ವಿಘ್ನೇಶ್ ಎಂ. ಭೂತನಕಾಡುಕನ್ನಡಪ್ರಭ ವಾರ್ತೆ ಮಡಿಕೇರಿ
ಕೊಡಗು ಜಿಲ್ಲೆಯಲ್ಲಿ ಈ ಬಾರಿ ತೀವ್ರ ಮಳೆ ಕೊರತೆಯುಂಟಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಐದೂ ತಾಲೂಕನ್ನು ಕೂಡ ಬರ ಪೀಡಿತ ಎಂದು ಘೋಷಣೆ ಮಾಡಲಾಗಿದೆ.
ಸುಂಟಿಕೊಪ್ಪ ಸಮೀಪದ ಚಿಕ್ಲಿಹೊಳೆ ಜಲಾಶಯವು 0.18 ಟಿಎಂಸಿ ನೀರಿನ ಸಾಮರ್ಥ್ಯವನ್ನು ಹೊಂದಿದೆ. ಮಳೆ ಇಲ್ಲದ ಪರಿಣಾಮ ಈ ಭಾಗದ ರೈತರ ಕೃಷಿ ಚಟುವಟಿಕೆಗೆ ನಿರಂತರವಾಗಿ ನೀರು ಹರಿಸಿದ ಪರಿಣಾಮ ಪ್ರಸ್ತುತ ಜಲಾಶಯದಲ್ಲಿ 0.035ರಷ್ಟು ಮಾತ್ರ ನೀರಿದೆ. ಅಂದರೆ ಅರ್ಧಕ್ಕಿಂತಲೂ ಕಡಿಮೆ ನೀರಿದ್ದು, ಆತಂಕಕ್ಕೆ ಕಾರಣವಾಗಿದೆ.ಈ ಬಾರಿ ಮುಂಗಾರು ಕೈಕೊಟ್ಟಿದೆ. ಇದರಿಂದ ಜಲಾಶಯಯದಲ್ಲಿ ನೀರಿನ ಪ್ರಮಾಣ ಕುಸಿತವಾಗಿದೆ. ನಂಜರಾಯಪಟ್ಟಣ, ಗುಡ್ಡೆಹೊಸೂರು, ರಂಗಸಮುದ್ರ, ಹೊಸಪಟ್ಟಣ, ದೊಡ್ಡ ಬೆಟ್ಟಗೇರಿ, ಬಸವನಹಳ್ಳಿ, ಬೊಳ್ಳೂರು ಸೇರಿದಂತೆ ಕೆಲವು ಭಾಗದ ರೈತರ ಭತ್ತದ ಕೃಷಿಗೆ ಚಿಕ್ಲಿಹೊಳೆ ಜಲಾಶಯದಿಂದ ನೀರು ಹರಿಸಲಾಗುತ್ತಿದೆ. ಪ್ರತಿ ದಿನ 25ರಿಂದ 30 ಕ್ಯುಸೆಕ್ ನೀರು ಹರಿಸಲಾಗುತ್ತದೆ. ಮಳೆ ಇದ್ದರೆ ಚಿಕ್ಲಿಹೊಳೆ ಜಲಾಶಯ ಈಗಲೂ ತುಂಬಿರುತ್ತಿತ್ತು. ನೀರು ಇಳಿಮುಖವಾಗಲು ಮಳೆಯ ಕೊರತೆ ಪ್ರಮುಖ ಕಾರಣವಾಗಿದ್ದು, ಜಲಾಶಯದ ತಳ ಕಾಣುತ್ತಿದೆ.
2017ರಲ್ಲಿ ಏಪ್ರಿಲ್ನಲ್ಲಿ ಚಿಕ್ಲಿಹೊಳೆ ಜಲಾಶಯ ಸಂಪೂರ್ಣ ಬತ್ತಿ ಹೋಗಿತ್ತು. ಆ ಸಂದರ್ಭ ಪುರಾತನ ದೇವಾಲಯವೂ ಕಾಣುತ್ತಿತ್ತು. ನಂತರ ಜಲಾಶಯದಲ್ಲಿ ಇಷ್ಟೊಂದು ಪ್ರಮಾಣದಲ್ಲಿ ನೀರು ಇಳಿಮುಖವಾಗಿರಲಿಲ್ಲ. ಆದರೆ ಇದೀಗ ನವೆಂಬರ್ನಲ್ಲೇ ನೀರು ಖಾಲಿಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಅಲ್ಲದೆ ಇನ್ನು ಬೇಸಗೆ ವರೆಗೆ ಮಳೆಯಾಗದಿದ್ದಲ್ಲಿ ಈ ಭಾಗದ ರೈತರಿಗೆ ನೀರಿನ ಸಮಸ್ಯೆ ಉಂಟಾಗಲಿದೆ. ಅಲ್ಲದೆ ಜಾನುವಾರು ಹಾಗೂ ಜಲಚರಗಳಿಗೂ ಆಪತ್ತು ಎದುರಾಗಲಿದೆ.
। ಕಿರಣ್ ಕುಮಾರ್, ಸಹಾಯಕ ಎಂಜಿನಿಯರ್ ಹಾರಂಗಿ ಅಣೆಕಟ್ಟೆ ಉಪ ವಿಭಾಗ
--------------ಹಾರಂಗಿ ಜಲಾಶಯದಲ್ಲಿ ಸದ್ಯಕ್ಕೆ ನೀರಿನ ಕೊರತೆ ಇಲ್ಲ. ರೈತರಿಗೆ ಕೃಷಿ ಚಟುವಟಿಕೆಗೆ ಕಾಲಕ್ಕೆ ತಕ್ಕಂತೆ ನಾಲೆಗಳ ಮೂಲಕ ನೀರು ಹರಿಸಲಾಗುತ್ತಿದೆ. ಪ್ರಸ್ತುತ 5.5 ಟಿಎಂಸಿ ನೀರಿದ್ದು, 2 ಟಿಎಂಸಿ ವರೆಗೆ ಬೆಳೆಗಳಿಗೆ ನೀಡಲಾಗುತ್ತದೆ.। ಪುಟ್ಟಸ್ವಾಮಿ, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಹಾರಂಗಿ