ಕನ್ನಡಪ್ರಭ ವಾರ್ತೆ ಬೆಂಗಳೂರು
ಮಕ್ಕಳಿಗೆ ದಿನಪತ್ರಿಕೆ ಓದಿಸುವ ಹವ್ಯಾಸ ರೂಢಿಸಲು ಕೋರಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ್ ಕೊಸುಂಬೆ ಅವರು ರಾಜ್ಯ ಸರ್ಕಾರದ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದರು.
ಇಂದಿನ ಡಿಜಿಟಲ್ ಯುಗದಲ್ಲಿ ಮಕ್ಕಳು ಇಂಟರ್ನೆಟ್ ಶಿಕ್ಷಣ, ಮನೋರಂಜನೆ ಮತ್ತು ಸಾಮಾಜಿಕ ಜಾಲತಾಣಗಳಿಗೆ ಹೆಚ್ಚಿನ ಸಮಯಾವಕಾಶ ನೀಡುತ್ತಿದ್ದಾರೆ. ಅತಿಯಾದ ಮೊಬೈಲ್ ಬಳಕೆಯಿಂದ ಮಕ್ಕಳಲ್ಲಿ ಜ್ಞಾಪಕ ಶಕ್ತಿ ಕೊರತೆ, ಶ್ರವಣದೋಷ ಮತ್ತು ದೈಹಿಕ ಚಟುವಟಿಕೆಗಳಲ್ಲಿ ಆಸಕ್ತಿ ಇಲ್ಲದೇ ಇರುವಂತಹ ಲಕ್ಷಣಗಳು ಕಂಡು ಬರುತ್ತಿವೆ ಎಂದು ಪತ್ರದಲ್ಲಿ ತಿಳಿಸಿದ್ದರು.10ರಿಂದ 15 ನಿಮಿಷ ಓದಿಸಬೇಕು:
ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ಮತ್ತು ಸರ್ಕಾರದ ವಿವಿಧ ಇಲಾಖೆಗಳಿಂದ ನಡೆಯುತ್ತಿರುವ ವಸತಿ ಶಾಲೆ, ನಿಲಯಗಳು/ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಪ್ರತಿ ನಿತ್ಯವೂ ಬೆಳಗಿನ ಪ್ರಾರ್ಥನೆ ಸಮಯದ ನಂತರ ಮಕ್ಕಳಿಂದ 10 ನಿಮಿಷಗಳ ಕಾಲ ಕಡ್ಡಾಯವಾಗಿ ಕನ್ನಡ ದಿನಪತ್ರಿಕೆ ಓದುವ ಅಭ್ಯಾಸ ಅನುಷ್ಠಾನಗೊಳಿಸುವಂತೆ ಸುತ್ತೋಲೆಯಲ್ಲಿ ತಿಳಿಸಲಾಗಿದೆ.