)
ಕನ್ನಡಪ್ರಭ ವಾರ್ತೆ ಬೆಂಗಳೂರು
ಬೈರತಿ ಬಸವರಾಜ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದ ಬೆನ್ನಲೇ ಶಾಸಕರಿಗಾಗಿ ಸಿಐಡಿ ಹುಡುಕಾಟವನ್ನು ತೀವ್ರಗೊಳಿಸಿದೆ.
ಕಳೆದ ಡಿಸೆಂಬರ್ನಲ್ಲಿಯೇ ಬೈರತಿ ಬಸವರಾಜ್ ವಿರುದ್ಧ ಲುಕೌಟ್ ನೋಟಿಸ್ ಜಾರಿ ಮಾಡಲಾಗಿದೆ. ಅವರು ಬೆಂಗಳೂರು ನಗರದಿಂದ ಹೊರಗೆ ತಪ್ಪಿಸಿಕೊಂಡು ಹೋಗಲು ಯಾವುದೇ ಅವಕಾಶವಿಲ್ಲ. ಬಸವರಾಜ್ ಸದ್ಯ ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ. ಆದರೆ ಪೊಲೀಸರು ಅವರ ಬೆನ್ನು ಬಿದ್ದಿದ್ದು, ಸದ್ಯದಲ್ಲಿಯೇ ಅವರನ್ನು ಬಂಧಿಸುತ್ತಾರೆ. ಬಂಧಿಸಿ ನಂತರ ಅವರ ಹೇಳಿಕೆ ದಾಖಲಿಸಲಾಗುವುದು ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ಘಟನೆಯ ವಿವರ:
2025 ರ ಜುಲೈ 15 ರ ರಾತ್ರಿ ಹಲಸೂರು ಕೆರೆ ಸಮೀಪದ ಮನೆಯ ಬಳಿ ರೌಡಿಶೀಟರ್ ಬಿಕ್ಲು ಶಿವನನ್ನು ದುಷ್ಕರ್ಮಿಗಳ ಗ್ಯಾಂಗ್ ಮಾರಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆ ಮಾಡಿತ್ತು. ಶಿವನ ತಾಯಿ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಬಸವರಾಜ್ ಅವರು ಐದನೇ ಆರೋಪಿಯಾಗಿದ್ದಾರೆ. ಆರೋಪಿಗಳ ವಿರುದ್ಧ ಪೊಲೀಸರು, ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ (ಕೋಕಾ) ಕಾಯ್ದೆಯಡಿ ಕ್ರಮ ಜರುಗಿಸಿದ್ದಾರೆ.