ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ
ಪಿಯು ಶಿಕ್ಷಣ ಸಂಸ್ಥೆಗಳ ಪ್ರಾಂಶುಪಾಲರು ಮತ್ತು ಉಪನ್ಯಾಸಕರು ತಮ್ಮ ಸಂಸ್ಥೆ ವಿದ್ಯಾರ್ಥಿಗಳು ಉನ್ನತ ಶಿಕ್ಷಣಕ್ಕೆ ಪಟ್ಟಣದ ಸರ್ಕಾರಿ ಪದವಿ ಕಾಲೇಜನ್ನು ಆಯ್ಕೆ ಮಾಡಿಕೊಳ್ಳುವಂತೆ ಮಕ್ಕಳನ್ನು ಉತ್ತೇಜಿಸುವಂತೆ ಕಾಲೇಜಿನ ಪ್ರಾಂಶುಪಾಲ ಡಾ.ವಿ.ವಿ.ಜಗದೀಶ್ ಮನವಿ ಮಾಡಿದರು.ಪಟ್ಟಣದ ಕಾಲೇಜಿನ ಆವರಣದಲ್ಲಿ ಆಯೋಜಿಸಿದ್ದ ತಾಲೂಕು ಪ್ರಾಂಶುಪಾಲರ ಸಭೆಯಲ್ಲಿ ಮಾತನಾಡಿ, ಪದವಿ ಪೂರ್ವ ಶಿಕ್ಷಣದಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ಉನ್ನತ ಶಿಕ್ಷಣಕ್ಕೆ ನಮ್ಮ ಕಾಲೇಜನ್ನು ಆಯ್ಕೆ ಮಾಡಿಕೊಳ್ಳಬೇಕು ಎಂದರು.
ಪಿಯುಸಿ ಶಿಕ್ಷಣದ ನಂತರ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವಲ್ಲಿ ಪದವಿ ಶಿಕ್ಷಣ ಮಹತ್ತರ ಪಾತ್ರ ವಹಿಸುತ್ತಿದೆ. ಆದರೆ, ಬಹುತೇಕ ಮಕ್ಕಳು ಪದವಿ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಇದನ್ನು ಸರಿದೂಗಿಸಲು ವಿದ್ಯಾರ್ಥಿಗಳಿಗೆ ಪಿಯುಸಿ ನಂತರ ಪದವಿ ಪಡೆದುಕೊಳ್ಳಲು ಮನವರಿಕೆ ಮಾಡಬೇಕು ಎಂದರು.ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ಶಿಕ್ಷಣಕ್ಕೆ ಅಗತ್ಯ ಸೌಕರ್ಯಗಳಿವೆ. ಪಿಯುಸಿ ನಂತರ ಎಂಜಿನಿಯರ್ ಮತ್ತು ಮೆಡಿಕಲ್ ಒಂದೇ ಗುರಿ ಎಂಬ ಮಕ್ಕಳ ಧೋರಣೆ ಬದಲು ಮಾಡಲು ಪಿಯುಸಿ ಹಂತದಲ್ಲಿ ಅರಿವು ಮೂಡಿಸಬೇಕು ಎಂದರು.
ಕಾಲೇಜಿನಲ್ಲಿ ಅತ್ಯುತ್ತಮ ಗ್ರಂಥಾಲಯವಿದೆ. ಪ್ರತಿನಿತ್ಯ ಕೆರಿಯರ್ ಗೈಡೆನ್ಸ್ ತರಗತಿ ತೆಗೆದುಕೊಳ್ಳಲಾಗುತ್ತಿದೆ. ಪ್ರತಿಯೊಬ್ಬರೂ ಉದ್ಯೋಗಸ್ಥರಾಗಬೇಕು ಎಂಬುದು ನಮ್ಮ ಕಾಲೇಜಿನ ಧ್ಯೇಯ. ಇದಕ್ಕಾಗಿ ಎಲ್ಲಾ ಪ್ರಾಂಶುಪಾಲರು ಸಹಕರಿಸಬೇಕು ಎಂದರು.ಉಪ ನಿರ್ದೇಶಕ ಚೆಲುವಯ್ಯ ಮಾತನಾಡಿ, ವಿದ್ಯಾರ್ಥಿಗಳ ಪ್ರವೇಶಾತಿಗೆ ಪದವಿ ಕಾಲೇಜಿನ ಪ್ರಾಂಶುಪಾಲರು ಮತ್ತು ಪತ್ರಾಂಕಿತ ವ್ಯವಸ್ಥಾಪಕರು ಶ್ರಮಿಸುತ್ತಿರುವುದು ಶ್ಲಾಘನೀಯ. ಇದೇ ರೀತಿಯಲ್ಲಿ ಪಿಯುಸಿ ಕಾಲೇಜಿನ ಪ್ರಾಂಶುಪಾಲರು ಮತ್ತು ಸಿಬ್ಬಂದಿ ಪ್ರತಿ ಪ್ರೌಢಶಾಲೆಗೆ ಭೇಟಿ ನೀಡಿ ಮಕ್ಕಳ ಹಾಜರಾತಿಯನ್ನು ಹೆಚ್ಚಿಸಿಕೊಳ್ಳಿ ಎಂದು ಸಲಹೆ ನೀಡಿದರು.
ಪ್ರತಿಯೊಂದು ಕಾಲೇಜು ಉತ್ತಮ ಫಲಿತಾಂಶ ಬಂದರೆ ಮಾತ್ರ ಪ್ರವೇಶಾತಿ ಸುಧಾರಣೆ ಸಾಧ್ಯ. ಪರೀಕ್ಷೆಗಳು ಮಾರ್ಚ್ 1 ರಿಂದ ಆರಂಭವಾಗುವುದರಿಂದ ಈಗಿನಿಂದಲೇ ವಿಶೇಷ ತರಗತಿ ನಡೆಸಬೇಕು. ಈ ಬಾರಿ ಪರಿಕ್ಷೆಗಳು ವೆಬ್-ಸಿಸಿ ಟಿವಿ ಅಡಿಯಲ್ಲಿ ನಡೆಯಲಿದೆ. ಪ್ರಾಯೋಗಿಕ ಪರಿಕ್ಷೆಗೂ ಇದನ್ನು ಜಾರಿಗೊಳಿಸಲಾಗುವುದು ಎಂದರು.ಪಿಯುಸಿ ನೋಡಲ್ ಕಾಲೇಜಿನ ಪ್ರಾಂಶುಪಾಲ ಕೆ.ಮೋಹನ್ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿವಿಧ ಕಾಲೇಜುಗಳ ಪ್ರಾಂಶುಪಾಲರು ಭಾಗವಹಿಸಿ ತಮ್ಮ ಕಾಲೇಜುಗಳ ಬಗೆಗೆ ಮಾಹಿತಿ ನೀಡಿದರು. ಸಭೆಯಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪತ್ರಾಂಕಿತ ವ್ಯವಸ್ಥಾಪಕ ಬಿ.ಎ.ಮಂಜುನಾಥ್ ಭಾಗವಹಿಸಿದ್ದರು.