ನೀರಿನ ಗುಣಮಟ್ಟ ಪರಿಶೀಲಿಸಿ: ತುಷಾರ್‌

KannadaprabhaNewsNetwork | Updated : Jun 11 2024, 11:30 AM IST

ಸಾರಾಂಶ

ಬೆಂಗಳೂರಿನ ಶುದ್ಧ ಕುಡಿಯುವ ನೀರಿನ ಘಟಕ ಮತ್ತು ಬೋರ್‌ವೆಲ್‌ಗಳ ನೀರಿನ ಮಾದರಿಯನ್ನು ಪರೀಕ್ಷಿಸಿ ಗುಣಮಟ್ಟ ತಿಳಿದುಕೊಳ್ಳಿ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

 ಬೆಂಗಳೂರು ;  ನಗರದ ಶುದ್ಧ ಕುಡಿಯುವ ನೀರಿನ ಘಟಕಗಳು ಹಾಗೂ ಬೋರ್‌ವೆಲ್‌ಗಳ ನೀರಿನ ಗುಣಮಟ್ಟವನ್ನು ಪ್ರಯೋಗಾಲಯದಲ್ಲಿ ತ್ವರಿತವಾಗಿ ಪರಿಶೀಲಿಸಬೇಕೆಂದು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸೋಮವಾರ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಪಾಲಿಕೆ ವ್ಯಾಪ್ತಿಯ ಶುದ್ಧ ಕುಡಿಯುವ ನೀರಿನ ಘಟಕಗಳು ಹಾಗೂ ಬೋರ್‌ವೆಲ್‌ಗಳಿಗೆ ಅಧಿಕಾರಿಗಳು ಭೇಟಿ ನೀಡಿ ನೀರನ್ನು ಪ್ರಯೋಗಾಲಯಗಳಿಗೆ ಕಳುಹಿಸಿ ಪರೀಕ್ಷಿಸಿ ವರದಿ ಪಡೆಯುವಂತೆ ಸೂಚಿಸಿದ್ದಾರೆ.

ರಸ್ತೆ ಗುಂಡಿ ನಿರಂತರವಾಗಿ ಮುಚ್ಚಿ:

ನಗರದಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚವ ಕಾರ್ಯ ನಿರಂತರವಾಗಿ ನಡೆಸಬೇಕು. ಹೊಸದಾಗಿ ಸೃಷ್ಟಿಯಾಗುವ ರಸ್ತೆ ಗುಂಡಿಗಳನ್ನು ಗುರುತಿಸಿ ಕೂಡಲೇ ಮುಚ್ಚುವ ಕೆಲಸವಾಗಬೇಕು. ರಸ್ತೆ ಗುಂಡಿ ಮುಚ್ಚುವ ಕಾರ್ಯಕ್ಕಾಗಿ ಹೊಸ ತಂತ್ರಾಂಶವನ್ನು ಸಿದ್ಧಪಡಿಸಲಾಗುತ್ತಿದ್ದು, ಅದನ್ನು ತ್ವರಿತವಾಗಿ ಅನಾವರಣಗೊಳಿಸಲು ಬಿಬಿಎಂಪಿ ಎಂಜಿನಿಯರಿಂಗ್‌ ವಿಭಾಗದ ಮುಖ್ಯಸ್ಥರಿಗೆ ನಿರ್ದೇಶಿಸಿದರು.

ಪ್ರವಾಹ ಪೀಡಿತ ಪ್ರದೇಶಗಳಲ್ಲಿ ನಿಗಾವಹಿಸಿ:

ನಗರದಲ್ಲಿ 198 ಪ್ರವಾಹ ಪೀಡಿತ ಪ್ರದೇಶಗಳಿವೆ. ಇವುಗಳ ಜತೆಗೆ ಹೊಸದಾಗಿ 11 ಪ್ರವಾಹ ಪೀಡಿದ ಪ್ರದೇಶಗಳನ್ನು ಗುರುತಿಸಲಾಗಿದ್ದು, ಈ ಪೈಕಿ 163 ಸ್ಥಳಗಳಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗಿದೆ. ಉಳಿದ 46 ಸ್ಥಳಗಳಲ್ಲಿ ತಾತ್ಕಾಲಿಕ ಪರಿಹಾರ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪ್ರವಾಹ ಪೀಡಿತ ಪ್ರದೇಶಗಳ ಮೇಲೆ ನಿಗಾವಹಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.ಸಭೆಯಲ್ಲಿ ವಿಶೇಷ ಆಯುಕ್ತರಾದ ಡಾ। ಕೆ.ಹರೀಶ್ ಕುಮಾರ್, ಸುರಳ್ಕರ್ ವಿಕಾಸ್ ಕಿಶೋರ್, ಶಿವಾನಂದ ಕಲ್ಕೆರೆ, ವಲಯ ಆಯುಕ್ತರಾದ ಸ್ನೇಹಲ್, ವಿನೋತ್ ಪ್ರಿಯಾ, ರಮೇಶ್, ರಮ್ಯಾ, ಪ್ರೀತಿ ಗೆಹ್ಲೋಟ್, ಕರೀಗೌಡ ಉಪಸ್ಥಿತರಿದ್ದರು.ಸಮನ್ವಯದಿಂದ ಮರಗಳನ್ನು

ತೆರವುಗೊಳಿಸಿ: ತುಷಾರ್‌

ಮಳೆಗಾಲದ ವೇಳೆ ಧರೆಗುರುಳಿದ ಮರಗಳನ್ನು ತ್ವರಿತವಾಗಿ ತೆರವುಗೊಳಿಸಬೇಕು. ಅಗ್ನಿ ಶಾಮಕ, ಬೆಸ್ಕಾಂ ಇಲಾಖೆಯೊಂದಿಗೆ ಸಮನ್ವಯ ಸಾಧಿಸಿಕೊಂಡು ಮರಗಳನ್ನು ತೆರವುಗೊಳಿಸಬೇಕು. ನಾಗರಿಕರಿಗೆ ಸಮಸ್ಯೆ ಆಗದಂತೆ ಕಾರ್ಯನಿರ್ವಹಿಸಬೇಕಿದ್ದು, ಪಾಲಿಕೆ ಸಹಾಯವಾಣಿ ಸಂಖ್ಯೆ 1533ಗೆ ದೂರು ಬಂದ ಕೂಡಲೇ ಮರ ಕಟಾವು ತಂಡಗಳನ್ನು ಸ್ಥಳಕ್ಕೆ ಕಳುಹಿಸಿ ಸಮಸ್ಯೆ ಬಗೆಹರಿಸಬೇಕೆಂದು ತುಷಾರ್‌ ಗಿರಿನಾಥ್‌ ಸೂಚಿಸಿದರು.ಫುಟ್‌ಪಾತಲ್ಲಿರುವ ಅಂಗಡಿಗಳ

ಪೆಟ್ಟಿಗೆಗಳನ್ನು ತೆರವು ಮಾಡಿ

ನಗರದಾದ್ಯಂತ ಪಾದಚಾರಿ ಮಾರ್ಗಗಳಲ್ಲಿ ಅಂಗಡಿ, ಮಳಿಗೆಯವರು ಶಾಶ್ವತ ಪೆಟ್ಟಿಗೆಗಳನ್ನು ಅಳವಡಿಸಿದ್ದು, ಇದರಿಂದ ಪಾದಚಾರಿಗಳ ಓಡಾಟಕ್ಕೆ‌ ತೊಂದರೆ ಉಂಟಾಗುತ್ತಿದೆ. ಹೀಗಾಗಿ, ಪಾದಚಾರಿ ಮಾರ್ಗಗಳಲ್ಲಿರುವ ಶಾಶ್ವತ ಪೆಟ್ಟಿಗೆಗಳನ್ನು ಎಲ್ಲಾ ವಲಯದಲ್ಲೂ ತೆರವುಗೊಳಿಸಬೇಕೆಂದು ತುಷಾರ್‌ ಗಿರಿನಾಥ್‌ ತಿಳಿಸಿದ್ದಾರೆ.

Share this article