
ತುಮಕೂರು: ಕ್ರೈಸ್ತ ಸಮುದಾಯದ ಪವಿತ್ರ ಹಬ್ಬವಾದ ಕ್ರಿಸ್ಮಸ್ ಹಬ್ಬವನ್ನು ನಗರ ಸೇರಿದಂತೆ ಜಿಲ್ಲೆಯಾದ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಯಿತು.
ಹಬ್ಬದ ಪ್ರಯುಕ್ತ ನಗರದಲ್ಲಿರುವ 7 ಸಿಎಸ್ಐ ಚರ್ಚ್, ಎರಡು ರೋಮನ್ ಕ್ಯಾಥೋಲಿಕ್ ಚರ್ಚ್, ಒಂದು ಮಾರ್ಥಾಂಬಾ ಚರ್ಚ್ ಒಂದು ಫೆದರಲ್ ಚರ್ಚ್, 15 ಇಂಡಿಪೆಂಡೆಂಟ್ ಚರ್ಚ್ ಗಳು ಸೇರಿ ಎಲ್ಲ ಚರ್ಚ್ ಗಳಲ್ಲಿ ವಿಶೇಷವಾಗಿ ವಿದ್ಯುದ್ದೀಪಾಲಂಕಾರ ಮಾಡಲಾಗಿದ್ದು, ಬಣ್ಣ ಬಣ್ಣದ ಚಿತ್ತಾರಗಳಿಂದ ಕಂಗೊಳಿಸುತ್ತಿದ್ದವು.
ಕ್ರೈಸ್ತ ಬಾಂಧವರು ಹೊಸ ಉಡುಪುಗಳನ್ನು ಧರಿಸಿ ಚರ್ಚ್ ಗಳಲ್ಲಿ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡ ನಂತರ ಒಬ್ಬರಿಗೊಬ್ಬರು ಪರಸ್ಪರ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು.ಹಬ್ಬದ ವಿಶೇಷವಾಗಿ ತಯಾರಿಸಿದ್ದ ಸಿಹಿ ತಿಂಡಿಗಳನ್ನು ಸಹ ಕ್ರ್ರೈಸ್ತ ಬಾಂಧವರು ಪರಸ್ಪರ ಹಂಚಿ ತಿನ್ನುವ ಮೂಲಕ ಈ ಹಬ್ಬ ಶಾಂತಿ ಸೌಹಾರ್ದತೆ ಸಂಕೇತ ಎಂಬ ಸಂದೇಶವನ್ನು ಸಾರಿದರು.
ಕ್ರಿಸ್ಮಸ್ ಹಬ್ಬ ಕ್ರೈಸ್ತರೆಲ್ಲರೂ ಬಹಳ ಉತ್ಸುಕತೆಯಿಂದ ಸಂತಸ, ಸಂಭ್ರಮದಿಂದ ಆಚರಿಸುವಂತಹ ಹಬ್ಬ. ಕ್ರ್ರೈಸ್ತರಿಗೆ ಮೂರು ಹಬ್ಬಗಳು ಮಹತ್ವದ್ದಾಗಿವೆ. ಕ್ರಿಸ್ಮಸ್ ಹಬ್ಬವನ್ನು ಬೆಳಕಿನ ಹಬ್ಬವೆಂದು ಆಚರಿಸಲಾಗುತ್ತದೆ. ಏಸುಕ್ರಿಸ್ತನು ಬೆಳಕಾಗಿ ಬಂದಿದ್ದಾನೆ. ಹಾಗಾಗಿ ಎಲ್ಲ ಚರ್ಚ್ಗಳಲ್ಲಿ ಕ್ಯಾಂಡಲ್ಗಳನ್ನು ಹಿಡಿದು ಏಸುವಿನ ಬೆಳಕು ನಮ್ಮೆಲ್ಲ ಸಂಕಷ್ಟವನ್ನು ದೂರ ಮಾಡುತ್ತದೆ ಎಂದು ಹಬ್ಬವನ್ನು ಆಚರಿಸಲಾಗುತ್ತದೆ ಎಂದರು.
ಬಹಳಷ್ಟು ವರ್ಷಗಳ ಹಿಂದೆ ಏಸುಕ್ರಿಸ್ತ ಹುಟ್ಟಿದಾಗ ಅಂದಿನ ಸಾಮಾಜಿಕ, ಆರ್ಥಿಕವಾದ ಪರಿಸ್ಥಿತಿಗಳು, ರಾಜಕೀಯ, ಧಾರ್ಮಿಕವಾದ ಪರಿಸ್ಥಿತಿಗಳು, ಬಡವರು, ನಿರ್ಗತಿಕರಿಗೆ ವಿರುದ್ಧವಾಗಿ ದೌರ್ಜನ್ಯ, ಶೋಷಣೆ ಮಾಡುವಂತಹ ಸನ್ನಿವೇಶ ಇದ್ದಾಗ ಏಸುಕ್ರಿಸ್ತ ಅಂತಹವರ ಪರವಾಗಿ ಸಮಾಜದಲ್ಲಿ ಶಾಂತಿ, ಸಮಾಧಾನ ತಂದು ದೇವರು ಬಡವರ ಪರ ಇದ್ದಾನೆ ಎಂದು ಸಾರಿ ಹೇಳಿದಂತಹ ಹಬ್ಬ ಇದಾಗಿದೆ ಎಂದು ಹೇಳಿದರು.