ಬಿಜೆಪಿ ಈ ಹಿಂದಿನ ಭರವಸೆಗಳ ಕುರಿತು ಚರ್ಚಿಸಲು ಮುಖ್ಯಮಂತ್ರಿ ಸವಾಲು

KannadaprabhaNewsNetwork |  
Published : Apr 15, 2024, 01:17 AM IST
ಚಿತ್ರ  : 14ಎಂಡಿಕೆ1 : ಮಡಿಕೇರಿಯ ಗಾಲ್ಫ್  ಗ್ರೌಂಡ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸುದ್ದಿಗಾರರೊಂದಿಗೆ ಮಾತನಾಡಿದರು.  | Kannada Prabha

ಸಾರಾಂಶ

ಈ ಮೊದಲೇ ಬಿಜೆಪಿ ಮಾಡಿರುವ ಘೋಷಣೆಗಳ ಬಗ್ಗೆ ಚರ್ಚೆಯಾಗಬೇಕು. ವಿದೇಶಗಳಿಂದ ಕಪ್ಪುಹಣ ತಂದು 15 ಲಕ್ಷ ರುಪಾಯಿ ತಂದುಕೊಟ್ಟರೇ, 2 ಕೋಟಿ ಉದ್ಯೋಗ ಸೃಷ್ಟಿ, ರೈತರ ಆದಾಯ ದುಪ್ಪಟ್ಟು ಮಾಡಿದರೇ, ಮೆಕ್ ಇನ್ ಇಂಡಿಯಾ, ಅಚ್ಚೇ ದಿನ್ ಆಯೇಗಾ ಎಂದು ಹೇಳಿದ್ದರು. ಆಹಾರ ಪದಾರ್ಥಗಳ ಬೆಲೆ ಕಡಿಮೆಯಾಯಿತೇ? ಎಂದು ಮಡಿಕೇರಿಯಲ್ಲಿ ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.

ಕನ್ನಡಪ್ರಭ ವಾರ್ತೆ ಮಡಿಕೇರಿ

ಕರ್ನಾಟಕದಲ್ಲಿ 2018 ರಲ್ಲಿ 600 ಭರವಸೆಗಳನ್ನು ಕೊಟ್ಟ ಬಿಜೆಪಿ 60 ಭರವಸೆಗಳನ್ನೂ ಈಡೇರಿಸಿಲ್ಲ. ಭರವಸೆಗಳನ್ನು ಬಿಜೆಪಿ ಯಾವತ್ತೂ ಈಡೇರಿಸಿಲ್ಲ, ಮುಂದೆಯೂ ಈಡೇರಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಡಿಕೇರಿಯ ಗಾಲ್ಫ್ ಗ್ರೌಂಡ್ ಹೆಲಿಪ್ಯಾಡ್ ನಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಪ್ರಣಾಳಿಕೆಯಲ್ಲಿ ಬಡ ಕುಟುಂಬಗಳಿಗೆ ಕಡಿಮೆ ಬೆಲೆಗೆ ಗ್ಯಾಸ್, ಯುವಶಕ್ತಿ, ನಾರಿಶಕ್ತಿ, ಉದ್ಯೋಗ ಸೃಷ್ಟಿ ಮಾಡುವುದಾಗಿ ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿದರು.ಈ ಮೊದಲೇ ಬಿಜೆಪಿ ಮಾಡಿರುವ ಘೋಷಣೆಗಳ ಬಗ್ಗೆ ಚರ್ಚೆಯಾಗಬೇಕು. ವಿದೇಶಗಳಿಂದ ಕಪ್ಪುಹಣ ತಂದು 15 ಲಕ್ಷ ರುಪಾಯಿ ತಂದುಕೊಟ್ಟರೇ, 2 ಕೋಟಿ ಉದ್ಯೋಗ ಸೃಷ್ಟಿ, ರೈತರ ಆದಾಯ ದುಪ್ಪಟ್ಟು ಮಾಡಿದರೇ, ಮೆಕ್ ಇನ್ ಇಂಡಿಯಾ, ಅಚ್ಚೇ ದಿನ್ ಆಯೇಗಾ ಎಂದು ಹೇಳಿದ್ದರು. ಆಹಾರ ಪದಾರ್ಥಗಳ ಬೆಲೆ ಕಡಿಮೆಯಾಯಿತೇ? ಎಂದು ಪ್ರಶ್ನಿಸಿದರು.

ನರೇಂದ್ರ ಮೋದಿ 10 ವರ್ಷಗಳಲ್ಲಿ ಪ್ರಧಾನಮಂತ್ರಿಯಾಗಿ ಏನು ಮಾಡಿದ್ದಾರೆ ಎಂದು ಮೊದಲು ಹೇಳಬೇಕು. ಅದರ ಅವಲೋಕನ ಆದ ನಂತರ ಮುಂದಿನದ್ದು ಹೇಳಬೇಕು ಎಂದು ಸಿದ್ದರಾಮಯ್ಯ ನುಡಿದರು.

ಬಿಜೆಪಿ ಸರ್ಕಾರ 25 ಕೋಟಿ ಉದ್ಯೋಗ ಸೃಷ್ಟಿಸಿದ್ದಾರೆ ಎಂದು ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ. 25 ಕೋಟಿ ಉದ್ಯೋಗ ಯಾರಿಗೆ ಕೊಟ್ಟಿದ್ದಾರೆ ಎಂದು ಪ್ರಶ್ನಿಸಿದರು.

ಆರೋಗ್ಯ ವಿಚಾರಿಸಿದ್ದೇನೆ:

ಹಿರಿಯ ಮುಖಂಡ ಶ್ರೀನಿವಾಸ್ ಪ್ರಸಾದ್ ಅವರ ಮನೆಗೆ ಸೋಲುವ ಭಯದಿಂದ ಮುಖ್ಯಮಂತ್ರಿ ಭೇಟಿ ನೀಡಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿರುವ ಬಗ್ಗೆ ಮಾತನಾಡಿ, ನಾನು ಮತ್ತು ಶ್ರೀನಿವಾಸ ಪ್ರಸಾದ್ ರಾಜಕೀಯದಲ್ಲಿ ಸಮಕಾಲೀನರು. ಅವರು 1974ರಲ್ಲಿಯೇ ವಿಧಾನಸಭೆಗೆ ಸ್ಪರ್ಧಿಸಿದ್ದರು, ಒಟ್ಟಿಗೆ ರಾಜಕಾರಣದಲ್ಲಿದ್ದೆವು. ದೀರ್ಘ ಕಾಲದ ಸ್ನೇಹಿತ. ಅವರು ರಾಜಕೀಯದಿಂದ ನಿವೃತ್ತರಾಗಿ ಯಾವ ಪಕ್ಷಕ್ಕೂ ಬೆಂಬಲ ನೀಡುವುದಿಲ್ಲ ಎಂದು ಹೇಳಿದ್ದಾರೆ. ಇಂಥ ಸಂದರ್ಭದಲ್ಲಿ ಭೇಟಿಯಾಗಿ ಅವರ ಆರೋಗ್ಯ ವಿಚಾರಿಸಿದ್ದೇನೆ ಎಂದರು.

ಏ.18ರಂದು ಮುಖ್ಯಮಂತ್ರಿಗಳು ಹಾಸನಕ್ಕೆ ಬರಲಿದ್ದು ಅವರು ಏನು ಹೇಳುತ್ತಾರೆ ಎಂದು ಕೇಳುತ್ತೇನೆ ಎಂದು ದೇವೇಗೌಡರು ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಲು ಮುಖ್ಯಮಂತ್ರಿ ನಿರಾಕರಿಸಿದರು.

ಎಚ್‌ಡಿಕೆ ಮನಃಸ್ಥಿತಿ ಅರ್ಥವಾಗುತ್ತದೆ:

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳಿಂದಾಗಿ ಹೆಣ್ಣುಮಕ್ಕಳು ದಾರಿತಪ್ಪಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿ, ಅವರ ಮನಃಸ್ಥಿತಿ ಅರ್ಥಮಾಡಿಕೊಳ್ಳಬೇಕು. ದಾರಿತಪ್ಪಿದ್ದಾರೆ ಎಂದರೇನು? ಅವರ ಹೇಳಿಕೆಯಿಂದ ಹೆಣ್ಣುಮಕ್ಕಳ ಬಗ್ಗೆ ಅವರಿಗಿರುವ ಭಾವನೆ ಏನು ಎಂದು ಅರ್ಥವಾಗುತ್ತದೆ. 2 ಬಾರಿ ಮುಖ್ಯಮಂತ್ರಿಯಾಗಿದ್ದರು ಈ ರೀತಿ ಮಾತನಾಡಿದರೆ ಜನ ಸಹಿಸುತ್ತಾರೆಯೇ ಎಂದರು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ವಿದ್ಯುತ್, ಮದ್ಯ, ಬಸ್, ಸ್ಟಾಂಪ್ ಪೇಪರ್ ಬೆಲೆ ಹೆಚ್ಚು ಮಾಡಿ ಗ್ಯಾರಂಟಿ ಕೊಡುತ್ತಿದ್ದಾರೆ ಎಂದು ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಅದಕ್ಕೆಲ್ಲ ಎಷ್ಟು ದುಡ್ಡು ಬರುತ್ತದೆ ಎಂದು ವಿಜಯೇಂದ್ರ ಅವರಿಗೆ ತಿಳಿದಿದೆಯೇ? ಗ್ಯಾರಂಟಿ ಯೋಜನೆಗಳಿಗಾಗಿ ಒಂದು ವರ್ಷಕ್ಕೆ 56,000 ಕೋಟಿ ರು.ಗಳ ಅಗತ್ಯವಿದೆ. ಅವುಗಳಿಂದ ಅಷ್ಟು ಹಣ ಬರುತ್ತದೆಯೇ ಎಂದು ಪ್ರಶ್ನಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನೈಸ್‌ ರಸ್ತೆಯಲ್ಲಿ ಟೋಲ್‌ ಕಟ್ಟಬೇಡಿ: ಕುಮಾರಸ್ವಾಮಿ
ಕೆಪಿಎಸ್ಸಿ ನೇಮಕ ಹಗರಣ : ಮತ್ತೆ ಸಾಹುಕಾರ್‌ ಸಸ್ಪೆಂಡ್‌ಗೆ ಸಚಿವ ಸಂಪುಟ ಶಿಫಾರಸು