ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಲು ನ್ಯಾಯಾಧೀಶರಾದ ಜಿ.ಕೆ. ದಾಕ್ಷಾಯಿಣಿ ಕರೆ
ಬಾಲ್ಯವು ಪ್ರತಿಯೊಂದು ಮಗುವಿನ ಮೂಲಭೂತ ಹಕ್ಕಾಗಿದ್ದು, ಶಿಕ್ಷಣ, ಆರೋಗ್ಯ ಮತ್ತು ಉತ್ತಮ ಭವಿಷ್ಯದಿಂದ ಮಕ್ಕಳನ್ನು ವಂಚಿಸುವ ಬಾಲಕಾರ್ಮಿಕ ಪದ್ಧತಿಯನ್ನು ಸಂಪೂರ್ಣ ನಿರ್ಮೂಲನೆಗೊಳಿಸಲು ಸಮಾಜದ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜಿ.ಕೆ. ದಾಕ್ಷಾಯಿಣಿ ಕರೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಜಿಲ್ಲಾ ವಕೀಲರ ಸಂಘ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ವಿಶ್ವ ಬಾಲಕಾರ್ಮಿಕ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಜಾಗೃತಿ ಜಾಥಾಕ್ಕೆ ಹಸಿರು ಬಾವುಟ ಪ್ರದರ್ಶಿಸಿ ಚಾಲನೆ ನೀಡಿ ಅವರು ಮಾತನಾಡಿದರು.ಇಂದಿಗೂ ಸಮಾಜದಲ್ಲಿ ಅನೇಕ ಮಕ್ಕಳು ವಿವಿಧ ರೀತಿಯ ಶೋಷಣೆ ಮತ್ತು ದುಡಿಮೆಗೆ ಒಳಗಾಗುತ್ತಿರುವುದು ಅತ್ಯಂತ ದುಃಖಕರ ಸಂಗತಿಯಾಗಿದೆ. ಬಡತನ, ಆರ್ಥಿಕ ಸಂಕಷ್ಟ ಹಾಗೂ ಕುಟುಂಬದ ಪರಿಸ್ಥಿತಿಯಿಂದ ಅನೇಕ ಪೋಷಕರು ಮಕ್ಕಳನ್ನು ಶಾಲೆಗೆ ಕಳುಹಿಸುವ ಬದಲು ದುಡಿಮೆಗೆ ತಳ್ಳುತ್ತಿರುವ ಉದಾಹರಣೆಗಳು ಕಂಡುಬರುತ್ತಿವೆ. ಆದರೆ ಪ್ರತಿಯೊಬ್ಬ ಮಗುವಿಗೂ ಶಿಕ್ಷಣ ಪಡೆಯುವ, ಆಟವಾಡುವ ಮತ್ತು ಸುರಕ್ಷಿತ ವಾತಾವರಣದಲ್ಲಿ ಬೆಳೆಯುವ ಹಕ್ಕು ಸಂವಿಧಾನ ಮತ್ತು ಕಾನೂನಿನ ಮೂಲಕ ನೀಡಲಾಗಿದೆ ಎಂದು ಅವರು ತಿಳಿಸಿದರು.
೧೪ರಿಂದ ೧೮ ವರ್ಷದೊಳಗಿನ ಕಿಶೋರರನ್ನು ಅಪಾಯಕಾರಿಯಲ್ಲದ ಕೆಲವು ಉದ್ಯೋಗಗಳಲ್ಲಿ ಮಾತ್ರ ಕಾನೂನಿನ ವ್ಯಾಪ್ತಿಯಲ್ಲಿ ತೊಡಗಿಸಿಕೊಳ್ಳಬಹುದಾಗಿದೆ. ಆದರೆ ಯಾವುದೇ ಕಾರಣಕ್ಕೂ ಅವರ ಶಿಕ್ಷಣಕ್ಕೆ ಅಡ್ಡಿಯಾಗದಂತೆ ಹಾಗೂ ಆರೋಗ್ಯ ಮತ್ತು ಸುರಕ್ಷತೆಗೆ ಧಕ್ಕೆಯಾಗದಂತೆ ನೋಡಿಕೊಳ್ಳುವುದು ಪ್ರತಿಯೊಬ್ಬ ಉದ್ಯೋಗದಾತನ ಜವಾಬ್ದಾರಿಯಾಗಿದೆ ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಜಗದೀಶ್ ಗಂಗಣ್ಣ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಎಂ.ಎಸ್. ಮಧುಕುಮಾರಿ, ಉಪ ಕಾರ್ಮಿಕ ಆಯುಕ್ತ ಎಚ್.ಎಲ್. ಗುರುಪ್ರಸಾದ್, ಕಾರ್ಮಿಕ ಅಧಿಕಾರಿ ಆನಂದರಾಮ್, ರೋಟರಿ ೩೧೮೨ರ ಅಸಿಸ್ಟೆಂಟ್ ರೌರ್ನರ್ ಜೆ.ಎನ್. ಮಂಜುನಾಥ್, ರೋಟರಿ ಕ್ಲಬ್ ಆಫ್ ಹಾಸನ್ ಸನ್ ರೈಸ್ ಅಧ್ಯಕ್ಷ ಎಚ್.ಡಿ. ವಜ್ರಕುಮಾರ್, ಕಾರ್ಯದರ್ಶಿ ಕೆ.ಎಸ್. ಯೋಗೀಶ್, ಹಿರಿಯ ಸದಸ್ಯ ಎಂ.ಸಿ. ರಾಜು, ಬೋದೇಶ್, ಮಿಡ್ ಟೌನ್ ಅಧ್ಯಕ್ಷ ಸಿದ್ದೇಶ್ವರ್, ಯೋಜನಾ ನಿರ್ದೇಶಕಿ ಕನಕಲಕ್ಷ್ಮಿ, ಹಿರಿಯ ಪತ್ರಕರ್ತೆ ಹಾಗೂ ಸದಸ್ಯೆ ಲೀಲಾವತಿ, ಕೆ.ಟಿ. ಜಯಶ್ರೀ, ಕಲಾವಿದ ಬಿ.ಟಿ. ಮಾನವ ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.