ಕನ್ನಡಪ್ರಭ ವಾರ್ತೆ ಮಳವಳ್ಳಿ
ಶಾಲೆಗಳ ಪುನರಾರಂಭದ ಹಿನ್ನೆಲೆಯಲ್ಲಿ ಬಾಳೆಕಂದು, ತಳಿರು ತೋರಣಗಳಿಂದ ಸಿಂಗಾರಗೊಳಿಸಿ ಶಾಲೆಗಳಲ್ಲಿ ಹಬ್ಬದ ವಾತಾವರಣ ನಿರ್ಮಿಸಿ ಮಕ್ಕಳಲ್ಲಿ ಹೊಸ ಹುಮ್ಮಸ್ಸು ಮೂಡಿಸಿ ಸ್ವಾಗತಿಸಲಾಯಿತು.
ಕಳೆದ ಮೂರು ದಿನಗಳಿಂದ ಶಿಕ್ಷಕ ವೃಂದ ಎಲ್ಲ ಸಿದ್ಧತೆ ಮಾಡಿಕೊಂಡಿತ್ತು. ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷರು, ಸದಸ್ಯರು ಮಕ್ಕಳಿಗೆ ಸಿಹಿ ತಿನ್ನಿಸಿ, ಹೂ ಮತ್ತು ಪುಸ್ತಕಗಳನ್ನು ನೀಡಿ ಶಾಲೆಗಳಿಗೆ ಬರಮಾಡಿಕೊಂಡರು.ತಾಲೂಕಿನ ಕೆಲವು ಶಾಲೆಗಳಲ್ಲಿ ವಿಶೇಷವಾಗಿ ಅಲಂಕಾರ ಮಾಡಿ ವಿದ್ಯಾರ್ಥಿಗಳನ್ನು ಆಹ್ವಾನಿಸಿದ್ದಾರೆ. ಸಿಹಿ ತಿಂಡಿಗಳನ್ನು ನೀಡಿ ಖುಷಿಯಿಂದಲೇ ಪಾಠ ಪ್ರವಚನಗಳು ಆರಂಭಗೊಂಡಿವೆ. ವಿಶೇಷವಾಗಿ ಮಕ್ಕಳು ಗೋಡೆಯ ಮೇಲೆ ಅಂಟಿಸಿದ್ದ ಚಾಟ್ ನಲ್ಲಿ ಸಹಿ ಮಾಡಿದ ಗಮನ ಸೆಳೆದರು.
ತಾಲೂಕಿನ ವಿವಿಧ ಸರ್ಕಾರಿ ಶಾಲೆಗಳಿಗೆ ಬಿಇಒ ವಿ.ಇ.ಉಮಾ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಮಾತನಾಡಿದ ಅವರು, ಇಂದಿನಿಂದ ಎಲ್ಲ ಶಾಲೆಗಳು ಆರಂಭಗೊಂಡಿದ್ದು, ಬಹುತೇಕ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ, ಸಮವಸ್ತ್ರ ನೀಡಲಾಗಿದೆ ಎಂದರು.ಕಾಲೇಜು ಸಭಾಂಗಣ ನಿರ್ಮಾಣಕ್ಕೆ ಶಾಸಕರಿಂದ ಗುದ್ದಲಿ ಪೂಜೆ
ಶ್ರೀರಂಗಪಟ್ಟಣ:ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ 1.5 ಕೋಟಿ ರು. ವೆಚ್ಚದ ಕಾಲೇಜು ಸಭಾಂಗಣ ನಿರ್ಮಾಣ ಕಾಮಗಾರಿಗೆ ಶಾಸಕ ಹಾಗೂ ಸೆಸ್ಕ್ ಅಧ್ಯಕ್ಷ ರಮೇಶ ಬಂಡಿಸಿದ್ದೇಗೌಡ ಗುದ್ದಲಿ ಪೂಜೆ ನೆರವೇರಿಸಿದರು. ನಂತರ ಶಾಸಕರು ಮಾತನಾಡಿ, 1.5 ಕೋಟಿ ರು. ವೆಚ್ಚದಲ್ಲಿ ಸುಮಾರು 220 ಮಂದಿ ಕುಳಿತು ವೀಕ್ಷಿಸುವಂತಹ ಸಭಾಂಗಣವನ್ನು ನಿರ್ಮಿಸಲಾಗುತ್ತಿದೆ ಎಂದರು.
ಮುಂದಿನ 9 ತಿಂಗಳಲ್ಲಿ ಕಾಮಗಾರಿ ಮುಗಿಸುವ ಜೊತೆಗೆ ಸಭಾಂಗಣದಲ್ಲಿ ಶೌಚಾಲಯ, ಕುಡಿಯುವ ನೀರು ಸೇರಿದಂತೆ ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸಲು ಉದ್ದೇಶಿಸಲಾಗಿದೆ. ಗುಣಮಟ್ಟದ ಕಾಮಗಾರಿಗೆ ಹೆಚ್ಚಿನ ಆದ್ಯತೆ ನೀಡುವ ಜೊತೆಗೆ ನಿಗದಿತ ಸಮಯದಲ್ಲಿ ಕಾಮಗಾರಿ ಮುಗಿಸಿಕೊಡುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಿದರು. ಈ ವೇಳೆ ಪುರಸಭೆ ಪ್ರಭಾರ ಅಧ್ಯಕ್ಷ ಎಂ.ಎಲ್ ದಿನೇಶ್, ಸದಸ್ಯರಾದ ಗಂಜಾಂ ಕೃಷ್ಣಪ್ಪ, ದಯಾನಂದ್, ಪುರಸಭೆ ಮುಖ್ಯಾಧಿಕಾರಿ ರಾಜಣ್ಣ ಸೇರಿದಂತೆ ಕಾಲೇಜು ಪ್ರಾಂಶುಪಾಲರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.