ಜಿಲ್ಲಾಡಳಿತ ಸಹಯೋಗದಲ್ಲಿ ಜಿಲ್ಲೆಯ ವಿವಿಧೆಡೆ ಹಲವರಿಂದ ಸ್ವಚ್ಛತಾ ಅಭಿಯಾನ

KannadaprabhaNewsNetwork |  
Published : Mar 17, 2026, 02:45 AM IST
 | Kannada Prabha

ಸಾರಾಂಶ

ಸ್ವಚ್ಛ ಕೊಡಗು-ಸುಂದರ ಕೊಡಗು ಹೆಸರಿನಲ್ಲಿ ಪ್ರಸಿದ್ಧ ಪುಣ್ಯ ಕ್ಷೇತ್ರಗಳು ಸೇರಿದಂತೆ ಪ್ರವಾಸಿ ಸ್ಥಳಗಳು, ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ ಸ್ವಚ್ಛತಾ ಅಭಿಯಾನವು ಸೋಮವಾರ ನಡೆಯಿತು.

ಕನ್ನಡಪ್ರಭ ವಾರ್ತೆ ಮಡಿಕೇರಿ

ಸ್ವಚ್ಛ ಕೊಡಗು-ಸುಂದರ ಕೊಡಗು ಹೆಸರಿನಲ್ಲಿ ಪ್ರಸಿದ್ಧ ಪುಣ್ಯ ಕ್ಷೇತ್ರಗಳು ಸೇರಿದಂತೆ ಪ್ರವಾಸಿ ಸ್ಥಳಗಳು, ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ ಸ್ವಚ್ಛತಾ ಅಭಿಯಾನವು ಸೋಮವಾರ ನಡೆಯಿತು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಅರಣ್ಯ, ಪ್ರವಾಸೋದ್ಯಮ ಹಾಗೂ ಪ್ರವಾಸೋದ್ಯಮ ಇಲಾಖೆಯ ಪಾಲುದಾರರು ಹಾಗೂ ಇತರರ ಸಹಕಾರದಲ್ಲಿ ಸ್ವಚ್ಛ ಹಾಗೂ ಸುಂದರ ಕೊಡಗು ಅಭಿಯಾನ ನಡೆಯಿತು.

ನಗರದ ರಾಜಾಸೀಟು ಉದ್ಯಾನವನದಲ್ಲಿ ಅಭಿಯಾನಕ್ಕೆ ಚಾಲನೆ ನೀಡಿದ ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ, ಕೂರ್ಗ್ ಹೋಟೆಲ್ ಮತ್ತು ರೆಸಾರ್ಟ್ ಅಸೋಷಿಯೇಷನ್ ಅಧ್ಯಕ್ಷರಾದ ದಿನೇಶ್ ಕಾರ್ಯಪ್ಪ, ಹೋಂ ಸ್ಟೇ ಅಸೋಷಿಯೇಷನ್ ಅಧ್ಯಕ್ಷರಾದ ಮೋಂತಿ ಗಣೇಶ್, ಪ್ರವಾಸೋದ್ಯಮ ಪಾಲುದಾರರಾದ ಬಿ.ಜಿ.ಅನಂತಶಯನ, ಜಿ.ಚಿದ್ವಿಲಾಸ್, ಎಫ್‍ಎಂಸಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಬಿ.ರಾಘವ, ಓಂಕಾರೇಶ್ವರ ದೇವಸ್ಥಾನದ ಅಧ್ಯಕ್ಷರಾದ ಚುಮ್ಮಿ ದೇವಯ್ಯ, ಟೂರ್ ಅಂಡ್ ಟ್ರಾವೆಲ್ ಅಸೋಷಿಯೇಷನ್ ಅಧ್ಯಕ್ಷರಾದ ವಸಂತ, ಕೂರ್ಗ್ ಹೋಟೆಲ್ ಮತ್ತು ರೆಸಾರ್ಟ್ ಅಸೋಷಿಯೇಷನ್ ಕಾರ್ಯದರ್ಶಿ ನಾಸೀರ್, ಪ್ರವಾಸೋದ್ಯಮ ಇಲಾಖೆಯ ಸಮಾಲೋಚಕರಾದ ಜತಿನ್, ಇತರರು ಇದ್ದರು.

ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷರಾದ ನಾಗೇಂದ್ರ ಪ್ರಸಾದ್(ಕುಶಾಲನಗರ), ರಿವರ್ ರ್ಯಾಪ್ಟಿಂಗ್ ಅಸೋಷಿಯೇಷನ್(ದುಬಾರೆ), ಸೋಮವಾರಪೇಟೆ ಹೋಂ ಸ್ಟೇ ಅಸೋಷಿಯನ್ ಅಧ್ಯಕ್ಷರಾದ ರೋಹಿತ್(ಸೋಮವಾರಪೇಟೆ) ಇತರರು ಆಯಾಯ ತಾಲೂಕಿನಲ್ಲಿ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡಿದ್ದರು.

ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡಬೇಕು:

ಈ ಸಂದರ್ಭದಲ್ಲಿ ಮಾತನಾಡಿದ ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ ಅವರು, ಮಡಿಕೇರಿ ನಗರದಲ್ಲಿ ಅರ್ಧ ಲೀಟರ್ ಮತ್ತು ಒಂದು ಲೀಟರ್ ಬಾಟಲಿ ನೀರನ್ನು ನಿಷೇಧಿಸಲಾಗಿದೆ. ಇದರಿಂದ ಪ್ಲಾಸ್ಟಿಕ್ ಬಳಕೆ ಸಾಧ್ಯವಾದಷ್ಟು ನಿಯಂತ್ರಣಕ್ಕೆ ಬಂದಿದೆ. ಅದೇ ರೀತಿ ಮುಂದುವರೆಯಬೇಕು. ಪ್ಲಾಸ್ಟಿಕ್ ಬಳಕೆಯನ್ನು ಹಂತ ಹಂತವಾಗಿ ಕಡಿಮೆ ಮಾಡಬೇಕು ಎಂದರು.

ಉಪ ವಿಭಾಗಾಧಿಕಾರಿ ಹಾಗೂ ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕರಾದ ನಿತಿನ್ ಚಕ್ಕಿ ಅವರು ನಮ್ಮ ಸುತ್ತಮುತ್ತಲಿನ ಪರಿಸರ ಸ್ವಚ್ಛವಾಗಿರಬೇಕು. ಪ್ಲಾಸ್ಟಿಕ್‍ನ್ನು ಬಳಸಬಾರದು. ಶುಚಿತ್ವಕ್ಕೆ ಒತ್ತು ಕೊಟ್ಟಲ್ಲಿ ಉತ್ತಮ ಪರಿಸರ ಮತ್ತು ಆರೋಗ್ಯವನ್ನು ಕಾಣಬಹುದು ಎಂದು ತಿಳಿಸಿದರು.

ಹೋಟೆಲ್ ಮತ್ತು ರೆಸಾರ್ಟ್ ಅಸೋಷಿಯೇಷನ್ ಅಧ್ಯಕ್ಷರಾದ ದಿನೇಶ್ ಕಾರ್ಯಪ್ಪ ಅವರು ಕೊಡಗು ಜಿಲ್ಲಾ, ತಾಲೂಕು ಹಾಗೂ ಪ್ರವಾಸಿ ಸ್ಥಳಗಳು ಸೇರಿದಂತೆ ಸರ್ಕಾರ ಹಾಗೂ ಸರ್ಕಾರೇತರ ಸಂಸ್ಥೆಗಳ ಜೊತೆಗೂಡಿ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಹಚ್ಚಹಸಿರಿನ ಕೊಡಗು ಮತ್ತಷ್ಟು ಸುಂದರವಾಗಿರಬೇಕು. ಆ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸಿದ್ದಾರೆ ಎಂದು ಹೇಳಿದರು.

ಹೋಂ ಸ್ಟೇ ಅಸೋಷಿಯೇಷನ್ ಅಧ್ಯಕ್ಷರಾದ ಮೋಂತಿ ಗಣೇಶ್ ಅವರು ಮಾತನಾಡಿ ಉತ್ತಮ ಪರಿಸರಕ್ಕೆ ಒತ್ತು ಕೊಟ್ಟಿದ್ದಲ್ಲಿ ಪ್ರವಾಸಿಗರನ್ನು ಮತ್ತಷ್ಟು ಸೆಳೆಯಬಹುದಾಗಿದೆ. ಆ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸುವಂತಾಗಬೇಕು ಎಂದರು.

ಉತ್ತಮ ವಾತಾವರಣ ನಿರ್ಮಾಣ ಮಾಡಬೇಕು:

ಪ್ರವಾಸೋದ್ಯಮ ಪಾಲುದಾರರಾದ ಬಿ.ಜಿ.ಅನಂತಶಯನ ಅವರು ಮಾತನಾಡಿ ಪ್ರವಾಸಿಗರಿಗೆ ಪ್ರವಾಸಿ ಸ್ಥಳಗಳಲ್ಲಿ ಉತ್ತಮ ವಾತಾವರಣ ನಿರ್ಮಾಣ ಮಾಡಬೇಕು ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

ಪ್ರಸಿದ್ಧ ಪುಣ್ಯ ಕ್ಷೇತ್ರಗಳಾದ ತಲಕಾವೇರಿ, ಓಂಕಾರೇಶ್ವರ ದೇವಸ್ಥಾನ, ಭಾಗಮಂಡಲ, ಪ್ರವಾಸಿ ಸ್ಥಳಗಳಾದ ಮಡಿಕೇರಿ ತಾಲೂಕಿನ ಅಬ್ಬಿ ಜಲಪಾತ, ನಾಲ್ಕುನಾಡು ಅರಮನೆ, ರಾಜರ ಗದ್ದುಗೆ, ರಾಜಾಸೀಟು, ಕೋಟೆ, ಅಬ್ಬಿ ಜಲಪಾತ, ಚೇಲಾವರ ಜಲಪಾತ.

ಕುಶಾಲನಗರ ತಾಲೂಕಿನ ದುಬಾರೆ ರಿವರ್ ರ್ಯಾಫ್ಟಿಂಗ್, ಕಾವೇರಿ ನಿಸರ್ಗಧಾಮ, ಹಾರಂಗಿ ಜಲಾಶಯ, ಹಾರಂಗಿ ಉದ್ಯಾನವನ ಆನೆ ಶಿಬಿರ ಮತ್ತು ಹಿನ್ನೀರಿನ ಸಾಹಸ ಕ್ರೀಡೆ ಸ್ಥಳಗಳು, ಚಿಕ್ಲಿ ಹೊಳೆ. ಸೋಮವಾರಪೇಟೆ ತಾಲೂಕಿನ ಹೊನ್ನಮ್ಮ ಕೆರೆ, ಮಕ್ಕಳ ಗುಡಿ ಬೆಟ್ಟ, ಕೋಟೆ ಬೆಟ್ಟ, ಸೂರ್ಲಬ್ಬಿ ಜಲಪಾತ ಮತ್ತು ಮಲ್ಲಳ್ಳಿ ಜಲಪಾತ. ಹಾಗೆಯೇ ಪೊನ್ನಂಪೇಟೆ ತಾಲೂಕಿನ ಬರ್ಪುಹೊಳೆ ರಿವರ್ ರ್ಯಾಫ್ಟಿಂಗ್ ಮತ್ತು ಇರ್ಪು ಜಲಪಾತ ಇಲ್ಲಿ ಸ್ವಚ್ಛತಾ ಅಭಿಯಾನ ನಡೆಯಿತು.

ಹಾಗೆಯೇ ಮಡಿಕೇರಿ ನಗರದಲ್ಲಿ ವಿರಾಜಪೇಟೆ ರಸ್ತೆ, ಭಾಗಮಂಡಲ-ತಲಕಾವೇರಿ ರಸ್ತೆ(ಮಂಗಳೂರು ರಸ್ತೆ), ಮಡಿಕೇರಿ-ಸಿದ್ದಾಪುರ ರಸ್ತೆ ಮತ್ತು ಮಡಿಕೇರಿ-ಮೈಸೂರು ರಸ್ತೆ ಈ ವ್ಯಾಪ್ತಿಯ 2 ಕಿ,.ಮೀ ವರೆಗೆ ಸ್ವಚ್ಛತಾ ಅಭಿಯಾನ ನಡೆಯಿತು.

ಕುಶಾಲನಗರದಲ್ಲಿ ಕೊಪ್ಪ ಗೇಟಿನಿಂದ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದವರೆಗೆ, ಸೋಮೇಶ್ವರ ದೇವಸ್ಥಾನದಿಂದ ಕೋಣಮಾರಮ್ಮ ದೇವಸ್ಥಾನ ವೃತ್ತದ ಮುಖಾಂತರ ಐಬಿ ರಸ್ತೆಗಾಗಿ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದವರೆಗೆ, ತಾವರೆಕೆರೆಯಿಂದ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದವರೆಗೆ ಮತ್ತು ಅಯ್ಯಪ್ಪ ಸ್ವಾಮಿ ದೇವಸ್ಥಾನದಿಂದ ಕೆಎಸ್‍ಆರ್‍ಸಿ ಬಸ್ ನಿಲ್ದಾಣದವರೆಗೆ ಸ್ವಚ್ಛ ಕೊಡಗು-ಸುಂದರ ಕೊಡಗು ಹೆಸರಿನಲ್ಲಿ ಸ್ವಚ್ಛತಾ ಅಭಿಯಾನ ನಡೆಯಿತು.

ಮತ್ತಷ್ಟು ಮಾಹಿತಿ:

ಕೊಡಗು ಸ್ವಚ್ಛತಾ ಅಭಿಯಾನ ಕಾರ್ಯಕ್ರಮದ ಅಂಗವಾಗಿ ಕಾವೇರಿ ನಿಸರ್ಗಧಾಮ ಎನ್.ಟಿ.ಸಿ ಹಾಗೂ ಕೂರ್ಗ್ ರಿವೇರ್ ರೆಸಾರ್ಟ್ ಇದರ ಸಹಯೋಗದಿಂದ ಹಾಗೂ ಅರಣ್ಯ ಅಧಿಕಾರಿಗಳು ಇವರೆಲ್ಲರ ಸಹಯೋಗದಿಂದ ಸುಮಾರು 50 ಜನರು ಕಾವೇರಿ ನಿಸರ್ಗಧಾಮ ಮುಂಭಾಗದಿಂದ ಗುಡ್ಡೆಹೊಸೂರು ರೋಡು ಮಾರ್ಗವಾಗಿ ಎಡಕ್ಕೂ ಹಾಗೂ ಬಲಕ್ಕೂ ಸ್ವಚ್ಛತಾ ಕಾರ್ಯವನ್ನು ಕೈಗೊಂಡಿರುತ್ತಾರೆ. ರೋಡಿನ ಮಧ್ಯೆ ಕಸದ ರಾಶಿಯೇ ಇತ್ತು ಅದನ್ನು ಆಯಾಯ ಗ್ರಾಮ ಪಂಚಾಯಿತಿಗಳು ಒಂದು ನಿರ್ದಿಷ್ಟ ಜಾಗದಲ್ಲಿ ಕಸದ ತೊಟ್ಟಿ ಇಟ್ಟರೆ ಈ ಕಸವನ್ನು ಸ್ವಲ್ಪಮಟ್ಟಿಗೆ ಆದರೂ ಸುಧಾರಿಸಬಹುದು. ಹಾಗೆಯೇ ಸರ್ಕಾರ ಇದರ ಬಗ್ಗೆ ಹೆಚ್ಚು ಆಸಕ್ತಿ ತೋರಿಸಿ ಪ್ರವಾಸೋದ್ಯಮಗಳು ಮುಂಬರುವ ದಿನಗಳಲ್ಲಿ ಹೆಚ್ಚು ಜನರನ್ನು ಕೊಡಗಿನಲ್ಲಿ ಆಕರ್ಷಿಸುತ್ತದೆ. ಆದ್ದರಿಂದ ಕಸದ ರಾಶಿಯು ಅದೇ ತರ ಹೆಚ್ಚಾಗುತ್ತದೆ.

ಇದಕ್ಕೆ ಪರಿಹಾರವಾಗಿ ಆಯಾಯ ನಿರ್ದಿಷ್ಟ ಸ್ಥಳಗಳಲ್ಲಿ ಕಸದ ಬುಟ್ಟಿಯನ್ನು ಅಳವಡಿಸಲು ಕ್ರಮವನ್ನು ಕೈಗೊಳ್ಳಬೇಕು ಎಂಬುದು ಕೇಳಿಬಂದೀತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜಾನಪದ ಕಲೆಗಳಿಗೆ ಪ್ರಕೃತಿ ನಿಕಟ ಸಂಬಂಧ: ಟಿ.ಪಿ. ರಮೇಶ್
ಮೂಡುಬಿದಿರೆ ಇನ್ಸ್‌ಪೆಕ್ಟರ್ ಪ್ರಕರಣ: ಪೀಡಿತೆಯರಿದ್ದರೆ ದೂರು ನೀಡಲು ಸಲಹೆ