ಹುಬ್ಬಳ್ಳಿ:
ಶುಕ್ರವಾರ ಸಂಜೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಕುಟುಂಬ ಈಗಾಗಲೇ ಈ ಘಟನೆಯಿಂದಾಗಿ ಭಯದಲ್ಲಿಯೇ ಕಾಲಕಳೆಯುತ್ತಿದೆ. ನಾನು ಕಾಂಗ್ರೆಸ್ ಪಕ್ಷದಿಂದಲೇ ಚುನಾಯಿತನಾಗಿರುವ ಪಾಲಿಕೆ ಸದಸ್ಯ. ಇಂತಹ ಘಟನೆ ನಡೆದ ವೇಳೆ ರಾಜ್ಯ ಸರ್ಕಾರ ನಮ್ಮ ಪರವಾಗಿ ನಿಲ್ಲದೇ ಈ ರೀತಿಯ ಹೇಳಿಕೆ ನೀಡುತ್ತಿರುವುದು ನನಗೆ ನೋವುಂಟು ಮಾಡಿದೆ. ಇದನ್ನೆಲ್ಲ ನಮ್ಮ ಸಮಾಜ ಬಾಂಧವರು ನೋಡುತ್ತಿದ್ದಾರೆ. ಈಗಾಗಲೇ ವೀರಶೈವ ಲಿಂಗಾಯತ ಸಮಾಜದ ಹಿರಿಯರಾದ ಶಾಮನೂರು ಶಿವಶಂಕರಪ್ಪ ಕರೆ ಮಾಡಿ ಧೈರ್ಯ ತುಂಬಿ, ಯಾವುದೇ ರೀತಿಯಲ್ಲೂ ಭಯಬೇಡಿ. ನಿಮ್ಮೊಂದಿಗೆ ಸಮಾಜ ನಿಲ್ಲಲಿದೆ. ಪಕ್ಷದ ಬಗ್ಗೆ ತಲೆಕೆಡಿಸಿಕೊಳ್ಳದೇ ಆಗಿರುವ ಘಟನೆ ಕುರಿತು ನೇರವಾಗಿ ಉತ್ತರ ನೀಡುವಂತೆ ತಿಳಿಸಿದ್ದಾರೆ ಎಂದರು.
ಸುಳ್ಳು ಸುದ್ದಿ ಹರಡಿಸುತ್ತಿದ್ದಾರೆ:ನನ್ನ ಮಗಳು ಲವ್ ಜಿಹಾದ್ಗೆ ಬಲಿಯಾಗಿಲ್ಲ. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ನನ್ನ ಮಗಳದೇ ತಪ್ಪು ಇರುವಂತೆ ಬಿಂಬಿಸಿ ಸುಳ್ಳು ವಿಡಿಯೋ ಹರಿಬಿಟ್ಟು ಅವಳ ತೇಜೋವಧೆ ಮಾಡುವ ಯತ್ನ ಮಾಡಲಾಗುತ್ತಿದೆ. ಇದೆಲ್ಲ ಸಂಪೂರ್ಣ ಸುಳ್ಳು. ಇದನ್ನು ತಕ್ಷಣ ನಿಲ್ಲಿಸಲಿ. ಆರೋಪಿಯನ್ನು ಗುಂಡಿಟ್ಟು ಕೊಲ್ಲಬೇಕು, ಇಲ್ಲವೇ ಗಲ್ಲುಶಿಕ್ಷೆಗೆ ಒಳಪಡಿಸಬೇಕು. ಅಂದಾಗ ಮಾತ್ರ ನನ್ನ ಮಗಳ ಆತ್ಮಕ್ಕೆ ಶಾಂತಿ ಸಿಗಲಿದೆ ಎಂದರು.