ಕನ್ನಡಪ್ರಭ ವಾರ್ತೆ, ತುಮಕೂರುಮಕ್ಕಳ ಶಿಕ್ಷಣ ಬಡತನ ನಿರ್ಮೂಲನೆಗೆ ಪ್ರಮುಖ ಸಾಧನವಾಗಿದ್ದು, ಮಕ್ಕಳನ್ನು ಶಾಲೆಗೆ ಕಳುಹಿಸಲು ಪ್ರೋತ್ಸಾಹಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಿ. ಜಯಂತ್ ಕುಮಾರ ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ವತಿಯಿಂದ ಶುಕ್ರವಾರ ನಗರದ ಬಾಲಭವನದಲ್ಲಿ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನದ ಅಂಗವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣ ಪಡೆಯುವ ಮಕ್ಕಳು ಜೀವನದ ಮೂಲಭೂತ ಪಾಠಗಳನ್ನು ಕಲಿಯುತ್ತಾರೆ ಎಂದು ಹೇಳಿದರು. ಮಕ್ಕಳನ್ನು ಕೆಲಸಕ್ಕೆ ಇಡುವುದು ಕಾನೂನುಬಾಹಿರವಾಗಿದ್ದು, ಇದರಿಂದ ಅವರ ಭವಿಷ್ಯ ಹಾನಿಯಾಗುತ್ತದೆ. ಆದ್ದರಿಂದ ಬಾಲ ಕಾರ್ಮಿಕ ಪದ್ಧತಿಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಸಾರ್ವಜನಿಕರು ಸಹಕರಿಸಬೇಕು ಎಂದು ಅವರು ಕರೆ ನೀಡಿದರು.ಮಕ್ಕಳಿಗೆ ಕಾನೂನು ಅರಿವು ಮೂಡಿಸುವುದು ಅತ್ಯವಶ್ಯಕವಾಗಿದ್ದು, ಯಾರಾದರೂ ಬಾಲಕಾರ್ಮಿಕರನ್ನು ಕಂಡರೆ ತಕ್ಷಣ ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡಬೇಕು. ಇದರಿಂದ ಮಕ್ಕಳ ಭವಿಷ್ಯವನ್ನು ರಕ್ಷಿಸಲು ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು. ಕುಟುಂಬದ ಆರ್ಥಿಕ ಸಂಕಷ್ಟವನ್ನು ನೆಪವನ್ನಾಗಿ ಮಾಡಿಕೊಂಡು ಮಕ್ಕಳನ್ನು ಕೆಲಸಕ್ಕೆ ಇಡುವುದು ಸರಿಯಲ್ಲ, ಸರ್ಕಾರ ನೀಡುವ ಸೌಲಭ್ಯಗಳನ್ನು ಬಳಸಿಕೊಂಡು ಮಕ್ಕಳಿಗೆ ಶಿಕ್ಷಣ ನೀಡಬೇಕು ಎಂದು ತಿಳಿಸಿದರು.ಕಾರ್ಯಕ್ರಮದಲ್ಲಿ ಮಾತನಾಡಿದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಗೋಪಾಲ್ ಅವರು, ಇಂದಿನ ಮಕ್ಕಳು ನಾಳೆಯ ಪ್ರಜೆಗಳಾಗಿದ್ದು, ಅವರ ಹಕ್ಕುಗಳನ್ನು ಕಾಪಾಡುವುದು ಎಲ್ಲರ ಕರ್ತವ್ಯವಾಗಿದೆ ಎಂದರು. ಬಾಲಕಾರ್ಮಿಕರನ್ನು ದುರುಪಯೋಗಪಡಿಸಿಕೊಂಡರೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.ಈ ಸಂದರ್ಭದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರಾದ ಲೋಕೇಶ್ ಧನಪಾಲ ಹವಲೆ ಪ್ರತಿಜ್ಞಾವಿಧಿ ಬೋಧಿಸಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಸಿದ್ದರಾಮಣ್ಣ ಎಸ್., ಕಾರ್ಮಿಕ ಇಲಾಖೆ ಅಧಿಕಾರಿಗಳಾದ ಪೈರಾಜ್ ಪಾಷ, ಇಬ್ರಾಹಿಂ ಹಾಗೂ ಬಾಲಕಾರ್ಮಿಕ ಯೋಜನಾ ನಿರ್ದೇಶಕರು ರವಿಕುಮಾರ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಕಟ್ಟಡ ಕಾರ್ಮಿಕರು ಮತ್ತಿತರರು ಇದ್ದರು.ಇದಕ್ಕೂ ಮುನ್ನ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನದ ಅಂಗವಾಗಿ ಜಿಲ್ಲಾಧಿಕಾರಿಗಳ ಕಚೇರಿಯಿಂದ ನಗರದ ಬಾಲಭವನದ ಸಭಾಂಗಣದವರೆಗೆ ಜಾಥಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.