ಕನ್ನಡಪ್ರಭ ವಾರ್ತೆ ಬೆಂಗಳೂರು
ಗೃಹ ಕಚೇರಿ ಕೃಷ್ಣಾದಲ್ಲಿ ವಿವಿಧ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಬಗ್ಗೆ ಪಕ್ಷದ ಶಾಸಕರು ಹಾಗೂ ಹಿಂದಿನ ಚುನಾವಣೆಯಲ್ಲಿ ಪರಾಜಿತ ಅಭ್ಯರ್ಥಿಗಳೊಂದಿಗೆ ಆರ್ಥಿಕ ಸ್ಥಿತಿಗತಿ ಅವಲೋಕಿಸಿ ಸ್ಪಂದಿಸುವ ಭರವಸೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.
ಅಭಿವೃದ್ಧಿ ಕೆಲಸಗಳಲ್ಲಿ ಹಿಂದೆ ಬೋಗಸ್ ಬಿಲ್ಗಳ ತಯಾರಿಯಂತಹ ಅಕ್ರಮ ನಡೆದಿದೆ. ಪಾರದರ್ಶಕವಾಗಿ ಕಾಮಗಾರಿಗಳಿಗೆ ಅವಕಾಶ ನೀಡಬೇಕು ಎಂದು ಸೂಚಿಸಲಾಗಿದೆ. ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ಪ್ರತಿ ಜಿಲ್ಲೆಯಲ್ಲಿ ವಸತಿ, ನಿವೇಶನ ರಹಿತರಿಗಾಗಿ ಕಂದಾಯ ಇಲಾಖೆಯಿಂದ 50 ಸಾವಿರ ನಿವೇಶನ ಹಂಚಿಕೆಗೆ ತೀರ್ಮಾನಿಸಿದ್ದಾರೆ. ಇದಕ್ಕಾಗಿ ಸರ್ಕಾರಿ ಜಮೀನುಗಳ ಗುರುತಿಸಲು ಜಿಲ್ಲಾಡಳಿತಗಳಿಗೆ ಸೂಚಿಸಲಾಗಿದೆ. ಬಡವರಿಗೆ ಸೈಟ್ ಹಂಚುವ ಈ ಯೋಜನೆಗೆ ಶಾಸಕರು ಸಹಕರಿಸಬೇಕು ಎಂದು ತಿಳಿಸಲಾಗಿದೆ. ಗ್ರಾಮೀಣ, ತಾಲೂಕುಗಳಿಂದ ಜನರ ವಲಸೆ ತಪ್ಪಿಸಲು ಸ್ಥಳೀಯ ಮಟ್ಟದಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಲು ಆದ್ಯತೆ ನೀಡುವಂತೆ ಶಾಸಕರಿಗೆ ಸಲಹೆ ನೀಡಿದ್ದೇನೆ ಎಂದರು ತಿಳಿಸಿದರು.ಬರ ನಿರ್ವಹಣೆಯಲ್ಲಿ ಸರ್ಕಾರ ವಿಫಲವಾಗಿದೆ ಎಂಬ ಪ್ರತಿಪಕ್ಷಗಳ ಆರೋಪ ಕುರಿತ ಪ್ರಶ್ನೆಗೆ, ವಿರೋಧ ಪಕ್ಷದವರಿಗೆ ಬಡವರು, ಬರದ ಬಗ್ಗೆ ಕಾಳಜಿ ಇಲ್ಲ. ಅವರಿಗೆ ರಾಜಕೀಯ ಮುಖ್ಯ. ಸದನದಲ್ಲಿ ಬರ, ನೆರೆ ಸೇರಿದಂತೆ ಜನಸಾಮಾನ್ಯರ ಬವಣೆಗಳ ಬಗ್ಗೆ ಚರ್ಚೆ ಮಾಡದೆ ಕಾಲಹರಣ ಮಾಡಿದರು ಎಂದರು.
ತಿಂಗಳಲ್ಲಿ 2 ದಿನ ಸಚಿವರ ಜಿಲ್ಲಾ ಸಭೆಗೆ ಸೂಚನೆ:
ಪ್ರತಿಯೊಬ್ಬರ ಸಚಿವರು ತಿಂಗಳ ಮೊದಲ ಹಾಗೂ ಮೂರನೇ ಶನಿವಾರದಂದು ಜಿಲ್ಲೆಗಳಿಗೆ ಭೇಟಿ ನೀಡಿ ಜನರ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಒದಗಿಸುವ ಸಂಬಂಧ ಸಭೆ ನಡೆಸಲು ಸೂಚಿಸಲಾಗಿದೆ. ನಂತರ ಹೋಬಳಿ ಮಟ್ಟದಲ್ಲಿ ಈ ರೀತಿ ರಾಜ್ಯದ ಎಲ್ಲಾ 224 ಕ್ಷೇತ್ರಕ್ಕೆ ಸಚಿವರು ಭೇಟಿ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಬೇಕು. ಆಯಾ ಶಾಸಕರು ಪಂಚಾಯತಿ ಮಟ್ಟದಲ್ಲೂ ಜನರ ಸಮಸ್ಯೆಗಳನ್ನು ಆಲಿಸಿ, ಜನರ ಭಾವನೆ ಅರಿತು, ಸರ್ಕಾರಕ್ಕೆ ತಿಳಿಸಲು ಅನುಕೂಲವಾಗುವಂತೆ ಪ್ರಜಾಸೇವೆ ಇಲಾಖೆ ರಚಿಸಲಾಗಿದೆ. ಈ ಬಗ್ಗೆ ಶಾಸಕರಿಗೆ ಮಾರ್ಗದರ್ಶನ ನೀಡಲಾಗಿದೆ ಎಂದು ವಿವರಿಸಿದರು.