಂದರ್ಭದಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವ ಡಿ ದರ್ಜೆ ನೌಕರರಾದ ಸುಮಂಗಲ, ಹಂಪಮ್ಮ, ತಿಪ್ಪಮ್ಮ ಅವರನ್ನು ಸನ್ಮಾನಿಸಲಾಯಿತು.
ವಿವಿಯ ಕುಲಸಚಿವ ಎಸ್.ಎನ್. ರುದ್ರೇಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಮೌಲ್ಯಮಾಪನ ಕುಲಸಚಿವ ಪ್ರೊ. ರಮೇಶ್ ಓಲೇಕಾರ್, ಎಲ್ಲ ನಿಕಾಯಗಳ ಡೀನರು, ವಿಭಾಗಗಳ ಮುಖ್ಯಸ್ಥರು, ಬೋಧಕ, ಬೋಧಕೇತರ ಸಿಬ್ಬಂದಿ, ಸಂಶೋಧನಾ ವಿದ್ಯಾರ್ಥಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಜ್ಞಾನ ವಿಭಾಗದ ಮುಖ್ಯಸ್ಥ ಡಾ.ಶಶಿಧರ್ ಕೆಲ್ಲೂರ್ ನಿರೂಪಿಸಿ, ವಂದಿಸಿದರು.