ಕನ್ನಡಪ್ರಭ ವಾರ್ತೆ ಹುಬ್ಬಳ್ಳಿ
ಕಬ್ಬು ಬೆಳೆಗಾರರು ಮತ್ತು ಮೆಕ್ಕೆಜೋಳ ರೈತರ ವಿಚಾರದಲ್ಲಿ ಸಿಎಂ ಸ್ವಲ್ಪ ತಡವಾಗಿ ಕುಂಭಕರ್ಣ ನಿದ್ದೆಯಿಂದ ಎಚ್ಚೆತ್ತುಕೊಂಡಿದ್ದಾರೆ. ಅಂತೂ ಎಥೆನಾಲ್ ಉತ್ಪಾದನೆಗಾಗಿ ಮೆಕ್ಕೆಜೋಳ ಖರೀದಿಗೆ ಒಪ್ಪಂದ ಮಾಡಿಕೊಳ್ಳುವಂತೆ ಡಿಸ್ಟಿಲರಿಗಳಿಗೆ ಪತ್ರ ಬರೆದಿದ್ದಾರೆ ಎಂದು ಜೋಶಿ ಹೇಳಿದ್ದಾರೆ.
ಎಥೆನಾಲ್ ಉತ್ಪಾದನೆಗಾಗಿ ಮೆಕ್ಕೆಜೋಳ ಖರೀದಿಗೆ ಎನ್ಸಿಸಿಎಫ್ ಮತ್ತು ನೆಫೆಡ್ ಜತೆ ಒಪ್ಪಂದ ಮಾಡಿಕೊಳ್ಳುವಂತೆ ಡಿಸ್ಟಿಲರಿಗಳಿಗೆ ಪತ್ರ ಬರೆಯುವ ಬುದ್ಧಿ ಈಗಲಾದರೂ ಬಂದಿತಲ್ಲ ಎಂದಿರುವ ಜೋಶಿ, ಇಷ್ಟು ದಿನ ಪ್ರತಿಯೊಂದಕ್ಕೂ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆಯುತ್ತಿದ್ದ ಸಿಎಂಗೆ ಈಗ ಜ್ಞಾನೋದಯವಾಗಿದೆ ಎಂದಿದ್ದಾರೆ.ಎಥೆನಾಲ್ ಉತ್ಪಾದನೆಗಾಗಿ ಬೆಂಬಲ ಬೆಲೆಯಲ್ಲಿ ಮೆಕ್ಕೆಜೋಳ ಖರೀದಿಸಿಕೊಳ್ಳಲು ಎನ್ಸಿಸಿಎಫ್ ಮತ್ತು ನೆಫೆಡ್ ನೊಂದಿಗೆ ಒಪ್ಪಂದ ಮಾಡಿಕೊಳ್ಳತಕ್ಕದ್ದೆಂದು ಸಿಎಂ ಇದೀಗ ಡಿಸ್ಟಿಲರಿಗಳಿಗೆ ಪತ್ರ ಬರೆದಿದ್ದಾರೆ. ರಾಜ್ಯ ಸರ್ಕಾರಕ್ಕೆ ತನ್ನ ಕಾರ್ಯದ ಬಗ್ಗೆ ಅರಿವಾದಂತಿದೆ ಎಂದಿದ್ದಾರೆ.
ಇನ್ನಾದರೂ ಕೇಂದ್ರದತ್ತ ಬೆರಳು ತೋರದಿರಲಿ:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇನ್ನಾದರೂ ರೈತರಲ್ಲಿ ಇಲ್ಲ ಸಲ್ಲದ ಗೊಂದಲ ಸೃಷ್ಟಿಸುವುದನ್ನು ಬಿಡಲಿ. ತಮ್ಮ ಸರ್ಕಾರದ ಆಡಳಿತ ವೈಫಲ್ಯ ಮರೆಮಾಚುವುದಕ್ಕಾಗಿ ಕೇಂದ್ರ ಸರ್ಕಾರದತ್ತ ಬೆರಳು ತೋರುವುದನ್ನು ಇಲ್ಲಿಗೆ ನಿಲ್ಲಿಸಲಿ. ರಾಜ್ಯದಲ್ಲಿ ಜನ ಕೊಟ್ಟ ಅಧಿಕಾರವನ್ನು ಜನರಿಗಾಗಿ ಸದ್ವಿನಿಯೋಗ ಆಗುವಂತೆ ಪಾರದರ್ಶಕ ಆಡಳಿತ ನಿರ್ವಹಿಸಲಿ ಎಂದು ಸಚಿವರು ಸಲಹೆ ನೀಡಿದ್ದಾರೆ.