ಕನ್ನಡಪ್ರಭವಾರ್ತೆ ಚಿತ್ರದುರ್ಗ
ಚಿತ್ರದುರ್ಗ ಲೋಕಸಭೆ ಕ್ಷೇತ್ರ ಪರಿಶಿಷ್ಟರಿಗೆ ಮೀಸಲಾಗಿದೆ. ಮಧ್ಯ ಕರ್ನಾಟಕದಲ್ಲಿ ಮಾದಿಗ ಸಮುದಾಯ ವಿಸ್ತೃತವಾಗಿ ಹರಡಿರುವುದರಿಂದ ಆ ಸಮುದಾಯಕ್ಕೆ ಟಿಕೆಟ್ ನೀಡಬೇಕೆಂಬ ಬಿಗಿ ಪಟ್ಟು ಬಿಜೆಪಿಯಲ್ಲಿದೆ. ಕಾಂಗ್ರೆಸ್ ಕೂಡಾ ಇದಕ್ಕೆ ಹೊರತಾಗಿಲ್ಲ. ಮಾದಿಗ ಸಮುದಾಯಕ್ಕೆ ಸೇರಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಬಿ.ಎನ್.ಚಂದ್ರಪ್ಪಗೆ ಕಾಂಗ್ರೆಸ್ ಈಗಾಗಲೇ ಟಿಕೆಟ್ ನೀಡಿದೆ. ಹಾಗಾಗಿ ಬಿಜೆಪಿ ಯಾರಿಗೆ ನೀಡುತ್ತದೆ ಎಂಬ ಕುತೂಹಲ ರಾಜಕೀಯದಲ್ಲಿದೆ.ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ತಾವು ಈ ಬಾರಿ ಸ್ಪರ್ಧೆ ಮಾಡುವುದಿಲ್ಲವೆಂಬ ಸ್ಪಷ್ಟ ಸಂದೇಶವನ್ನು ಈಗಾಗಲೇ ರವಾನಿಸಿದ್ದಾರೆ. ಹಾಗಾಗಿ ಎಡಗೈಗೆ ಸೇರಿರುವ ಮಾಜಿ ಸಚಿವ ಗೋವಿಂದ ಕಾರಜೋಳ ಅವರ ಹೆಸರು ಮುಂಚೂಣಿಗೆ ಬಂದಿದೆ. ನಾನು ನಿಲ್ಲಲ್ಲ, ನಾರಾಯಣಸ್ವಾಮಿಗೆ ನೀವೇ ನಿಲ್ಲಿ ಅಂತ ಕಾರಜೋಳ ಈಗಾಗಲೇ ಸ್ಪಷ್ಟಪಡಿಸಿದ್ದಾರೆ.
ಉಳಿದಂತೆ ಬಿಜೆಪಿಯಲ್ಲಿ ಭೋವಿ ಸಮುದಾಯಕ್ಕೆ ಸೇರಿದ ರಘು ಚಂದನ್ ಸ್ಫರ್ಧೆಗೆ ತುದಿಗಾಲಲ್ಲಿದ್ದಾರೆ. ಮಾದಿಗರಿಗೆ ಟಿಕೆಟ್ ನೀಡಿದರೆ ಶಿವಮೊಗ್ಗ, ತುಮಕೂರು, ಬಳ್ಳಾರಿ, ದಾವಣಗೆರೆ, ಹಾವೇರಿ, ಕೊಪ್ಪಳದಲ್ಲಿ ಸಹಾಯವಾಗುತ್ತದೆ ಎಂಬ ಅಭಿಪ್ರಾಯ ಪಕ್ಷದಲ್ಲಿದೆ. ಮಾದಿಗರೇತರಿಗೆ ಟಿಕೆಟ್ ನೀಡಿದರೆ ಉಳಿದ ಕ್ಷೇತ್ರಗಳಲ್ಲಿ ಹಿನ್ನಡೆಯಾಗುವ ಆತಂಕ ಇದೆ. ಹಾಗಾಗಿ ನಾರಾಯಣಸ್ವಾಮಿ, ಗೋವಿಂದ ಕಾರಜೋಳ ಇಬ್ಬರೂ ಬೇಡವೆಂದಾದರೆ ಕೊನೆಗೆ ಮಾದಾರ ಶ್ರೀ ಉಳಿದುಕೊಳ್ಳುತ್ತಾರೆ. ಹಾಗಾಗಿಯೇ ಟಿಕೆಟ್ ಘೋಷಣೆ ವಿಳಂಬವಾಗುತ್ತಿದೆ ಎನ್ನಲಾಗಿದೆ.