ವೈದ್ಯರ ನಿರ್ಲಕ್ಷ್ಯದಿಂದ ಮಗು ಸಾವು: ಪೋಷಕರ ಆರೋಪ

KannadaprabhaNewsNetwork |  
Published : Oct 21, 2024, 12:32 AM IST
20ಕೆಎಂಎನ್‌ಡಿ-10ವೈದ್ಯರ ನಿರ್ಲಕ್ಷ್ಯದಿಂದ ಹೆರಿಗೆ ಸಮಯದಲ್ಲಿ ಮಗು ಸಾವನ್ನಪ್ಪಿದೆ ಎಂದು ಆರೋಪಿಸಿ ಸಂಬಂಧಿಕರು, ವಿವಿಧ ಸಂಘಟನೆಗಳ ಮುಖಂಡರು ಸಾರ್ವಜನಿಕ ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದರು. | Kannada Prabha

ಸಾರಾಂಶ

ಭಾನುವಾರ ಹೆರಿಗೆ ನೋವು ಕಾಣಿಸಿಕೊಂಡು ಹೆರಿಗೆಯಾಗಿದ್ದು, ವೈದ್ಯರ ವಿಳಂಬ ಕಾರಣದಿಂದ ಮಗು ಮೃತಪಟ್ಟಿದೆ. ಮಗು ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ನಮಗೆ ನ್ಯಾಯ ಸಿಗಬೇಕು ಎಂದು ಮಗುವಿನ ತಂದೆ ಗಿರೀಶ್ ಅಳಲು ವ್ಯಕ್ತಪಡಿಸಿದರು.

ಕನ್ನಡ ಪ್ರಭ ವಾರ್ತೆ ಮಳವಳ್ಳಿ

ಹೆರಿಗೆ ವೇಳೆ ವೈದ್ಯರ ನಿರ್ಲಕ್ಷ್ಯದಿಂದ ಮಗು ಮೃತಪಟ್ಟಿದೆ ಎಂದು ಆರೋಪಿಸಿ ಸಂಬಂಧಿಕರು ಹಾಗೂ ವಿವಿಧ ದಲಿತಪರ ಸಂಘಟನೆಗಳ ಮುಖಂಡರು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಮುಂಭಾಗ ಪ್ರತಿಭಟನೆ ನಡೆಸಿ ವೈದ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ತಾಲೂಕಿನ ಮಂಚನಹಳ್ಳಿ ಗ್ರಾಮದ ಗಿರೀಶ್- ಅಶ್ವಿನಿ ಎಂಬುವವರ ಮಗು ಮೃತಪಟ್ಟಿದ್ದು, ಅಶ್ವಿನಿ ಕಳೆದ ಎರಡು ದಿನಗಳ ಹಿಂದೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಹೆರಿಗೆಗಾಗಿ ದಾಖಲಾಗಿದ್ದು, ಕರ್ತವ್ಯದಲ್ಲಿದ್ದ ಡಾ.ರೇಣುಕಾ ದೇವಿ ತಪಾಸಣೆ ನಡೆಸಿದ್ದರು ಎನ್ನಲಾಗಿದೆ.

ಮಗುವಿನ ತೂಕ ಹೆಚ್ಚಿದ್ದ ಕಾರಣ ಶಸ್ತ್ರಚಿಕಿತ್ಸೆ ಮಾಡಿ ಮಗು ಹೊರ ತೆಗೆಯುವಂತೆ ಪೋಷಕರು ವೈದ್ಯರಿಗೆ ಮನವಿ ಮಾಡಿದ್ದರೂ ಡಾ.ರೇಣುಕಾ ದೇವಿ ಅವರು ನಾರ್ಮಲ್ ಹೆರಿಗೆಯಾಗಲಿದೆ ಎಂದು ಭರವಸೆ ನೀಡಿದ್ದರು. ಶಸ್ತ್ರಚಿಕಿತ್ಸೆಗಾಗಿ ಸಿಬ್ಬಂದಿ ಹಣಕ್ಕಾಗಿ ಒತ್ತಾಯಿಸಿದ್ದರು ಎನ್ನಲಾಗಿದೆ.

ಭಾನುವಾರ ಹೆರಿಗೆ ನೋವು ಕಾಣಿಸಿಕೊಂಡು ಹೆರಿಗೆಯಾಗಿದ್ದು, ವೈದ್ಯರ ವಿಳಂಬ ಕಾರಣದಿಂದ ಮಗು ಮೃತಪಟ್ಟಿದೆ. ಮಗು ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ನಮಗೆ ನ್ಯಾಯ ಸಿಗಬೇಕು ಎಂದು ಮಗುವಿನ ತಂದೆ ಗಿರೀಶ್ ಅಳಲು ವ್ಯಕ್ತಪಡಿಸಿದರು.

ಹಾಡ್ಲಿ ಗ್ರಾಪಂ ಅಧ್ಯಕ್ಷ ಚಲುವರಾಜು ಹಾಗೂ ದಲಿತ ಸಂಘಟನೆಯ ಸುರೇಶ್ ಮಾತನಾಡಿ, ಡಾ.ರೇಣುಕಾ ದೇವಿ ಅವರ ವಿರುದ್ಧ ಸಾಕಷ್ಟು ದೂರುಗಳು ಕೇಳಿ ಬರುತ್ತಿವೆ, ಸಂಬಂಧಿಸಿದ ಅಧಿಕಾರಿಗಳು ಈ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಸಾರ್ವಜನಿಕ ಆಸ್ಪತ್ರೆ ಆಡಳಿತಾಧಿಕಾರಿ ಡಾ.ಸಂಜಯ್ ಸ್ಥಳಕ್ಕೆ ಆಗಮಿಸಿ ಮಾತನಾಡಿ, ಪ್ರಕರಣ ಸಂಬಂಧ ವೈದ್ಯರು ಹಾಗೂ ಸಿಬ್ಬಂದಿಯಿಂದ ಮಾಹಿತಿ ಪಡೆದುಕೊಂಡಿದ್ದೇನೆ, ಕರ್ತವ್ಯ ಲೋಪವೆಸಗಿರುವ ವೈದ್ಯರು ಹಾಗೂ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಮೇಲಾಧಿಕಾರಿಗಳ ಗಮನಕ್ಕೆ ತರಲಾಗುವುದು. ಲಂಚ ಕೇಳಿದ ಹಾಗೂ ಪಡೆದ ದಾಖಲೆಗಳನ್ನು ಕೊಟ್ಟರೆ ಕಾನೂನು ಕ್ರಮಕ್ಕೆ ಮುಂದಾಗುತ್ತೇವೆ ಎಂದು ಭರವಸೆ ನೀಡಿದರು.

ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತ ಶಿಶು ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.

PREV

Recommended Stories

ಗುತ್ತಲದಲ್ಲಿ ಸಂಭ್ರಮದ ವೀರಭದ್ರೇಶ್ವರ ಜಾತ್ರಾ ಮಹೋತ್ಸವ
ಹಳಿಯಾಳದ ಮೆಕ್ಕೆಜೋಳದಲ್ಲಿ ಕೀಟನಾಶಕಗಳ ಪ್ರಮಾಣ ಅಧಿಕ