ಗದಗ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದಿಂದ ಮಕ್ಕಳ ಅಭಿವೃದ್ಧಿ ಹಾಗೂ ಮಕ್ಕಳ ರಕ್ಷಣೆಗಾಗಿ ಸಾಕಷ್ಟು ಯೋಜನೆಗಳಿವೆ. ಅವುಗಳನ್ನು ಮಕ್ಕಳಿಗೆ ತಲುಪಿಸುವ ಕಾರ್ಯವನ್ನು ಸತತವಾಗಿ ಮಾಡುತ್ತ ಬಂದಿದ್ದು ಮಕ್ಕಳು ತಮಗಿರುವ ಹಕ್ಕುಗಳು ಹಾಗೂ ಯೋಜನೆಗಳ ಕುರಿತು ತಿಳಿದುಕೊಂಡಿರಬೇಕು. ಅಂದಾಗ ಮಾತ್ರ ಮಕ್ಕಳು ಉತ್ತಮ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ನಿರೂಪಣಾಧಿಕಾರಿ ರಾಧಾ ಜಿ. ಮಣ್ಣೂರು ಹೇಳಿದರು.
ನಗರದ ಜಗದ್ಗುರು ತೋಂಟದಾರ್ಯ ಪ್ರೌಢಶಾಲೆಯಲ್ಲಿ ಜಿಲ್ಲಾಡಳಿತ, ಜಿಪಂ, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಮಕ್ಕಳ ರಕ್ಷಣಾ ನಿರ್ದೇಶನಾಲಯ ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಹಯೋಗದಲ್ಲಿ ಬಾಲನ್ಯಾಯ ಕಾಯ್ದೆ- ಪೋಕ್ಸೊ ಕಾಯ್ದೆ, ಬಾಲ್ಯವಿವಾಹ ನಿಷೇಧ ಕಾಯ್ದೆ ಹಾಗೂ ಆರ್.ಟಿ.ಇ ಕಾಯ್ದೆ, ಬಾಲಕಾರ್ಮಿಕ ಹಾಗೂ ಭಿಕ್ಷಾಟನೆ ನಿಷೇಧ ಹಾಗೂ ನಿಯಂತ್ರಣ ಕಾಯ್ದೆಯ ಹಾಗೂ ಮನೋಸಾಮಾಜಿಕ ಸಮಸ್ಯೆಗಳು ಹಾಗೂ ಪರಿಹಾರ ಕುರಿತು ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ನಡೆದ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಅನ್ನಪೂರ್ಣ ಗಾಣಿಗೇರ ಮಾತನಾಡಿ, ಶಾಲಾ ವಿದ್ಯಾರ್ಥಿಗಳೆಲ್ಲ ಉತ್ತಮ ನಡುವಳಿಕೆಯೊಂದಿಗೆ ತಮ್ಮ ಗೌರವ ಕಾಪಾಡಿಕೊಳ್ಳಬೇಕು ಹಾಗೂ ತಮ್ಮ ಭವಿಷ್ಯದ ಕುರಿತು ಕಾಳಜಿ ಉಳ್ಳವರಾಗಿರಬೇಕು ಎಂದರು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಡಾ. ಸೋಮಶೇಖರ ಬಿಜ್ಜಳ ಮಾತನಾಡಿ, ಮಕ್ಕಳು ಹದಿವಯಸ್ಸಿನಲ್ಲಿ ಆಗುವ ದೈಹಿಕ, ಮಾನಸಿಕ, ಭೌದ್ಧಿಕ ಬದಲಾವಣೆಗಳು ಮಕ್ಕಳಿಗಿಂತ ತಂದೆ-ತಾಯಿಗಳು ಹೆಚ್ಚಾಗಿ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಬೆಳವಣಿಗೆಗೆ ತಾಯಿ ಗರ್ಭದಿಂದಲೇ ಆರೈಕೆ ಮುಖ್ಯ. ಅನುವಂಶಿಕತೆ ಹಾಗೂ ಮಿದುಳಿನ ಬೆಳವಣಿಗೆಗೆ ಅದು ಸಾಕಷ್ಟು ಪರಿಣಾಮಕಾರಿ. ಹೀಗಾಗಿ ಹೆಣ್ಣು ಮಕ್ಕಳು ಗರ್ಭಿಣಿಯಾದಾಗ ಉತ್ತಮ ವಿಚಾರ ಹಾಗೂ ವಾತಾವರಣ ಹೊಂದುವುದು ಅವಶ್ಯಕವಾಗಿದೆ ಎಂದು ತಿಳಿಸಿದರು.ಈ ವೇಳೆ ಜ. ತೋಂಟದಾರ್ಯ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಕೋಟ್ರೇಶ ಮೆಣಸಿನಕಾಯಿ, ರಮೇಶ ಕಳ್ಳಿಮನಿ, ರೂಪಾ ಉಪ್ಪಿನ್, ಲಲಿತಾ ಕುಂಬಾರ, ಬೈಲಪ್ಪಗೌಡ ಮಲ್ಲನಗೌಡ್ರ ಸೇರಿದಂತೆ ಇತರರು ಇದ್ದರು. ರಮೇಶ ಕಳ್ಳಿಮನಿ ನಿರೂಪಿಸಿದರು.