ಬಳ್ಳಾರಿ: ಜಿಲ್ಲೆಯಲ್ಲಿ ನಡೆಯುತ್ತಿರುವ ಕೈಗಾರಿಕಾ ಅಪಘಾತಗಳನ್ನು ತಡೆಯಲು ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು. ಕೈಗಾರಿಕೆಗಳಲ್ಲಿ ಕಾರ್ಯನಿರ್ವಹಿಸುವ ಕಾರ್ಮಿಕರಿಗೆ ಜೀವಸುರಕ್ಷತೆ ಒದಗಿಸಬೇಕು ಎಂದು ಆಗ್ರಹಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (ಸಿಐಟಿಯು) ಜಿಲ್ಲಾ ಸಮಿತಿ ಪದಾಧಿಕಾರಿಗಳು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
ಕಾರ್ಮಿಕ ಸುರಕ್ಷತೆ ಕಾಯ್ದೆಗಳು ಹಾಗೂ ಕಾರ್ಖಾನೆಗಳ ಕಾಯಿದೆಯನ್ನು ಜಿಂದಾಲ್ ಸ್ಟೀಲ್ ಕಾರ್ಖಾನೆ ಸಂಪೂರ್ಣ ಉಲ್ಲಂಘಿಸಿದೆ. ಕೈಗಾರಿಕೆಗಳಲ್ಲಿನ ಕಾರ್ಮಿಕರ ಅಪಘಾತ ಸಾವುಗಳಿಗೆ ಕೈಗಾರಿಕಾ ಮಾಲೀಕರು ಮತ್ತು ಆಡಳಿತ ವರ್ಗದ ನಿರ್ಲಕ್ಷ್ಯವೇ ಕಾರಣವಾಗಿದೆ ಎಂದರು.
ಜಿಲ್ಲಾಡಳಿತವು ಕಾರ್ಮಿಕರ ಸುರಕ್ಷತೆ ಕಾಪಾಡಬೇಕು. ಕಾರ್ಖಾನೆ ಮಾಲೀಕರ ಪ್ರಭಾವ ಹಾಗೂ ಒತ್ತಡಕ್ಕೆ ಒಳಗಾಗಿರುವ ಕಾರ್ಮಿಕ ಇಲಾಖೆ, ಕೈಗಾರಿಕೆ ಬಾಯ್ಲರ್ಗಳು ಕಾರ್ಮಿಕರ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಪೊಲೀಸ್ ಇಲಾಖೆಗಳು ಕಾರ್ಮಿಕರ ರಕ್ಷಣೆಯಲ್ಲಿ ನಿಷ್ಕ್ರಿಯವಾಗಿವೆ ಎಂದರು.ಜಿಲ್ಲಾಡಳಿತವು ಕೈಗಾರಿಕೆಗಳ ಅಪಘಾತಗಳನ್ನು ಗಂಭೀರವಾಗಿ ಪರಿಗಣಿಸಿ ಕಾನೂನು ಕ್ರಮಗಳನ್ನು ಕೈಗೊಂಡು ತಪ್ಪಿತಸ್ಥರನ್ನು ಶಿಕ್ಷಿಸಲು ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.
ಕಾರ್ಮಿಕರ ಕುಂದುಕೊರತೆಗಳ ಚರ್ಚಿಸಲು ಕಾರ್ಮಿಕರ ಸಂಘಟನೆಗಳು ಹಾಗೂ ಕೈಗಾರಿಕೆಗೆಳಿಗೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳೊಂದಿಗೆ ಪ್ರತಿ ತಿಂಗಳು ಸಭೆ ನಡೆಸಿ, ಸುರಕ್ಷತೆಯ ಕ್ರಮ, ಸೌಲಭ್ಯಗಳ ಕುರಿತ ಚರ್ಚಿಸಬೇಕು ಎಂದು ಆಗ್ರಹಿಸಿದರು.
ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜೆ.ಎಂ.ಚನ್ನಬಸಯ್ಯ, ಜಂಟಿ ಕಾರ್ಯದರ್ಶಿ ಎರಿಸ್ವಾಮಿ, ಎಂ.ತಿಪ್ಪೇಸ್ವಾಮಿ, ಓಬಳೇಶಪ್ಪ, ಈರಣ್ಣಬೆಲ್ಲದ, ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ವಿ.ಎಸ್.ಶಿವಶಂಕರ್, ಮಸಣ ಕಾರ್ಮಿಕರ ಸಂಘದ ಅಧ್ಯಕ್ಷ ಎ.ಸ್ವಾಮಿ, ನಾಗರಾಜ್, ಡಿವೈಎಫ್ಐನ ಎರಿಸ್ವಾಮಿ ಸೇರಿದಂತೆ ಸಿಐಟಿಯು ಜಿಲ್ಲಾ ಸಮಿತಿ ಸದಸ್ಯರು ಭಾಗವಹಿಸಿದ್ದರು. ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರ್ ಮನವಿಪತ್ರ ಸ್ವೀಕರಿಸಿದರು.