- ಹರಿಹರದಲ್ಲಿ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಸೂಚನೆ
ಕನ್ನಡಪ್ರಭ ವಾರ್ತೆ ಹರಿಹರ
ನಗರಸಭೆಯಿಂದ ಯಾವುದೇ ಅಭಿವೃದ್ಧಿ ಕಾಮಗಾರಿಗಳ ಕೈಗೊಳ್ಳುವ ಮುನ್ನ ಅಧಿಕಾರಿಗಳು ಒತ್ತುವರಿಯನ್ನು ಮುಲಾಜಿಲ್ಲದೇ ತೆರವುಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಸೂಚಿಸಿದರು.ಶಾಸಕ ಬಿ.ಪಿ.ಹರೀಶ್ ಹಾಗೂ ನಗರಸಭೆ ಅಧಿಕಾರಿಗಳೊಂದಿಗೆ ಮಂಗಳವಾರ ನಗರದ ವಿವಿಧೆಡೆ ಸ್ಥಳ ಪರಿಶೀಲನೆ ಮಾಡಿದ ಅವರು, ರಸ್ತೆ, ಚರಂಡಿ ಅಥವಾ ಇತರೆ ಯಾವುದೆ ಕಾಮಗಾರಿ ಮಾಡುವ ರಸ್ತೆಯಲ್ಲಿ ಯಾರಾದರೂ ಸರ್ಕಾರಿ ಜಾಗ ಒತ್ತುವರಿ ಮಾಡಿದ್ದರೆ ಅದನ್ನು ಮೊದಲು ತೆರವುಗೊಳಿಸಿ, ನಂತರ ಕಾಮಗಾರಿ ಆರಂಭಿಸಬೇಕು ಎಂದರು.
ನಗರಸಭೆಗೆ ಅವಶ್ಯಕತೆ ಇರುವ ಸಂಖ್ಯೆಯ ಪೌರಕಾರ್ಮಿಕರನ್ನು ಗುತ್ತಿಗೆ ಆಧಾರದಲ್ಲಿ ಶೀಘ್ರವಾಗಿ ನೇಮಕಾತಿ ಮಾಡಿಕೊಳ್ಳಲಾಗುವುದು. ನಗರದ ಜನಸಂಖ್ಯೆಗೆ ತಕ್ಕಂತೆ ನಿರ್ದಿಷ್ಟ ಸಂಖ್ಯೆಯ ಪೌರ ಕಾರ್ಮಿಕರ ಕೊರತೆಯಿದೆ. ಇದನ್ನೂ ಮನಗಂಡು ಶೀಘ್ರದಲ್ಲಿ ಗುತ್ತಿಗೆ ಆಧಾರದಲ್ಲಿ ಟೆಂಡರ್ ಕರೆದು ತಿಂಗಳೊಳಗಾಗಿ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು ಎಂದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಹರೀಶ್ ಅವರು, ನಗರದಲ್ಲಿ ಸ್ವಚ್ಛತೆಯ ಕೊರತೆ, ವಾರದ ಸಂತೆಗೆ ಜಾಗ ನಿಗದಿ, ಫುಟ್ ಪಾತ್ ತೆರವು, ಫುಟ್ ಪಾತ್ ವ್ಯಾಪಾರಿಗಳಿಗೆ ಪರ್ಯಾಯ ಸ್ಥಳ ನಿಗದಿ ಸೇರಿದಂತೆ ನಗರದ ವಿವಿಧ ಸಮಸ್ಯೆಗಳ ಕುರಿತು ಅವಲೋಕನ ಮಾಡಲು ಮನವಿ ಮಾಡಿದ ಮೇರೆಗೆ ಜಿಲ್ಲಾಧಿಕಾರಿ ಭೇಟಿ ನೀಡಿದ್ದರು ಎಂದರು.
- - -
ಹರಿಹರದ ಸಾರ್ವಜನಿಕ ಹಳೆ ಆಸ್ಪತ್ರೆ ಆವರಣವನ್ನು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಮಂಗಳವಾರ ಪರಿಶೀಲಿಸಿದರು. ಶಾಸಕ ಬಿ.ಪಿ.ಹರೀಶ್, ಪೌರಾಯುಕ್ತೆ ವಿ.ಈರಮ್ಮ ಹಾಗೂ ಇತರರು ಇದ್ದರು.