ಕನ್ನಡಪ್ರಭ ವಾರ್ತೆ ಮಡಿಕೇರಿ
ಆರೋಗ್ಯ ಶಿಬಿರ ಆಯೋಜಿತವಾಗಬೇಕು:
ರೋಟರಿ ಜಿಲ್ಲಾ ಪಬ್ಲಿಕ್ ಇಮೇಜ್ ಸಮಿತಿ ಉಪಾಧ್ಯಕ್ಷ ಅನಿಲ್ ಹೆಚ್.ಟಿ. ಮಾತನಾಡಿ, ದಸರಾ ಸಂದರ್ಭ ಪೌರಸಿಬ್ಬಂದಿಗಳು ಮಡಿಕೇರಿಯನ್ನು ಮಡಿಯಾದ ಕೇರಿಯನ್ನಾಗಿಸುವಲ್ಲಿ ವಹಿಸಿದ ಶ್ರಮ ಶ್ಲಾಘನೀಯ, ಪೌರಸಿಬ್ಬಂದಿಗಳ ಅವಿರತ ಶ್ರಮದಿಂದಾಗಿಯೇ ಮಡಿಕೇರಿ ತನ್ನ ಸೌಂದರ್ಯ ಕಾಪಾಡಿಕೊಳ್ಳಲು ಸಾಧ್ಯವಾಗಿದೆ ಎಂದು ಶ್ಲಾಘಿಸಿದರು. ಪೌರಸಿಬ್ಬಂದಿಗಳನ್ನು ಕಸ ತೆಗೆಯುವ ವ್ಯಕ್ತಿಗಳಾಗಿ ಪರಿಗಣಿಸದೇ ನಮ್ಮ ಮನೆ, ಅಂಗಡಿಗಳಲ್ಲಿರುವ ಕಸವನ್ನು ವಿಲೇವಾರಿ ಮಾಡಿ, ಸಮಾಜವನ್ನು ಸ್ವಚ್ಛವಾಗಿರಿಸುವ ಕಾಯಕಜೀವಿಗಳೆಂದು ಮಾನವೀಯತೆಯಿಂದ ಪರಿಗಣಿಸುವಂತೆಯೂ ಅನಿಲ್ ಕೋರಿದರು. ಪೌರಸಿಬ್ಬಂದಿಗಳಿಗೆ ಅಗತ್ಯವಾದ ನಿವೇಶನ, ವಸತಿ ನಿರ್ಮಾಣದತ್ತಲೂ ಸ್ಥಳೀಯ ಸಂಸ್ಥೆಗಳು ಕಾರ್ಯಪ್ರವೃತ್ತವಾಗಬೇಕೆಂದು ಹೇಳಿದ ಅನಿಲ್ ಹೆಚ್,ಟಿ. ಪೌರಸಿಬ್ಬಂದಿಗಳು, ಕುಟುಂಬ ವರ್ಗದವರಿಗೆ ರೋಟರಿ ಸಂಸ್ಥೆಯ ಮೂಲಕ ಆರೋಗ್ಯ ಶಿಬಿರ ಆಯೋಜಿತವಾಗಬೇಕೆಂದು ಸಲಹೆ ನೀಡಿದರು.ಅಮೂಲ್ಯ ಕಾಯಕ: ರೋಟರಿ ವುಡ್ಸ್ ಸಲಹೆಗಾರ ಬಿ.ಜಿ. ಅನಂತಶಯನ ಮಾತನಾಡಿ, ಭೂಮಿತಾಯಿಯ ಮಡಿಲಲ್ಲಿ ತ್ಯಾಜ್ಯ ಎಸೆಯುವ ಜನರು ಹೆಚ್ಚಾಗುತ್ತಿರುವ ಸಂದರ್ಭದಲ್ಲಿ ಅಂಥ ತ್ಯಾಜ್ಯಗಳನ್ನು ವಿಲೇವಾರಿ ಮಾಡುವ ಮೂಲಕ ನಿಸರ್ಗ ಮಾತೆಯನ್ನು ಸ್ವಚ್ಛಗೊಳಿಸುವ ಅಮೂಲ್ಯ ಕಾಯಕದಲ್ಲಿ ಪೌರಸಿಬ್ಬಂದಿ ತೊಡಗಿಸಿಕೊಂಡಿದ್ದಾರೆ ಎಂದು ಹೆಮ್ಮೆ ವ್ಯಕ್ತಪಡಿಸಿದರು. ಎಲ್ಲಿ ಶುದ್ದ ಹಸ್ತಗಳಿರುತ್ತವೆಯೋ ಅಂಥ ಸಮಾಜ ಸುಂದರವಾಗಿರುತ್ತದೆ. ಆ ಶುದ್ಧ ಹಸ್ತವನ್ನು ಪೌರಸಿಬ್ಬಂದಿಗಳಲ್ಲಿ ಕಾಣಬಹುದಾಗಿದೆ ಎಂದೂ ಅನಂತಶಯನ ಹೇಳಿದರು.ರೋಟರಿ ವುಡ್ಸ್ ಅಧ್ಯಕ್ಷ ಕಿರಣ್ ಕುಂದರ್, ಮಡಿಕೇರಿಯ ಪೌರಸೇವಾ ಸಿಬ್ಬಂದಿಗಳ ಕಾರ್ಯನಿಷ್ಠೆಯ ಬಗ್ಗೆ ಪ್ರಶಂಸಿಸಿದರು. ನಗರದ ಅನೇಕರು ಏಳುವ ಮೊದಲೇ ನಗರದ ಬೀದಿಗಳು, ಮನೆಯ ಮುಂದಿನ ಪರಿಸರ ಸ್ವಚ್ಛಗೊಳ್ಳುವಲ್ಲಿ ಪೌರಸಿಬ್ಬಂದಿ ಪಾತ್ರ ಸದಾ ಮಹತ್ವದ್ದಾಗಿದೆ ಎಂದೂ ಕಿರಣ್ ಶ್ಲಾಘಿಸಿದರು.ರೋಟರಿ ವಲಯ 6 ರ ಸಹಾಯಕ ಗವರ್ನರ್ ಧಿಲನ್ ಚಂಗಪ್ಪ ಮಾತನಾಡಿ, ತ್ಯಾಜ್ಯ ವಿಲೇವಾರಿ ಮಾಡುವ ಸಂಬಂಧ ವಿದ್ಯಾರ್ಥಿಗಳಲ್ಲಿ ಸೂಕ್ತ ಮಾಹಿತಿ ನೀಡುವ ಜಾಗೃತಿ ಕಾರ್ಯಕ್ರಮಗಳನ್ನು ಸಾಮಾಜಿಕ ಸಂಘಸಂಸ್ಥೆಗಳು ಹೆಚ್ಚು ಮಾಡಬೇಕು ಎಂದು ಕರೆ ನೀಡಿದರು. ವಿದ್ಯಾರ್ಥಿಗಳಲ್ಲಿ ಪರಿಸರ ಸ್ವಚ್ಛತೆಯ ಜಾಗೃತಿ ಹೆಚ್ಚಾದಲ್ಲಿ ದೊಡ್ಡವರೂ ಅದರಿದ ಪಾಠ ಕಲಿಯಬಹುದಾಗಿದೆ ಎಂದೂ ಧಿಲನ್ ಅಭಿಪ್ರಾಯಪಟ್ಟರು. ಮಡಿಕೇರಿ, ಗೋಣಿಕೊಪ್ಪ ದಸರಾದ ಯಶಸ್ವಿಗೆ ಮೂಲ ಕಾರಣಕರ್ತರೇ ಪೌರಸಿಬ್ಬಂದಿಗಳಾಗಿದ್ದಾರೆ ಎಂದೂ ಗೋಣಿಕೊಪ್ಪ ದಸರಾ ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಧಿಲನ್ ಚಂಗಪ್ಪ ಶ್ಲಾಘಿಸಿದರು.