
ಕನ್ನಡಪ್ರಭ ವಾರ್ತೆ ತುಮಕೂರು
ಅವರು ಸಿರಾ ನಗರದ ಸರ್ಕಾರಿ ಪ್ರೌಢಶಾಲೆಯಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಸಿರಾ ತಾಲೂಕು ಆಡಳಿತದ ವತಿಯಿಂದ ಹಮ್ಮಿಕೊಂಡಿದ್ದ ಮಕ್ಕಳೊಂದಿಗೆ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಆಡಳಿತ ಮತ್ತು ಪ್ರಜಾಪ್ರಭುತ್ವ ಪ್ರಕ್ರಿಯೆಗಳಲ್ಲಿ ಮಕ್ಕಳನ್ನು ತೊಡಗಿಸಿಕೊಳ್ಳುವುದು ಅವರಲ್ಲಿ ಜವಾಬ್ದಾರಿ, ವಿಶ್ವಾಸ ಮತ್ತು ಪ್ರಜಾಪ್ರಭುತ್ವ ಮೌಲ್ಯಗಳಿಗೆ ಗೌರವದ ಪ್ರಜ್ಞೆಯನ್ನು ಬೆಳೆಸಲು ಸಹಾಯ ಮಾಡುತ್ತದೆ. ಮಕ್ಕಳು ತಮ್ಮ ಭಾವನೆಗಳು ಮತ್ತು ಅಭಿಪ್ರಾಯಗಳನ್ನು ಹಂಚಿಕೊಳ್ಳಲು ಪ್ರೋತ್ಸಾಹಿಸಿದಾಗ, ಅವರು ಜವಾಬ್ದಾರಿಯುತ ಹಾಗೂ ಪ್ರಶ್ನೆಮಾಡಬಲ್ಲ ನಾಗರೀಕರಾಗಿ ರೂಪುಗೊಳ್ಳುತಾರೆ ಎಂದರು.ಸಂವಾದಲ್ಲಿ ಸಿರಾ ನಗರ ಹಾಗೂ ಗ್ರಾಮೀಣ ಭಾಗದ 200 ಕ್ಕೂ ಹೆಚ್ಚು ಮಕ್ಕಳು ಭಾಗವಹಿಸಿ ತಮ್ಮ ಅಹವಾಲುಗಳನ್ನು ಹಂಚಿಕೊಂಡರು. ಶಾಲೆಗಳಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಒದಗಿಸುವುದು, ಕೊಠಡಿಗಳ ದುರಸ್ಥಿ, ಶಾಲಾ ಸಮಯಕ್ಕೆ ಬಸ್ ವ್ಯವಸ್ಥೆ ಇಲ್ಲದಿರುವುದು, ಬಸ್ ಗಳ ಸಮಯ ಬದಲಾವಣೆ ಮಾಡುವುದು, ಶಾಲಾ ಆವರಣಗಳಲ್ಲಿ ಕುಡುಕರ ಹಾವಳಿ ತಪ್ಪಿಸುವುದು, ರಸ್ತೆಯಲ್ಲಿ ವೀಲಿಂಗ್ ಮಾಡುವುದನ್ನು ತಪ್ಪಿಸುವುದು, ಶಾಲೆಯ ಬಳಿ ಸೂಚನಾ ಫಲಕ ಹಾಕುವುದು, ಸಿರಾ ನಗರದ ರಸ್ತೆ ಬದಿಗಳಲ್ಲಿ ಸುರಿದಿರುವ ಕಸದ ರಾಶಿಯನ್ನು ತೆರವುಗೊಳಿಸುವುದು, ಶಾಲೆ ಬಿಟ್ಟ ಮಕ್ಕಳನ್ನು ಶಾಲೆಗೆ ಕರೆತರುವುದು, ಬಾಲ ಕಾರ್ಮಿಕರನ್ನು ರಕ್ಷಿಸುವುದು, ಶಾಲೆಗಳಲ್ಲಿ ಆಟದ ಅವಧಿಗಳನ್ನು ಕಡಿತಮಾಡದಿರುವುದು, ಶಾಲೆಗೆ ಕಂಪ್ಯೂಟರ್ ವ್ಯವಸ್ಥೆ ಮಾಡುವುದು, ಹೀಗೆ ಮಕ್ಕಳು ತಾವು ಎದುರಿಸುತ್ತಿರುವ ಹತ್ತಾರು ಸಮಸ್ಯೆಗಳನ್ನು ನೆರೆದಿದ್ದ ಆಯೋಗದ ಸದಸ್ಯರು ಹಾಗೂ ಅಧಿಕಾರಿಗಳ ಮುಂದೆ ಹಂಚಿಕೊಂಡರು.
ಸಂವಾದದಲ್ಲಿ ಸಿರಾ ತಾಲೂಕು ತಹಸೀಲ್ದಾರರು ಹಾಗೂ ದಂಡಾಧಿಕಾರಿ ಆನಂದ್ ಕುಮಾರ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪವಿತ್ರ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಸೌಮ್ಯ, ಪೌರಾಯುಕ್ತ ರುದ್ರೇಶ್, ತಾಲ್ಲೂಕು ಆರೋಗ್ಯಾಧಿಕಾರಿ ಸಿದ್ಧೇಶ್ವರ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಬಡಿಗೇರ್, ಪಿಎಸ್.ಐ ರೇಣುಕಾ ಯಾದವ್, ಕಾರ್ಮಿಕ ನಿರೀಕ್ಷಕ ಅಬ್ದುಲ್ ರಪುಲ್, ಕೆ.ಎಸ್.ಆ.ಟಿಸಿ ಅಧಿಕಾರಿಕಾರಿಗಳು ಸೇರಿದಂತೆ ಹಲವಾರು ಅಧಿಕಾರಿಗಳು ಭಾಗವಹಿಸಿ ಮಕ್ಕಳ ಸಮಸ್ಯೆಗಳನ್ನು ಆಲಿಸಿ ಆಯಾ ಇಲಾಖೆಗೆ ಸಂಬಂಧಿಸಿದಂತೆ ಉತ್ತರಿಸಿದರು. ಸಂವಾದದಲ್ಲಿ ಮಕ್ಕಳ ಸಮಸ್ಯೆಗಳನ್ನು ಆಲಿಸಿದ ಆಯೋಗದ ಸದಸ್ಯ ಡಾ.ತಿಪ್ಪೇಸ್ವಾಮಿ ಕೆ.ಟಿ. ಮುಂದಿನ ಒಂದು ತಿಂಗಳ ಒಳಗಾಗಿ ಮಕ್ಕಳು ಸಂವಾದದಲ್ಲಿ ಕೇಳಿದ ಪ್ರಶ್ನೆಗಳನ್ನು ಆಯಾ ಇಲಾಖೆಯ ಅಧಿಕಾರಿಗಳು ಪರಿಹರಿಸಿ ಆಯೋಗಕ್ಕೆ ವರದಿ ಸಲ್ಲಿಸುವಂತೆ ಸೂಚಿಸಿದರು.