ಚಿನಕುರಳಿ ಪ್ರೇಮ ಪ್ರಕರಣ: ಲವ್ ಜಿಹಾದ್ ಶಂಕೆ, ತನಿಖೆಗೆ ಒತ್ತಾಯ

KannadaprabhaNewsNetwork |  
Published : Jul 19, 2025, 01:00 AM IST
17ಕೆಎಂಎನ್ ಡಿ22 | Kannada Prabha

ಸಾರಾಂಶ

ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಆರೋಪಿ ಪತ್ತೆಗೆ ಕ್ರಮ ಕೈಗೊಂಡು ಆರೋಪಿಯನ್ನು ದಸ್ತಗಿರಿ ಮಾಡಲಾಗಿದೆ. ಯುವತಿಯನ್ನು ಮಂಡ್ಯದ ಮಹಿಳಾ ಸಾಂತ್ವನ ಕೇಂದ್ರಕ್ಕೆ ಕಳುಹಿಸಲಾಗಿದೆ.

ಕನ್ನಡಪ್ರಭ ವಾರ್ತೆ ಪಾಂಡವಪುರ

ತಾಲೂಕಿನ ಚಿನಕುರಳಿ ಗ್ರಾಮದ ಪ್ರೇಮ ಪ್ರಕರಣದಲ್ಲಿ ಲವ್ ಜಿಹಾದ್ ಷಡ್ಯಂತ್ರ ನಡೆದಿದೆ. ಈ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಹಿಂದೂಪರ ಸಂಘಟನೆಗಳು ಪಟ್ಟಣದ ಪೊಲೀಸ್ ಇನ್ಸ್‌ಪೆಕ್ಟರ್ ಶರತ್ ಕುಮಾರ್ ಅವರನ್ನು ಒತ್ತಾಯಿಸಿದರು.

ವಿಶ್ವ ಹಿಂದೂ ಪರಿಷತ್, ಬಜರಂಗದಳ ಹಾಗೂ ಬಿಜಿಪಿ ಕಾರ್ಯಕರ್ತರು ಗುರುವಾರ ಪೊಲೀಸ್ ಠಾಣೆಗೆ ತೆರಳಿ, ಯುವತಿ ಕಾಣೆಯಾಗಿರುವುದು ಇದು ಲವ್ ಜಿಹಾದ್ ಪ್ರಕರಣವಾಗಿದೆ. ಈ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ಸಮಗ್ರ ತನಿಖೆಗೆ ಒಳಪಡಿಸಬೇಕು. ಇದರಲ್ಲಿ ಭಾಗಿಯಾಗಿರುವ ಪ್ರತಿಯೊಬ್ಬರ ಮೇಲೂ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಗ್ರಾಮದ ಗೌಸ್ ಪಾಷಾ ಪುತ್ರ ಮುಜಾಸಿನ್ ಪಾಷಾ, ಶಿವಣ್ಣರ ಮಗಳು ಎಸ್.ಸಹನಾರನ್ನು ನಂಬಿಸಿ ಪ್ರೀತಿ ಬಲೆಗೆ ಸಿಲುಕಿಸಿದ್ದಾನೆ. ಈ ಪ್ರಕರಣ ಕೇವಲ ಪ್ರೇಮ ಪ್ರಕರಣವಲ್ಲ. ಇದರ ಹಿಂದೆ ಲವ್ ಜಿಹಾದ್ ನಡೆದಿದೆ ಎಂಬ ಅನುಮಾನ ಕಾಡುತ್ತಿದೆ ಎಂದು ದೂರಿದರು.

ಹಿಂದೂ ಯುವತಿಯರನ್ನು ಲವ್ ಜಿಹಾದ್‌ಗೆ ಕೆಡವಲು ದೊಡ್ಡ ಹುನ್ನಾರವೇ ನಡೆದಿದೆ. ಗ್ರಾಮದಲ್ಲಿ ಈ ಹಿಂದೆ ನಾಯಿ ಮಾಂಸ ಮಾರಾಟ ಹಾಗೂ ಕೋಮು ಗಲಭೆ ಸೃಷ್ಟಿಗೆ ಅಗತ್ಯ ಬೆಳವಣಿಗೆಗಳು ನಡೆದಿವೆ. ಇದು ಅತ್ಯಂತ ಗಂಭೀರ ಪ್ರಕರಣವಾಗಿದೆ ಎಂಬ ಮಾಹಿತಿ ನಮಗೂ ಲಭ್ಯವಾಗಿದೆ. ಇಡೀ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ದೊಡ್ಡ ಮಟ್ಟದ ತನಿಖೆ ನಡೆಸಬೇಕು ಎಂದು ಸಂಘಟನೆಗಳ ಕಾರ್ಯಕರ್ತರು ಪಟ್ಟು ಹಿಡಿದರು.

ಲವ್ ಜಿಹಾದ್ ಗೆ ಒಳಗಾದ ಯುವತಿಯ ಸ್ನೇಹಿತೆಯರು ಕೂಡ ಈ ಜಾಲಕ್ಕೆ ಸಿಲುಕಿರುವ ಬಗ್ಗೆ ಸ್ಥಳೀಯರಿಂದ ಸಂಶಯ ವ್ಯಕ್ತವಾಗುತ್ತಿದೆ. ಮುಸ್ಲಿಮರು ಪ್ರಾಬಲ್ಯ ಹೊಂದಿರುವ ಚಿನಕುರಳಿ ಗ್ರಾಮವನ್ನು ಸೂಕ್ಷ್ಮ ಪ್ರದೇಶವೆಂದು ಪರಿಗಣಿಸಿ ಇಲ್ಲಿ ನಡೆಯುತ್ತಿರುವ ಚಟುವಟಿಕೆಗಳ ಮೇಲೆ ಪೊಲೀಸರು ಗಮನಹರಿಸಬೇಕು ಎಂದು ಆಗ್ರಹಿಸಿದರು.

ನಮಗೆ ನ್ಯಾಯ ಸಿಗುತ್ತದೆ ಎಂಬ ಕಾರಣಕ್ಕೆ ನಾವು ಹೋರಾಟ ಮತ್ತು ಪ್ರತಿಭಟನೆಯ ಹಾದಿ ಹಿಡಿಯುತ್ತಿಲ್ಲ. ಈ ಪ್ರಕರಣದ ತನಿಖೆ ನಡೆದು ತಪ್ಪಿತಸ್ಥರಿಗೆ ಶಿಕ್ಷೆಯಾಗದಿದ್ದರೆ ಅಥವಾ ಪ್ರಕರಣವನ್ನು ಮುಚ್ಚಿಹಾಕುವ ಪ್ರಯತ್ನಗಳು ನಡೆದರೆ ನಾವು ಹೋರಾಟದ ಹಾದಿ ಹಿಡಿಯಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಪ್ರೇಮ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಆರೋಪಿ ಪಶ್ವಿಮ ಬಂಗಾಳ ಸೇರಿದಂತೆ ಹಲವು ನಗರಗಳಲ್ಲಿ ತಿಂಗಳುಗಟ್ಟಲೇ ಉಳಿದುಕೊಂಡು ಲವ್ ಜಿಹಾದ್ ತರಬೇತಿ ಪಡೆದುಕೊಂಡಿದ್ದಾನೆ. ಆತ ಪಶ್ಚಿಮಬಂಗಾಳದಲ್ಲಿ ತಿಂಗಳುಗಟ್ಟಲೇ ಯಾವ ಕಾರಣಕ್ಕೆ ನೆಲೆಸಿದ್ದ ಎಂಬುದರ ಬಗ್ಗೆ ತನಿಖೆ ಮಾಡಬೇಕು ಎಂದು ಪ್ರತಿಭಟನಕಾರರು ಒತ್ತಾಯಿಸಿದರು.

ಪೊಲೀಸ್ ಇನ್ಸ್‌ಪೆಕ್ಟರ್ ಶರತ್ ಕುಮಾರ್ ಮಾತನಾಡಿ, ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಆರೋಪಿ ಪತ್ತೆಗೆ ಕ್ರಮ ಕೈಗೊಂಡು ಆರೋಪಿಯನ್ನು ದಸ್ತಗಿರಿ ಮಾಡಲಾಗಿದೆ. ಯುವತಿಯನ್ನು ಮಂಡ್ಯದ ಮಹಿಳಾ ಸಾಂತ್ವನ ಕೇಂದ್ರಕ್ಕೆ ಕಳುಹಿಸಲಾಗಿದೆ. ನೀವು ಹೇಳಿರುವ ಎಲ್ಲಾ ವಿಚಾರಗಳನ್ನು ಪರಿಗಣನೆಗೆ ತೆಗೆದುಕೊಂಡು ಸೂಕ್ತ ಕಾನೂನು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಈ ವೇಳೆ ಬಿಜೆಪಿ ರೈತಮೋರ್ಚಾ ಮಾಜಿ ಜಿಲ್ಲಾಧ್ಯಕ್ಷ ಎಚ್.ಎನ್.ಮಂಜುನಾಥ್, ಹಿಂದೂ ಪರ ಸಂಘಟನೆ ಮುಖಂಡರಾದ ಹಿರೇಮರಳಿ ಶ್ರೀನಿವಾಸ್, ಕೆನ್ನಾಳು ಕಮಲೇಶ್, ಡಾಮಡಹಳ್ಳಿ ಕೇಶವ, ಪಾಂಡಿದೊರೆ, ದೊರೆಸ್ವಾಮಿ, ಎಂ.ರಾಜು, ಬಿಜೆಪಿ ತಾಲೂಕು ಪ್ರಧಾನ ಕಾರ್ಯದರ್ಶಿ ಮಲ್ಲೇಶ್, ಎಣ್ಣೆಹೊಳೆಕೊಪ್ಪಲು ನಿರಂಜನ್ ಇತರರು ಇದ್ದರು.

PREV

Latest Stories

ನ್ಯಾಯಾಂಗದ ಸ್ವಾತಂತ್ರ್ಯ ರಕ್ಷಣೆಗೆ ಕ್ರಮ : ನ್ಯಾ.ವಿಭು
ಕೃಷ್ಣಾ ಮೇಲ್ದಂಡೆ-3 ಭೂಸ್ವಾಧೀನಕ್ಕೆ 2.01 ಲಕ್ಷ ಕೋಟಿ ಬೇಕು : ಸಚಿವ ಕೃಷ್ಣ
ನಮ್ಮ ಗ್ಯಾರಂಟಿ ಯೋಜನೆ ದೇಶಕ್ಕೇ ಮಾದರಿ - ಟೀಕಿಸಿದ್ದ ಬಿಜೆಪಿಯೇ ಕಾಪಿ ಮಾಡಿದೆ : ಡಿಸಿಎಂ ಡಿಕೆಶಿ