ಕನ್ನಡಪ್ರಭ ವಾರ್ತೆ ಕೆ.ಎಂ.ದೊಡ್ಡಿ
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾಮೀಣ ಮಕ್ಕಳಿಗೆ ಶಿಕ್ಷಣ ನೀಡುವ ಸಲುವಾಗಿ ರಾಜಕೀಯ ಮುತ್ಸದ್ಧಿ, ಹಿರಿಯ ಗಾಂಧಿವಾದಿ ನನ್ನ ತಂದೆ ಜಿ.ಮಾದೇಗೌಡರು ಆರಂಭಿಸಿದ ಭಾರತಿ ಶಿಕ್ಷಣ ಸಂಸ್ಥೆ ಇಂದು ದೊಡ್ಡ ಆಲದ ಮರದ ರೀತಿ ಬೆಳೆದು ನಿಂತಿದೆ. ಗ್ರಾಮಿಣ ವಿದ್ಯಾರ್ಥಿಗಳಿಗೆ ಕೃಷಿ ಬಗ್ಗೆ ಹೆಚ್ಚಿನ ಜ್ಞಾನ ಕಲ್ಪಿಸುವ ನಿಟ್ಟಿನಲ್ಲಿ ತೋಟಗಾರಿಕೆ ಕ್ಷೇತ್ರದ ಶಿಕ್ಷಣವನ್ನು ಪರಿಚಯಿಸಲು ಕೋರ್ಸ್ ಆರಂಭಿಸಲಾಗಿದೆ ಎಂದು ವಿವರಿಸಿದರು.
ಕುಗ್ರಾಮವಾಗಿದ್ದ ಕೆ.ಎಂ.ದೊಡ್ಡಿಯಲ್ಲಿ ಪ್ರಾಥಮಿಕ ಶಿಕ್ಷಣದಿಂದ ಹಿಡಿದು ಪದವಿ, ಸ್ನಾತಕೋತ್ತರ, ತಾಂತ್ರಿಕ ಶಿಕ್ಷಣ, ವೃತ್ತಿಪರ ಕೋರ್ಸ್ಗಳನ್ನು ತೆರೆದು ಲಕ್ಷಾಂತರ ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟಿರುವ ಭಾರತೀ ಶಿಕ್ಷಣ ಸಂಸ್ಥೆಗೆ ಇದೀಗ ತೋಟಗಾರಿಕೆ ವಿಜ್ಞಾನ ಕೋರ್ಸ್ ಕೂಡ ಸೇರ್ಪಡೆಯಾಗಿದೆ ಎಂದರು.ಜಿ.ಮಾದೇಗೌಡ ತೋಟಗಾರಿಕೆ ಮಹಾವಿದ್ಯಾಲಯದಲ್ಲಿ ತೋಟಗಾರಿಕೆ ವಿಜ್ಞಾನದ ವಿವಿಧ ವಿಷಯಗಳ ಅಧ್ಯಯನದ ಜೊತೆಗೆ ಪ್ರಾಯೋಗಿಕ ತರಬೇತಿ ಹಾಗೂ ಸಂಶೋಧನಾ ಚಟುವಟಿಕೆಗಳಿಗೆ ಆದ್ಯತೆ ನೀಡಲಾಗುವುದು. ಆಧುನಿಕ ತೋಟಗಾರಿಕೆ ಬೆಳೆಗಳ ಅಧ್ಯಯನ, ತಾಂತ್ರಿಕ ಪ್ರಯೋಗಾಲಯ ಹಾಗೂ ಪ್ರಾಯೋಗಿಕ ತೋಟಗಾರಿಕೆ ಕ್ಷೇತ್ರಗಳ ಮೂಲಕ ವಿದ್ಯಾರ್ಥಿಗಳಿಗೆ ನೇರ ಅನುಭವ ಕಲ್ಪಿಸುವ ಉದ್ದೇಶ ಹೊಂದಲಾಗಿದೆ ಎಂದರು.
ಆಧುನಿಕ, ತಾಂತ್ರಿಕ ಹಾಗೂ ವೈಜ್ಞಾನಿಕ ವಿಧಾನಗಳಲ್ಲಿ ವಿದ್ಯಾರ್ಥಿಗಳನ್ನು ರೂಪಿಸಲು ವೇದಿಕೆ ಕಲ್ಪಿಸುವುದು ನಮ್ಮ ಉದ್ದೇಶವಾಗಿದೆ. ಕೃಷಿ ಪ್ರದಾನ ದೇಶ ಭಾರತದಲ್ಲಿ ತೋಟಗಾರಿಕೆಗೆ ಅದರದ್ದೇ ಆದ ಮಹತ್ವವಿದೆ. ಗ್ರಾಮೀಣ ಪ್ರದೇಶದಲ್ಲಿ ತೋಟಗಾರಿಕೆ ಕ್ಷೇತ್ರಕ್ಕೆ ಆಧುನಿಕ ಸ್ಪರ್ಶ ನೀಡಲು ನಮ್ಮ ಸಂಸ್ಥೆ ಮುಂದಾಗಲಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಭಾರೀ ಶಿಕ್ಷಣ ಸಂಸ್ಥೆ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಆಶಯ್ ಮಧು, ಕಾರ್ಯದರ್ಶಿ ಬಿ.ಎಂ.ನಂಜೇಗೌಡ, ಡಾ.ತಮಿಜ್ಮಣಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.