ಸ್ವಾತಂತ್ರ್ಯ ಸಂಗ್ರಾಮದ ಬೆಳ್ಳಿಚುಕ್ಕಿ ಚೆನ್ನಮ್ಮ

KannadaprabhaNewsNetwork |  
Published : Oct 24, 2024, 12:31 AM IST
23ಡಿಡಬ್ಲೂಡಿ3ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ ಸಾಂಸ್ಕೃತಿಕ ಭವನದಲ್ಲಿ ಬುಧವಾರ ಆಯೋಜಿಸಿದ್ದ ಕಿತ್ತೂರು ರಾಣಿ ಚನ್ನಮ್ಮ ಜಯಂತಿಯಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಲವಾಯಿತು.  | Kannada Prabha

ಸಾರಾಂಶ

ಕಿತ್ತೂರಿನ ದೇಸಾಯಿ ಮನೆತನದ ರಾಜಾ ಮಲ್ಲಸರ್ಜನನ್ನು 15ನೇ ವಯಸ್ಸಿನಲ್ಲಿ ವಿವಾಹವಾದರು. ಮಲ್ಲಸರ್ಜನ ನಿಧನಾ ನಂತರ ಕಿತ್ತೂರು ಸಂಸ್ಥಾನದ ಆಡಳಿತ ಚುಕ್ಕಾಣಿ ಹಿಡಿದ ಚೆನ್ನಮ್ಮಳು ಸ್ವಾಭಿಮಾನದಿಂದ ಸ್ವಾತಂತ್ರ್ಯಕ್ಕಾಗಿ ಹೋರಾಡಿ ಇತಿಹಾಸ ಸೃಷ್ಟಿಸಿದಳು.

ಧಾರವಾಡ:

ದೇಶದಲ್ಲಿ ಮೊದಲ ಸ್ವಾತಂತ್ರ್ಯ ಸಂಗ್ರಾಮದ ಕಹಳೆ ಮೊಳಗಿಸಿದ್ದ ಕಿತ್ತೂರು ರಾಣಿ ಚೆನ್ನಮ್ಮ ಇಂದಿನ ಮಹಿಳೆಯರಿಗೆ ಆದರ್ಶಪ್ರಾಯರಾಗಿದ್ದು ಸ್ವಾತಂತ್ರ್ಯ ಸಂಗ್ರಾಮದ ಬೆಳ್ಳಿಚುಕ್ಕಿ ಆಗಿದ್ದಾರೆಂದು ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಹೇಳಿದರು.

ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ ಸಾಂಸ್ಕೃತಿಕ ಭವನದಲ್ಲಿ ಬುಧವಾರ ಆಯೋಜಿಸಿದ್ದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಸಲ್ಲಿಸಿ ಅವರು ಮಾತನಾಡಿದರು.

ಚೆನ್ನಮ್ಮನ ಬಗ್ಗೆ ಅನೇಕ ರೀತಿಯ ಜನಪದ ಕಥೆಗಳು, ಜನಪದ ಗೀತೆಗಳು, ಗೀಗಿ ಪದಗಳು ಸ್ವಾರಸ್ಯಕರವಾಗಿರುವ ಮತ್ತು ಐತಿಹಾಸಿಕವಾಗಿರುವ ಕಥೆಗಳನ್ನು ತಿಳಿಸುತ್ತವೆ. ಚಿಕ್ಕಂದಿನಿಂದಲೇ ಕುದುರೆ ಸವಾರಿ, ಕತ್ತಿವರಸೆ ಮತ್ತು ಬಿಲ್ಲುಗಾರಿಕೆಯಲ್ಲಿ ತರಬೇತಿ ಪಡೆದಿದ್ದ ಚೆನ್ನಮ್ಮ, ಕಿತ್ತೂರಿನ ದೇಸಾಯಿ ಮನೆತನದ ರಾಜಾ ಮಲ್ಲಸರ್ಜನನ್ನು 15ನೇ ವಯಸ್ಸಿನಲ್ಲಿ ವಿವಾಹವಾದರು. ಮಲ್ಲಸರ್ಜನ ನಿಧನಾ ನಂತರ ಕಿತ್ತೂರು ಸಂಸ್ಥಾನದ ಆಡಳಿತ ಚುಕ್ಕಾಣಿ ಹಿಡಿದ ಚೆನ್ನಮ್ಮಳು ಸ್ವಾಭಿಮಾನದಿಂದ ಸ್ವಾತಂತ್ರ್ಯಕ್ಕಾಗಿ ಹೋರಾಡಿ ಇತಿಹಾಸ ಸೃಷ್ಟಿಸಿದಳು ಎಂದರು.

ಕಿತ್ತೂರಿನ ವಿಜಯೋತ್ಸವಕ್ಕೆ 200 ವರ್ಷ ತುಂಬಿರುವ ಪ್ರಯುಕ್ತ, ರಾಣಿ ಚೆನ್ನಮ್ಮಳ ಸಂಸ್ಮರಣೆ ಮತ್ತು ಕಿತ್ತೂರಿನ ಇತಿಹಾಸವನ್ನು ನಾಡಿನೂದ್ದಕ್ಕೂ ಪ್ರಸರಿಸಿ, ಕೀರ್ತಿ ಹರಡಲು ರಾಜ್ಯ ಸರ್ಕಾರವು ಕಿತ್ತೂರು ವಿಜಯೋತ್ಸವದ ಜ್ಯೋತಿ ರಥಯಾತ್ರೆ ಹಮ್ಮಿಕೊಂಡಿದೆ. ಜಿಲ್ಲೆಯಲ್ಲಿ ಜ್ಯೋತಿ ರಥಯಾತ್ರೆಯನ್ನು ಅದ್ಧೂರಿಯಾಗಿ ಸ್ವಾಗತಿಸಿ, ಬೀಳ್ಕೊಡಲಾಗಿದೆ ಎಂದು ಹೇಳಿದರು.

ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯರಾದ ಡಾ. ಮೈತ್ರೇಯಿಣಿ ಗದಿಗೆಪ್ಪಗೌಡರ ಮತ್ತು ಚಿಂತಕ ಮಡಿವಾಳಪ್ಪ ಶಿರಿಯಣ್ಣವರ ಚೆನ್ನಮ್ಮನ ಜೀವನ ಮತ್ತು ಸಾಧನೆ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು. ಕುಮಾರ ಬೇಕ್ಕೇರಿ ಸ್ವಾಗತಿಸಿದರು. ಆರತಿ ದೇವಶಿಕಾಮಣಿ ನಿರೂಪಿಸಿದರು. ಸಹಾಯಕ ಪೊಲೀಸ್ ಆಯುಕ್ತ ಪ್ರಶಾಂತ ಸಿದ್ದನಗೌಡರ, ಮಹಾನಗರ ಪಾಲಿಕೆ ಸದಸ್ಯ ಶಂಭುಗೌಡ ಸಾಲಮನಿ, ಹಿರಿಯರಾದ ಸಿ.ಎಸ್. ಪಾಟೀಲ, ಸಿ.ಎಸ್. ನೇಗಿನಾಳ, ರಾಜು ಮಟ್ಟಿ, ಎನ್.ಆರ್. ಬಾಳಿಕಾಯಿ ಇದ್ದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ