ಉರ್ದು ಶಾಲೆಗಳಲ್ಲಿ ಮಕ್ಕಳ ಹಾಜರಾತಿ ಕುಸಿತ: ಕ್ಷೇತ್ರ ಶಿಕ್ಷಣಾಧಿಕಾರಿ ನಾಗಭೂಷಣ್

KannadaprabhaNewsNetwork |  
Published : Jun 19, 2025, 12:34 AM ISTUpdated : Jun 19, 2025, 12:35 AM IST
ಚಿತ್ರದುರ್ಗ ಮೂರನೇ ಪುಟದ ಲೀಡ್  | Kannada Prabha

ಸಾರಾಂಶ

ಉರ್ದು ಶಾಲೆಗಳಲ್ಲಿ ಮಕ್ಕಳ ಹಾಜರಾತಿ ಕಡಿಮೆ ಆಗುತ್ತಿರುವುದು ಆತಂಕಕಾರಿ ಸಂಗತಿ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ನಾಗಭೂಷಣ್ ಹೇಳಿದರು.

ಪ್ರಾಥಮಿಕ, ಪೌಢಶಾಲೆ ಉರ್ದು ಶಿಕ್ಷಕರ ಜಿಲ್ಲಾ ಮಟ್ಟದ ಕಾರ್ಯಾಗಾರ

ಕನ್ನಡಪ್ರಭ ವಾರ್ತೆ ಚಿತ್ರದುರ್ಗ

ಉರ್ದು ಶಾಲೆಗಳಲ್ಲಿ ಮಕ್ಕಳ ಹಾಜರಾತಿ ಕಡಿಮೆ ಆಗುತ್ತಿರುವುದು ಆತಂಕಕಾರಿ ಸಂಗತಿ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ನಾಗಭೂಷಣ್ ಹೇಳಿದರು.

ಮುಸ್ಲಿಂ ಎಜುಕೇಷನಲ್ ಅಂಡ್ ಎಂಪರ್ಮೆಂಟ್ ಟ್ರಸ್ಟ್ ವತಿಯಿಂದ ಜಿಲ್ಲೆಯ ಆರು ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಉರ್ದು ಶಿಕ್ಷಕರಿಗೆ ಅಹಮದ್ ಪ್ಯಾಲೇಸ್‍ನಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ಒಂದು ದಿನದ ಕಾರ್ಯಾಗಾರದಲ್ಲಿ ಪಾಲ್ಗೊಂಡು ಮಾತನಾಡಿದರು.

ಕಳೆದ ಐದಾರು ವರ್ಷಗಳಿಂದ ಉರ್ದು ಶಾಲೆಗಳಲ್ಲಿ ಮಕ್ಕಳ ಹಾಜರಾತಿ ಕಡಿಮೆಯಾಗುತ್ತಿದೆ. ಇದರಿಂದ ಶಿಕ್ಷಕರ ಸಂಖ್ಯೆಯೂ ಸಹಜವಾಗಿ ಕಡಿತಗೊಳ್ಳುತ್ತದೆ. 2010ರಲ್ಲಿ ಜಿಲ್ಲೆಯಲ್ಲಿ ಐದು ನೂರಕ್ಕೂ ಹೆಚ್ಚು ಉರ್ದು ಶಿಕ್ಷಕರಿದ್ದರು. ಏಕೆ ಕಡಿಮೆಯಾಗಿದೆ ಎನ್ನುವುದರ ಚಿಂತನವಾಗಬೇಕಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಅಲ್ಪಸಂಖ್ಯಾತ ಮಕ್ಕಳು ಶೈಕ್ಷಣಿಕವಾಗಿ ಬದಲಾವಣೆಯಾಗಬೇಕಿದೆ ಎಂದು ಹೇಳಿದರು.

ಶಿಕ್ಷಕರು ಆಸಕ್ತಿಯಿಂದ ಕೆಲಸ ಮಾಡದಿದ್ದರೆ ಜಿಲ್ಲೆಯಲ್ಲಿ ಉರ್ದು ಶಾಲೆಗಳು ಬೇರೆ ಶಾಲೆಗಳ ಜತೆ ವಿಲೀನವಾಗುವುದರಲ್ಲಿ ಅನುಮಾನವಿಲ್ಲ. ಮಾತೃ ಭಾಷೆಯಲ್ಲಿ ಮಗುವಿನ ಶಿಕ್ಷಣಕ್ಕೆ ಆದ್ಯತೆ ಕೊಡಬೇಕು. ಸ್ಪರ್ಧಾತ್ಮಕ ಯುಗದಲ್ಲಿ ಗುಣಮಟ್ಟದ ಶಿಕ್ಷಣವನ್ನು ಮಕ್ಕಳಿಗೆ ನೀಡದಿದ್ದರೆ ಸರ್ಕಾರಿ ಶಾಲೆಗಳು ಉಳಿಯುವುದಿಲ್ಲ. ಮಗುವಿನ ಸರ್ವತೋಮುಖ ಬೆಳೆವಣಿಗೆಗೆ ಶಿಕ್ಷಕರು ಪೂರಕವಾಗಿ ಕೆಲಸ ಮಾಡುವುದೇ ನಿಜವಾದ ಶಿಕ್ಷಣ ಎಂದರು.

ಡಿಡಿಪಿಐ ಮಂಜುನಾಥ್ ಮಾತನಾಡಿ, ವಿದ್ಯಾರ್ಥಿಗಳು ಶೈಕ್ಷಣಿಕ ಚಟುವಟಿಕೆಯಲ್ಲಿ ಹಿಂದೆ ಬಿದ್ದಿದ್ದಾರೆ ಎಂಬ ಕಾರಣಕ್ಕೆ ಅವರನ್ನು ಮೂದಲಿಸಿ ಅವಮಾನಿಸುವ ಬದಲು ಓದಲು ಪ್ರೇರೇಪಿಸಿಬೇಕು. ಉರ್ದು ಮಾಧ್ಯಮದಲ್ಲಿ ಫಲಿತಾಂಶ ಸುಧಾರಣೆ ಆಗಬೇಕಾಗಿರುವುದರಿಂದ ಮಕ್ಕಳ ಮನಸ್ಸಿಗೆ ನಾಟುವಂತೆ ಬೋಧಿಸಿ ಮನೋಸ್ಥೈರ್ಯ ತುಂಬುವ ಹೊಣೆಗಾರಿಕೆ ಶಿಕ್ಷಕರ ಮೇಲಿದೆ ಎಂದರು.

ವರ್ಣಮಾಲೆ ಅಕ್ಷರ ಲಿಪಿಯಿಂದ ಹಿಡಿದು ಶುದ್ದವಾಗಿ ಬರೆಯುವುದನ್ನು ಮೊದಲು ಮಕ್ಕಳಿಗೆ ಕಲಿಸಬೇಕು. ಕೇಳಿಸಿಕೊಳ್ಳುವುದು, ಮಾತನಾಡುವುದು, ಓದುವುದು, ಬರೆಯುವುದು ಸರಿಯಿದ್ದಾಗ ಗಣಿತ, ಆಂಗ್ಲ, ವಿಜ್ಞಾನ ಭಾಷೆಗಳನ್ನು ಸುಲಭವಾಗಿ ಅರ್ಥಮಾಡಿಕೊಂಡು ಪರೀಕ್ಷೆಯಲ್ಲಿ ಹೆಚ್ಚಿನ ಅಂಕಗಳನ್ನು ಗಳಿಸಬಹುದು ಎಂದು ಹೇಳಿದರು.

ನಿಧಾನಗತಿಯಲ್ಲಿ ಕಲಿಯುವ ಮಕ್ಕಳ ಪಟ್ಟಿ ಮಾಡಿ ಯಾವ ವಿಷಯದ ಕಲಿಕೆಯಲ್ಲಿ ಹಿಂದಿದ್ದಾರೆನ್ನುವುದನ್ನು ಗಮನಿಸಿ ಸರ್ವತೋಮುಖ ಬೆಳವಣಿಗೆಗೆ ಉರ್ದು ಶಿಕ್ಷಕರು ಶ್ರಮಿಸಬೇಕು. ಯಾವುದೇ ಭಾಷೆಯನ್ನಾಗಲಿ ಸರಳವಾಗಿ ಕಲಿಸಿ. ಕೂಡುವುದು, ಕಳೆಯುವುದು, ಭಾಗಿಸುವುದು ಸರಿಯಾಗಿ ಬರಬೇಕು. ಅದಕ್ಕಾಗಿ ಮಕ್ಕಳಿಗೆ ಪ್ರತಿನಿತ್ಯವು ಡ್ರಿಲ್ಲಿಂಗ್ ಮಾಡಬೇಕು. ತರಗತಿಯಲ್ಲಿ ಮಕ್ಕಳನ್ನು ಬೈಯುವ ಬದಲು ಪ್ರೋತ್ಸಾಹಿಸಿ ಶಿಕ್ಷಣದ ಕಡೆ ಆಸಕ್ತಿ ಮೂಡುವಂತೆ ನೋಡಿಕೊಳ್ಳಿ ಎಂದರು.

ಮುಸ್ಲಿಂ ಎಜುಕೇಷನಲ್ ಅಂಡ್ ಎಂಪವರ್ಮೆಂಟ್ ಟ್ರಸ್ಟ್ ಅಧ್ಯಕ್ಷ ನಿವೃತ್ತ ಡಿವೈಎಸ್ಪಿ ಸೈಯದ್ ಇಸಾಕ್ ಮಾತನಾಡಿ, ಟ್ರಸ್ಟ್ ಆರಂಭಿಸಿ ಐದು ವರ್ಷಗಳಾಗಿದೆ. ಅಂದಿನಿಂದ ಪ್ರತಿ ವರ್ಷವೂ ಜಿಲ್ಲೆಯ ಉರ್ದು ಶಿಕ್ಷಕರುಗಳಿಗೆ ಕಾರ್ಯಾಗಾರವನ್ನು ನಡೆಸಿಕೊಂಡು ಬರಲಾಗುತ್ತಿದೆ. ಮುಸ್ಲಿಂ ಸಮಾಜದ ಮಕ್ಕಳು ಶಾಲೆ ಬಿಟ್ಟು ಚಿಕ್ಕಂದಿನಲ್ಲಿಯೇ ಕೆಲಸಕ್ಕೆ ಹೋಗುವ ಬದಲು ಶಿಕ್ಷಣವಂತರಾಗಬೇಕೆಂಬುದು ನನ್ನ ಆಸೆ. ಅದಕ್ಕೆ ಶಿಕ್ಷಕರ ಪರಿಶ್ರಮವೂ ಮುಖ್ಯ ಎಂದರು.

ನಿವೃತ್ತ ಡಿವೈಎಸ್ಪಿ ಅಬ್ದುಲ್‍ರೆಹಮಾನ್, ನಿವೃತ್ತ ಸಬ್‍ ಇನ್‌ಸ್ಪೆಕ್ಟರ್ ನಾಗರಾಜ್, ಉರ್ದು ಇಸಿಓ. ಸಮೀರ, ಶಬ್ಬೀರ್ ಅಹಮದ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

‘ಕನ್ನಡಪ್ರಭ, ಏಷ್ಯಾನೆಟ್‌ ಸುವರ್ಣ ನ್ಯೂಸ್‌’ನ ಸಹಯೋಗದಲ್ಲಿ ಆಯೋಜಿಸಿದ್ದ ‘ಕೆಂಗೇರಿ ಸಂಭ್ರಮ’ಕ್ಕೆ ವಿದ್ಯುಕ್ತ ತೆರೆ
ಸರ್ವಾಧ್ಯಕ್ಷರಾಗಿ ಸೋಮಲಿಂಗ ಗೆಣ್ಣೂರ ಆಯ್ಕೆ