ಬಳ್ಳಾರಿ: ನಗರದ ಜಿಪಂ ಅಬ್ದುಲ್ ನಜೀರ್ ಸಭಾಂಗಣದಲ್ಲಿ ಬುಧವಾರ “ಕರ್ನಾಟಕ ರಾಜ್ಯ ಹವಾಮಾನ ಬದಲಾವಣೆಯ ಕುರಿತು ಕ್ರಿಯಾ ಯೋಜನೆ” ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು.
ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆಯ ವಿಜ್ಞಾನಿ ಡಾ. ಶ್ರುತಿ ಬಿ.ವಿ. ಮಾತನಾಡಿ, ಜಿಲ್ಲಾ ಮಟ್ಟದ ಅಧಿಕಾರಿಗಳ ಸಾಮರ್ಥ್ಯ ವೃದ್ಧಿಸುವ ನಿಟ್ಟಿನಲ್ಲಿ ಕಳೆದ ವರ್ಷ 22 ಜಿಲ್ಲೆಗಳಲ್ಲಿ ತರಬೇತಿ ನೀಡಲಾಗಿತ್ತು. ಈ ಬಾರಿ (2026-27ನೇ ಸಾಲಿನಲ್ಲಿ) ರಾಜ್ಯದ ಎಲ್ಲ 31 ಜಿಲ್ಲೆಗಳಿಗೂ ಈ ಕಾರ್ಯಕ್ರಮ ವಿಸ್ತರಿಸಲಾಗಿದೆ ಎಂದು ತಿಳಿಸಿದರು.
‘ಕರ್ನಾಟಕ ರಾಜ್ಯ ಹವಾಮಾನ ಬದಲಾವಣೆಯ ಕ್ರಿಯಾ ಯೋಜನೆ’ಯ ಕಾರ್ಯನೀತಿ, ಕಾರ್ಯತಂತ್ರಗಳು, ವಿವಿಧ ಇಲಾಖೆಗಳ ಪಾತ್ರ, ಅಲ್ಪಾವಧಿಯ ಹವಾಮಾನ ಮಾಲಿನ್ಯಕಾರಕಗಳ ಪರಿಣಾಮಗಳು ಹಾಗೂ ಜಿಲ್ಲಾಮಟ್ಟದ ದತ್ತಾಂಶಗಳ ಕುರಿತು ಸಮಗ್ರ ಉಪನ್ಯಾಸ ನೀಡಿದರು.ಸಂಶೋಧನಾ ವಿಜ್ಞಾನಿ ದೀಪಾ ರಾಣಿ ಮಾತನಾಡಿದರು. ಜಿಪಂನ ಎನ್ಆರ್ಡಿಎಂಎಸ್ ಅಧಿಕಾರಿ ರಾಮಚಂದ್ರ ರೆಡ್ಡಿ ಅವರು ತಮ್ಮ ವಿಭಾಗದ ಕಾರ್ಯಚಟುವಟಿಕೆ ಬಗ್ಗೆ ವಿವರಿಸಿದರು. ರುಚಿತಾ ಹಾಗೂ ಎನ್. ರಾಘವೇಂದ್ರ ಕಾರ್ಯಕ್ರಮ ನಿರ್ವಹಿಸಿದರು. ಕಾರ್ಯಾಗಾರದಲ್ಲಿ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿ-ಸಿಬ್ಬಂದಿ, ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಶಿಕ್ಷಣ ಸಂಸ್ಥೆಗಳ ಸದಸ್ಯರು ಭಾಗವಹಿಸಿದ್ದರು.