ಹೊಸಪೇಟೆ: ಕಾರ್ಪೊರೇಟ್ ಬಂಡವಾಳಶಾಹಿಗಳೇ ದೇಶ ಬಿಟ್ಟು ತೊಲಗಿ ಎಂಬ ಘೋಷಣೆಯೊಂದಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಕಾರ್ಮಿಕ ಹಾಗೂ ರೈತ ವಿರೋಧಿ ನೀತಿ ಖಂಡಿಸಿ ಸಿಐಟಿಯು ವತಿಯಿಂದ ಸೋಮವಾರ ನಗರದಲ್ಲಿ ಜೈಲ್ ಭರೋ ಚಳುವಳಿ ನಡೆಯಿತು.
ಕ್ವಿಟ್ ಇಂಡಿಯಾ ಚಳವಳಿಯ ನೆನಪಿನನಲ್ಲಿ ಹಮ್ಮಿಕೊಂಡಿದ್ದ ಈ ಪ್ರತಿಭಟನೆಯಲ್ಲಿ ಕೇಂದ್ರ ಸರ್ಕಾರ ಕಾರ್ಮಿಕ ಪರವಾಗಿದ್ದ 29 ಕಾರ್ಮಿಕ ಕಾಯ್ದೆಗಳನ್ನು ತೆಗೆದುಹಾಕಿ, ನಾಲ್ಕು ಕಾರ್ಮಿಕ ಕೋಡ್ ಗಳನ್ನಾಗಿ ಮಾಡಿ ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿದೆ. ಜೊತೆಗೆ ರೈತರ ಬಲವಂತದ ಭೂ ಸ್ವಾಧೀನಕ್ಕೆ ಕಾಯ್ದೆ, ಯುವಜನ ಮತ್ತು ವಿದ್ಯಾರ್ಥಿಗಳ ನೂತನ ಶಿಕ್ಷಣ ನೀತಿ ಕೈಬಿಡುವುದು ಹಾಗೂ 2019ರ ಮೋಟಾರ್ ವಾಹನ ತಿದ್ದುಪಡಿ ಕಾಯ್ದೆಯಡಿ ಟ್ಯಾಕ್ಸಿ, ಮ್ಯಾಕ್ಸಿ ಕ್ಯಾಬ್ಗಳಿಗೆ ಜಿಪಿಎಸ್ ಮತ್ತು ಪ್ಯಾನಿಕ್ ಬಟನ್ ಕಡ್ಡಾಯಗೊಳಿಸುವುದನ್ನು ಹಿಂಪಡೆಯುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು.
ರಾಜ್ಯದಲ್ಲಿ ಓಲಾ, ಉಬರ್, ರ್ಯಾಪಿಡೋ, ನಮ್ಮ ಯಾತ್ರೆಯಂತಹ ಖಾಸಗಿ ಆ್ಯಪ್ ಆಧಾರಿತ ಕಂಪನಿಗಳು ಹಾಗೂ ಬೈಕ್ ಟ್ಯಾಕ್ಸಿ ಸೇವೆಗಳನ್ನು ಸಂಪೂರ್ಣವಾಗಿ ನಿಷೇಧಿಸಬೇಕು ಮತ್ತು ಕಾರ್ಮಿಕರಿಗೆ ವೈಜ್ಞಾನಿಕ ಕನಿಷ್ಠ ವೇತನ ಜಾರಿಗೊಳಿಸಬೇಕು ಎಂದು ಪ್ರತಿಭಟನಾಕಾರರರು ಒತ್ತಾಯಿಸಿದರು.ಸಿಐಟಿಯು ರಾಜ್ಯ ಉಪಾಧ್ಯಕ್ಷ ಆರ್.ಎಸ್. ಬಸವರಾಜ್, ಜಿಲ್ಲಾ ಸಂಚಾಲಕ ಕೆ.ಎಂ. ಸ್ವಪ್ನ, ರಾಜ್ಯ ಕಾರ್ಯದರ್ಶಿ ಎಲ್. ಮಂಜುನಾಥ್, ಸಿಪಿಐಎಂನ ಜಿಲ್ಲಾ ಕಾರ್ಯದರ್ಶಿ ಆರ್. ಭಾಸ್ಕರ್ ರೆಡ್ಡಿ, ಡಿಎಚ್ಎಸ್ನ ರಾಜ್ಯ ಉಪಾಧ್ಯಕ್ಷ ಎಂ. ಜಂಬಯ್ಯ ನಾಯಕ, ಅಂಗನವಾಡಿ ನೌಕರರ ಸಂಘದ ಜಿಲ್ಲಾಧ್ಯಕ್ಷೆ ಕೆ. ನಾಗರತ್ನಮ್ಮ, ಟ್ಯಾಕ್ಸಿ ಹಾಗೂ ಮ್ಯಾಕ್ಸಿ ಕ್ಯಾಬ್ ಚಾಲಕರ ಸಂಘದ ರಾಜ್ಯ ಸಂಚಾಲಕ ಕೆ.ಎಂ. ಸಂತೋಷ್ ಕುಮಾರ್ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದರು.