ಕನ್ನಡಪ್ರಭ ವಾರ್ತೆ ಬೆಂಗಳೂರು
ಸೋಮವಾರ ಬೆಳಗ್ಗೆಯೇ ಬೆಂಗಳೂರಿನಿಂದ ದೆಹಲಿಗೆ ತೆರಳುವ ಮುಖ್ಯಮಂತ್ರಿ ಅವರು, ಸಂಜೆ ಸಂಸದರೊಂದಿಗೆ ಸಭೆ ನಡೆಸಲಿದ್ದಾರೆ. ಈ ವೇಳೆ ರಾಜ್ಯದಲ್ಲಿ ಮುಂಗಾರು ಮಳೆಯ ತೀವ್ರ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿ, ಜಲಾಶಯಗಳಲ್ಲಿ ನೀರಿನ ಕ್ಷಾಮ, ಕಾವೇರಿ ನೀರಿನ ವಿಚಾರದ ಬಗ್ಗೆಯೂ ಚರ್ಚೆ ನಡೆಸಲಿದ್ದು, ಸಂಸತ್ ಅಧಿವೇಶನದಲ್ಲಿ ರಾಜ್ಯದ ಪರವಾಗಿ ದನಿ ಎತ್ತಲು ಸಂಸದರಿಗೆ ಮುಖ್ಯಮಂತ್ರಿ ಅವರು ಕೋರಲಿದ್ದಾರೆ. ಜೊತೆಗೆ ಪ್ರಧಾನಿ ಅವರ ಬಳಿಗೆ ಸರ್ವಪಕ್ಷ ನಿಯೋಗ ತೆರಳುವ ಕುರಿತೂ ಚರ್ಚಿಸಲಿದ್ದಾರೆ ಎಂದು ತಿಳಿದು ಬಂದಿದೆ.
ಈ ಸಂಬಂಧ ಮುಖ್ಯಮಂತ್ರಿ ಅವರ ಕಚೇರಿಯಿಂದ ಎಲ್ಲ ಸಂಸದರಿಗೂ ಪತ್ರದ ಮೂಲಕ ಸಭೆಗೆ ಅಧಿಕೃತ ಆಹ್ವಾನ ನೀಡಲಾಗಿದೆ. ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದಲ್ಲಿ ರಾಜ್ಯಕ್ಕೆ ಸಂಬಂದಿಸಿದ ಬಾಕಿ ಇರುವ ಪ್ರಸ್ತಾವನೆಗಳು ಹಾಗೂ ರಾಜ್ಯದ ಒಟ್ಟಾರೆ ಅಭಿವೃದ್ದಿಯ ಕುರಿತು ಕೇಂದ್ರದ ಸಹಕಾರ ಒದಗಿಸುವ ಕುರಿತು ಚರ್ಚಿಸಲು ಸೋಮವಾರ ಸಂಜೆ 6.30ಕ್ಕೆ ನವದೆಹಲಿಯ ಕರ್ನಾಟಕ ಭವನ -1(ಕಾವೇರಿ)ರಲ್ಲಿ ಸಭೆ ಆಯೋಜಿಸಲಾಗಿದೆ. ಸಭೆಗೆ ಎಲ್ಲರೂ ಆಗಮಿಸಿ ತಮ್ಮ ಅಮೂಲ್ಯ ಸಲಹೆ, ಸೂನಚೆಗಳನ್ನು ನೀಡಬೇಕೆಂದು ಪತ್ರದಲ್ಲಿ ಕೋರಲಾಗಿದೆ.