ರಾಮನಗರದಲ್ಲಿ ಇಂದು ಕ್ರೈಸ್ತ ಬಾಂಧವರಿಂದ ಕ್ರಿಸ್ ಮಸ್ ಹಬ್ಬದ ಆಚರಣೆಗೆ ಸಕಲ ಸಿದ್ಧತೆ

KannadaprabhaNewsNetwork |  
Published : Dec 25, 2025, 01:03 AM IST
2.ರಾಮನಗರದ ಲೂರ್ದು ಮಾತಾ ಚರ್ಚ್ ವಿದ್ಯುತ್ ದೀಪಗಳಿಂದ ಸಿಂಗಾರಗೊಂಡಿರುವುದು. | Kannada Prabha

ಸಾರಾಂಶ

ಕ್ರಿಸ್ಮಸ್ ಸಂದರ್ಭದಲ್ಲಿ ಮನೆಗಳಲ್ಲಿ ನಕ್ಷತ್ರಗಳನ್ನು ಯಾಕೆ ತೂಗಿ ಹಾಕುತ್ತಾರೆ ಎನ್ನುವುದಕ್ಕೂ ಒಂದು ಕಥೆಯಿದೆ. ಕ್ರಿಸ್ತನ ಜನನವಾದಾಗ ಕ್ರಿಸ್ತನನ್ನು ಕಂಡು ಆರಾಧಿಸಲು ದೂರ ದೇಶಗಳಿಂದ ಮೂರು ಪಂಡಿತರು ಬರುತ್ತಾರೆ. ಆದರೆ ಅವರಿಗೆ ಕ್ರಿಸ್ತನ ಜನನದ ಸ್ಥಳ ತಿಳಿದಿರುವುದಿಲ್ಲ. ಆಗ ಬಾನಿನಲ್ಲಿ ಉದಯಿಸಿದ ನಕ್ಷತ್ರವು ಅವರ ಮುಂದೆ ಮುಂದೆ ಸಾಗಿ ಕ್ರಿಸ್ತನ ಜನನದ ಸ್ಥಳವನ್ನು ತೋರಿಸುತ್ತದೆ. ಅದರ ಸಂಕೇತವಾಗಿ ಕ್ರಿಸ್ಮಸ್ ಹಬ್ಬದಂದು ಎಲ್ಲರ ಮನೆಗಳಲ್ಲಿ ನಕ್ಷತ್ರಗಳನ್ನು ತೂಗಿಹಾಕುತ್ತಾರೆ. ಪ್ರತಿ ಮನೆಯಲ್ಲಿಯೂ ಶಾಂತಿ ಪ್ರೀತಿಯ ಕ್ರಿಸ್ತ ಜನಿಸಿದ್ದಾನೆ ಎನ್ನುವುದು ಇದರ ಅರ್ಥವಾಗಿದೆ.

ಕನ್ನಡಪ್ರಭ ವಾರ್ತೆ ರಾಮನಗರ

ನಗರದ ಸೇರಿದಂತೆ ಜಿಲ್ಲಾದ್ಯಂತ ಕ್ರೈಸ್ತ ಬಾಂಧವರು ಕ್ರಿಸ್ ಮಸ್ (ಡಿ.25) ಹಬ್ಬದ ಆಚರಣೆಗೆ ಸಿದ್ಧತೆ ಮಾಡಿಕೊಂಡಿದ್ದಾರೆ.

ಜಿಲ್ಲಾ ಕೇಂದ್ರ ರಾಮನಗರದ ಲೂರ್ದು ಮಾತಾ ಚರ್ಚ್ ಸೇರಿ ಜಿಲ್ಲೆಯ ಎಲ್ಲ ಚರ್ಚ್ ಗಳು ವಿದ್ಯುತ್ ದೀಪಗಳಿಂದ ಅಲಂಕಾರಗೊಂಡಿವೆ. ಗೋದಲಿ ಮತ್ತು ಕ್ರಿಸ್ಮಸ್ ಟ್ರೀಗಳನ್ನು ಸಿಂಗಾರ ಮಾಡಿರುವ ಮನೆಗಳು ಕಂಗೊಳಿಸುತ್ತಿವೆ. ಅಲ್ಲದೆ, ಕ್ರೈಸ್ತರ ಮನೆಗಳಲ್ಲಿ ಸಂಭ್ರಮದ ಕ್ರಿಸ್ ಮಸ್ ಗೆ ಈಗಾಗಲೇ ಎಲ್ಲಾ ರೀತಿಯ ಸಿದ್ಧತೆಗಳು ನಡೆದಿವೆ.

ಮನೆಗಳಲ್ಲಿ ಗೋದಲಿ (ಕ್ರಿಸ್ತನು ಹುಟ್ಟಿದ ದನದ ಕೊಟ್ಟಿಗೆಯ ಸುಂದರ ಪ್ರತಿಕೃತಿ) ನಿರ್ಮಿಸಿ ಕ್ರಿಸ್ ಮಸ್ ಟ್ರೀ ಅನ್ನು ತಂದು ಇಡಲಾಗಿದೆ. ಇವುಗಳಿಗೆ ವಿದ್ಯುತ್ ದೀಪಾಲಂಕಾರವನ್ನು ಮಾಡಲಾಗಿದೆ.

ಕ್ರಿಸ್ ಮಸ್ ಎಂದರೆ ಕ್ರಿಸ್ತನ ಆರಾಧನೆ ಎಂದರ್ಥ. ಇದು ಕ್ರಿಶ್ಚಿಯನ್ನರ ಪ್ರಮುಖ ಹಬ್ಬ. ಮನುಷ್ಯ ಎಲ್ಲರಿಗೂ ಉಪಯುಕ್ತನಾಗಬೇಕು, ಎಲ್ಲರಲ್ಲಿಯೂ ಒಂದಾಗಿ ಬಾಳಬೇಕು ಮತ್ತು ಒಳ್ಳೆಯದನ್ನು ಕೇಳುವಂತವನಾಗಬೇಕು ಎನ್ನುವುದೇ ಈ ಹಬ್ಬದ ಧ್ಯೇಯ. ಕ್ರಿಸ್ಮಸ್ ಎಂದ ತಕ್ಷಣ ಕ್ರಿಸ್ಮಸ್ ಟ್ರೀ, ಕೇಕ್, ಸಾಂತಾಕ್ಲಾಸ್, ಶುಭ ಸಂಕೇತದ ಘಂಟೆ, ಕ್ರಿಶ್ಚಿಯನ್ನರ ಮನೆಗಳಲ್ಲಿ ಸಿಂಗರಿಸುವ ಕ್ರಿಬ್ ಗಳೇ ನೆನಪಿಗೆ ಬರುತ್ತವೆ.

ಮನೆ ಮನೆಗಳಲ್ಲಿ ಕ್ರಿಬ್ ಅಲಂಕಾರ:

ದೇವರ ಪುತ್ರನಾದ ಏಸು ತನ್ನ ದರ್ಶನ ಎಲ್ಲರಿಗೂ ಸಿಗಲಿ ಎಂದು ಗೋದಲಿಯಲ್ಲಿ (ಕೊಟ್ಟಿಗೆ) ಜನಿಸುತ್ತಾನೆ. ಇದನ್ನು ನೆನಪಿಸಿಕೊಳ್ಳುವ ಸಲುವಾಗಿ ಕ್ರಿಶ್ಚಿಯನ್ನರು ತಮ್ಮ ಮನೆಗಳಲ್ಲಿ ಗೋದಲಿಯ ಮಾದರಿಯನ್ನು ನಿರ್ಮಾಣ ಮಾಡಿ, ಅದರಲ್ಲಿ ಚಿಕ್ಕ ಚಿಕ್ಕ ಕುರಿಗಳ ಆಟಿಕೆಗಳನ್ನಿಟ್ಟು, ವಿದ್ಯುತ್ ದೀಪಗಳಿಂದ ಅಲಂಕಾರ ಮಾಡುತ್ತಾರೆ.

ಕ್ರಿಸ್ ಮಸ್ ಆಚರಣೆಯ ಮುಂಚೆ ಕ್ಯಾರೋಲ್ ಮಾಡಲಾಗುತ್ತದೆ. ಕ್ರಿಸ್ ಮಸ್ ಗಿಂತ ಹಲವು ದಿನಗಳ ಮೊದಲೇ ಆರಂಭವಾಗುವ ಈ ಒಂದು ಸಂಪ್ರದಾಯದಲ್ಲಿ ಯುವಕರ ಗುಂಪುಗಳು ತಮ್ಮ ಪ್ರದೇಶದ ಮನೆ ಮನೆಗೂ ಕ್ಯಾರೋಲ್ ಗಳನ್ನು (ಸೌಹಾರ್ದತೆಯ ಸಂದೇಶ ಸಾರುವ ಕ್ರಿಸ್ಮಸ್ ಹಾಡುಗಳು) ಹಾಡುತ್ತಾ ತೆರಳಿ ಈ ಸಂಭ್ರಮದ ಹಬ್ಬದ ಸೌಹಾರ್ದತೆಯ ಸಂದೇಶವನ್ನು ಸಾರುತ್ತಾರೆ.

ಕ್ರಿಸ್ಮಸ್ ಸಂದರ್ಭದಲ್ಲಿ ಮನೆಗಳಲ್ಲಿ ನಕ್ಷತ್ರಗಳನ್ನು ಯಾಕೆ ತೂಗಿ ಹಾಕುತ್ತಾರೆ ಎನ್ನುವುದಕ್ಕೂ ಒಂದು ಕಥೆಯಿದೆ. ಕ್ರಿಸ್ತನ ಜನನವಾದಾಗ ಕ್ರಿಸ್ತನನ್ನು ಕಂಡು ಆರಾಧಿಸಲು ದೂರ ದೇಶಗಳಿಂದ ಮೂರು ಪಂಡಿತರು ಬರುತ್ತಾರೆ. ಆದರೆ ಅವರಿಗೆ ಕ್ರಿಸ್ತನ ಜನನದ ಸ್ಥಳ ತಿಳಿದಿರುವುದಿಲ್ಲ. ಆಗ ಬಾನಿನಲ್ಲಿ ಉದಯಿಸಿದ ನಕ್ಷತ್ರವು ಅವರ ಮುಂದೆ ಮುಂದೆ ಸಾಗಿ ಕ್ರಿಸ್ತನ ಜನನದ ಸ್ಥಳವನ್ನು ತೋರಿಸುತ್ತದೆ. ಅದರ ಸಂಕೇತವಾಗಿ ಕ್ರಿಸ್ಮಸ್ ಹಬ್ಬದಂದು ಎಲ್ಲರ ಮನೆಗಳಲ್ಲಿ ನಕ್ಷತ್ರಗಳನ್ನು ತೂಗಿಹಾಕುತ್ತಾರೆ. ಪ್ರತಿ ಮನೆಯಲ್ಲಿಯೂ ಶಾಂತಿ ಪ್ರೀತಿಯ ಕ್ರಿಸ್ತ ಜನಿಸಿದ್ದಾನೆ ಎನ್ನುವುದು ಇದರ ಅರ್ಥವಾಗಿದೆ.

ಗುರುವಾರ ಬೆಳಗ್ಗೆ ಸಾಮೂಹಿಕ ಪ್ರಾರ್ಥನೆ :

ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಎಲ್ಲಾ ಚರ್ಚ್ ಗಳಲ್ಲಿ ಬುಧವಾರ (ಡಿ.24) ರಾತ್ರಿ 11.30ಕ್ಕೆ ಕ್ಯಾರಿಯಲ್ ಸಿಂಗಿಂಗ್ ನಡೆಯಲಿದ್ದು, 11.45ಕ್ಕೆ ಸಾಮೂಹಿಕ ಪ್ರಾರ್ಥನೆ ನಡೆದು ಸಂಭ್ರಮಾಚರಣೆ ಶುರುವಾಗಲಿದೆ. ಗುರುವಾರ (ಡಿ.25) ಬೆಳಗ್ಗೆ 8 ಗಂಟೆಗೆ ಬಲಿ ಪೂಜೆಯಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಯಲಿದೆ.

ಆನಂತರ ಕ್ರೈಸ್ತ ಬಾಂಧವರು ಶುಭಾಶಯ ವಿನಿಮಯ ಮಾಡಿಕೊಂಡು, ಸಿಹಿ ಹಂಚಿ ಹಬ್ಬವನ್ನು ಆಚರಿಸುತ್ತಾರೆ. ಮತ್ತೆ ಸಂಜೆ ಚರ್ಚ್ ಗೆ ಆಗಮಿಸುವ ಕ್ರೈಸ್ತ ಬಾಂಧವರು ಮೇಣದ ಬತ್ತಿ ಹಚ್ಚುತ್ತಾರೆ. ಈ ಮೂಲಕ ಹೊಸ ಜೀವನ, ಹೊಸ ವರ್ಷ ಕ್ರಿಸ್ತನ ಪ್ರೀತಿ, ಕರುಣೆಯ ನೆರಳಲ್ಲಿ ಪುನಃ ತೆರೆದುಕೊಳ್ಳುತ್ತದೆ.

ಡಿಸೆಂಬರ್ ತಿಂಗಳ ಮೊದಲ ಭಾನುವಾರ ಕ್ರಿಸ್ತನ ಆಗಮನದ ಕಾಲವಾಗಿರುತ್ತದೆ. ಯೇಸುವಿನ ಬರುವಿಕೆಗಾಗಿ ಹೇಗೆ ಸಿದ್ಧರಾಗಬೇಕು, ಹೇಗೆ ಸ್ವಾಗತಿಸಬೇಕು ಎಂಬ ಚರ್ಚ್ ಎಲ್ಲರ ಮನೆಗಳಲ್ಲೂ ನಡೆಯುತ್ತದೆ. ಡಿಸೆಂಬರ್ ನ ಮೊದಲ ದಿನದಿಂದಲೇ ಶುರುವಾಗುವ ಭಜನೆ ನಡಿಗೆ ಮೂಲಕ ಕ್ರೈಸ್ತನ ಆಗಮನದ ಹಾಡುಗಳನ್ನು ಹೇಳುತ್ತಾ ಕ್ರೈಸ್ತ ಬಾಂಧವರು ಮನೆಮನೆಗೆ ಹೋಗಿ ಯೇಸುಕ್ರಿಸ್ತನನ್ನು ಸ್ವಾಗತಿಸಲು ಸಿದ್ಧರಾಗಿ ಎಂಬ ಸಂದೇಶವನ್ನು ಸಾರುತ್ತಾರೆ. ನಿಜವಾದ ಕ್ರಿಸ್ ಮಸ್ ಡಿಸೆಂಬರ್ ಮೊದಲ ವಾರದಿಂದಲೇ ಶುರುವಾಗುತ್ತದೆ ಎಂದು ಸಂತ ಲೂರ್ದು ಮಾತೆ ಚರ್ಚ್ ನ ಫಾದರ್ ಭಾಸ್ಕರ್ ಕನ್ನಡಪ್ರಭಕ್ಕೆ ಪ್ರತಿಕ್ರಿಯೆ ನೀಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಫೆ.೮ರಂದು ಶ್ರೀ ರಾಮಲಿಂಗೇಶ್ವರ ಮಠ ಲೋಕಾರ್ಪಣೆ
ಚಳಿ ಹೆಚ್ಚಿದಂತೆ ಏರುತ್ತಿದೆ ಮೊಟ್ಟೆ ದರ