ದತ್ತಾಂಶದ ಹೆಸರಲ್ಲಿ ಒಳ ಮೀಸಲು ನೀಡದೆ ಸಿಎಂ ದ್ರೋಹ

KannadaprabhaNewsNetwork |  
Published : Mar 17, 2025, 12:32 AM IST
ಚಿತ್ರದುರ್ಗ ಎರಡನೇ ಪುಟದ ಲೀಡ್ | Kannada Prabha

ಸಾರಾಂಶ

ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಬೆಂಗಳೂರು ಚಲೋ ಕುರಿತು ಡಾ.ಎನ್.ಮೂರ್ತಿ ಪತ್ರಿಕಾಗೋಷಷ್ಠಿಯಲ್ಲಿ ಮಾಹಿತಿ ನೀಡಿದರು.

ದಸಂಸ ರಾಜ್ಯಾಧ್ಯಕ್ಷ ಡಾ.ಎನ್.ಮೂರ್ತಿ ಹೇಳಿಕೆ । 19ರಂದು ಬೆಂಗಳೂರು ಚಲೋಕನ್ನಡಪ್ರಭ ವಾರ್ತೆ ಚಿತ್ರದುರ್ಗ

ದತ್ತಾಂಶದ ಹೆಸರಲ್ಲಿ ಪರಿಶಿಷ್ಟರಿಗೆ ಒಳ ಮೀಸಲು ನೀಡದೆ ಮುಖ್ಯಮಂತ್ರಿ ಸಿದ್ದರಾಮಯ್ಯ ದ್ರೋಹದ ರಾಜಕಾರಣ ಮಾಡುತ್ತಿದ್ದಾರೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯಾಧ್ಯಕ್ಷ ಹಾಗೂ ಆರ್‌ಪಿಐ ರಾಷ್ಟ್ರೀಯ ಅಧ್ಯಕ್ಷ ಡಾ.ಎನ್.ಮೂರ್ತಿ ಆರೋಪಿಸಿದರು.

ಪತ್ರಕರ್ತರ ಭವನದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಳ ಮೀಸಲಾತಿ ಜಾರಿಗೊಳಿಸುವ ಅಧಿಕಾರ ಆಯಾ ರಾಜ್ಯ ಸರ್ಕಾರಗಳಿಗಿದೆ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿ ಎಂಟು ತಿಂಗಳಾಗಿದ್ದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಲಹರಣ ಮಾಡುತ್ತ ದಲಿತರಿಗೆ ಅನ್ಯಾಯವೆಸಗುತ್ತಿದ್ದಾರೆ.

ಒಳ ಮೀಸಲಾತಿ ಜಾರಿಗೊಳಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿ ಮಾರಸಂದ್ರಮುನಿಯಪ್ಪ ನೇತೃತ್ವದಲ್ಲಿ ಮಾ.19 ರಂದು ಬೆಂಗಳೂರು ಚಲೋ ಹಮ್ಮಿಕೊಳ್ಳಲಾಗಿದೆ ಎಂದರು.

ಕರ್ನಾಟಕ ದಲಿತ ಸಂಘರ್ಷ ಸಮಿತಿ, ಬಿಎಸ್‍ಪಿ, ಆರ್‌ಪಿಐ, ಮಾದಿಗ ದಂಡೋರ, ಆದಿಜಾಂಬವ ಸಂಘಟನೆ ಒಳಗೊಂಡಂತೆ 50ಕ್ಕೂ ಹೆಚ್ಚು ಸಂಘಟನೆಗಳು ಮುಷ್ಕರದಲ್ಲಿ ಪಾಲ್ಗೊಳ್ಳಲಿವೆ. ನೆರೆಯ ಆಂಧ್ರದಲ್ಲಿ ಈಗಾಗಲೆ ಒಳ ಮೀಸಲಾತಿಯನ್ನು ಜಾರಿಗೆ ತರಲಾಗಿದೆ. ಎ.ಜೆ.ಸದಾಶಿವ ಆಯೋಗವನ್ನು ರಚಿಸಿದ ಸರ್ಕಾರವೇ ಕೈಕಟ್ಟಿ ಹಾಕಿದೆ. 2ನೇ ಅವಧಿಗೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದರೂ ಸದಾಶಿವ ಆಯೋಗದ ವರದಿ ನೋಡಿಲ್ಲವೆಂದರು.

1 ಲಕ್ಷ ನೌಕರರನ್ನು ಬಳಸಿಕೊಂಡು 7 ವರ್ಷಗಳ ಕಾಲ ನ್ಯಾಯಮೂರ್ತಿ ಎ.ಜೆ.ಸದಾಶಿವರವರು ವರದಿ ತಯಾರಿಸಿ ಸರ್ಕಾರಕ್ಕೆ ನೀಡಿದ್ದರೂ ದಲಿತರಿಗೆ ಪ್ರಯೋಜನಕ್ಕೆ ಬರದಂತಾಗಿದೆ. ಮಧ್ಯಂತರ ವರದಿಯನ್ನು ನಾಗಮೋಹನ್‍ದಾಸ್ ಸರ್ಕಾರಕ್ಕೆ ಸಲ್ಲಿಸಬೇಕು. ಒಳ ಮೀಸಲಾತಿ ಜಾರಿಗೊಳಿಸುವತನಕ ಯಾವುದೇ ಹುದ್ದೆಯನ್ನು ನೇಮಕ ಮಾಡಿಕೊಳ್ಳಬಾರದು. ದಲಿತ ಸಚಿವರುಗಳೆ ಬ್ಯಾಕ್‍ಲಾಗ್ ಹುದ್ದೆ ನೇಮಕ ಮಾಡಿಕೊಳ್ಳಲು ಮುಖ್ಯಮಂತ್ರಿ ಮೇಲೆ ಒತ್ತಡ ಹೇರುತ್ತಿದ್ದಾರೆ. ಸಾಮಾಜಿಕ ನ್ಯಾಯಕ್ಕೆ ಎಳ್ಳು ನೀರು ಬಿಡಲು ಸಿಎಂ ಮುಂದಾಗಬಾರದು ಎಂದುಡಾ.ಎನ್.ಮೂರ್ತಿ ಹೇಳಿದರು.

ಕಾಂಗ್ರೆಸ್ ಮೃದು ಕೋಮುವಾದಿಯಾದರೆ ಬಿಜೆಪಿಯವರು ನೇರ ಕೋಮುವಾದಿಗಳು. ಇವರಿಬ್ಬರ ನಡುವೆ ಪರಿಶಿಷ್ಟ ಜಾತಿಯಲ್ಲಿನ ನೂರ ಒಂದು ಜಾತಿಯವರು ಹೈರಾಣಾಗಿದ್ದಾರೆ. ದಲಿತರ ಅಭಿವೃದ್ದಿಗಾಗಿಯೇ ಬಳಬೇಕಾಗಿರುವ ಎಸ್ಸಿಪಿ, ಟಿಎಸ್ಪಿ ಹಣವನ್ನು ಐದು ಉಚಿತ ಗ್ಯಾರೆಂಟಿಗಳಿಗೆ ಮುಖ್ಯಮಂತ್ರಿ ಬಳಸುತ್ತಿದ್ದಾರೆ. ಏಳು ಅಭಿವೃದ್ದಿ ನಿಗಮಗಳಿಗೆ ಹಂಚಿಕೆಯಾಗಿರುವ ಪ್ರಕಾರ ಹಣ ಬಿಡುಗಡೆಯಾಗಿಲ್ಲ. ಒಳ ಮೀಸಲಾತಿ ಜಾರಿಯಾಗುವತನಕ ನಮ್ಮ ಹೋರಾಟ ನಿಲ್ಲುವುದಿಲ್ಲವೆಂದು ಡಾ.ಎನ್.ಮೂರ್ತಿ ಎಚ್ಚರಿಸಿದರು. ಬೈಲ ಹೊನ್ನಯ್ಯ, ಲೇಖಕ ಹೆಚ್.ಆನಂದ್‍ಕುಮಾರ್, ವಿಶ್ವನಾರಾಯಣಮೂರ್ತಿ, ದಲಿತ ಮುಖಂಡ ಬಿ.ರಾಜಪ್ಪ, ಕಣಿವೆಮಾರಮ್ಮ ಸಂಘದ ಅಧ್ಯಕ್ಷ ತಿಪ್ಪೇಸ್ವಾಮಿ ಇವರುಗಳು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

PREV

Recommended Stories

ಗ್ರಾಮೀಣ ಭಜನಾ ಮಂಡಳಿಗಳಲ್ಲಿ ತತ್ವಪದಗಳು ಜೀವಂತ
ರಾಮದುರ್ಗ ಧನಲಕ್ಷ್ಮೀ ಶುಗರ್ ಚುನಾವಣೆ: ಸತತ 4ನೇ ಬಾರಿಗೆ ಯಾದವಾಡರ ನೇತೃತ್ವಕ್ಕೆ ಜಯ