ಕನ್ನಡಪ್ರಭ ವಾರ್ತೆ ಕಲಬುರಗಿ
ಶನಿವಾರ ಇಲ್ಲಿನ ಡಿ.ಸಿ. ಕಚೇರಿ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಸಿ.ಎಂ. ಜನಸ್ಪಂದನಾ ಸಭೆ ಹಿನ್ನೆಲೆಯಲ್ಲಿ ಇಂದು ಅಧಿಕಾರಿಗಳೊಂದಿಗೆ ಗುಲ್ಬರ್ಗ ವಿ.ವಿ.ಗೆ ಹೋಗಿ ಸ್ಥಳ ಪರಿಶೀಲನೆ ಮಾಡಲಾಗಿದೆ. ಪೂರ್ವಸಿದ್ಧತೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಸಭೆಯ ದಿನಾಂಕ ಸಿ.ಎಂ. ಅಂತಿಮಗೊಳಿಸಲಿದ್ದಾರೆ ಎಂದರು.
ಪ್ರಸಕ್ತ ಆಯವ್ಯಯದಲ್ಲಿ ಘೋಷಿಸಲಾದ ವಚನ ಮಂಟಪ / ಮ್ಯೂಸಿಯಂ, ಎಲೆಕ್ಟ್ರಾನಿಕ್ ಕ್ಲಸ್ಟರ್, ಕೌಶಲ್ಯ ಕೇಂದ್ರ ಸ್ಥಾಪನೆಗೆ ಸಂಬಂಧಿಸಿದಂತೆ ಗುಲಬರ್ಗಾ ವಿ.ವಿ., ಕುಸನೂರ, ಹಡಗಿಲ್ ಹಾರುತಿ, ಕೆರೆ ಭೋಸಗಾ ಕೆರೆ ಬಳಿ ಇಂದು ಜಮೀನು ಪರಿಶೀಲನೆ ಮಾಡಿದ್ದು, ಅಧಿಕಾರಿಗಳೊಂದಿಗೆ ಚರ್ಚಿಸಿ ಶೀಘ್ರವೇ ಯೋಜನೆ ಅನುಷ್ಠಾನಕ್ಕೆ ನೀಲಿ ನಕ್ಷೆ ಸಿದ್ಧಪಡಿಸಲಾಗುವುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.ಕಳೆದ ಸರ್ಕಾರದ ಅವಧಿಯಲ್ಲಿ ನೆಮೆಗುದ್ದಿಗೆ ಬಿದ್ದಿದ್ದ ಪಂಡಿತ್ ದೀನ ದಯಾಳ ಸೌಹಾರ್ದ ವಸತಿ ನಿಲಯ ಬಹುಮಹಡಿ ಸಮುಚ್ಛಯ ಕಾಮಗಾರಿ ಗುಲಬರ್ಗಾ ವಿ.ವಿ. ಆವರಣದಲ್ ಸುಮಾರು 82.56 ಕೋಟಿ ರು. ವೆಚ್ಚದಲ್ಲಿ ಭರದಿಂದ ಸಾಗಿದೆ. ಇಲ್ಲಿ ತಲಾ 500 ಬಾಲಕ-ಬಾಲಕೀಯರ ಸಾಮರ್ಥ್ಯದ ಕಟ್ಟಡ ನಿರ್ಮಿಸಲಾಗುತ್ತಿದ್ದು, 27 ಕೋಟಿ ರೂ. ಖರ್ಚು ಮಾಡಲಾಗಿದೆ. ಚಂಪಾ ಕ್ರೀಡಾಂಗಣ ಸಮಗ್ರ ಅಭಿವೃದ್ಧಿಗೆ 37 ಕೋಟಿ ರು. ವ್ಯಯ ಮಾಡಲಾಗುತ್ತಿದೆ ಎಂದರು.
ಬೆಳೆ ವಿಮೆ ನೋಂದಣಿಗೆ ಮನವಿ: ಪ್ರಸಕ್ತ ಸಾಲಿನ ಪ್ರಧಾನಮಂತ್ರಿ ಫಸಲ್-ಕರ್ನಾಟಕ ರೈತ ಸುರಕ್ಷಾ ಬೆಳೆ ವಿಮೆ ಯೋಜನೆಯಡಿ ನೊಂದಣಿ ಮಾಡಿಕೊಳ್ಳಲು ಇದೇ ಜು.31 ಕೊನೆ ದಿನವಾಗಿದ್ದು, ಅಲ್ಪ ಪ್ರಮಾಣದ ಪ್ರೀಮಿಯಂ ಹಣ ಪಾವತಿಸಿ ನೊಂದಣಿ ಮಾಡಿಕೊಳ್ಳುವಂತೆ ಸಚಿವ ಪ್ರಿಯಾಂಕ್ ಖರ್ಗೆ ಅವರು ಜಿಲ್ಲೆಯ ರೈತ ಬಾಂಧವರಲ್ಲಿ ಮನವಿ ಮಾಡಿದರು. ಕಳೆದ ವರ್ಷ ಬೆಳೆ ವಿಮೆ ಯೋಜನೆಯಡಿ ದಾಖಲೆ ಪ್ರಮಾಣದಲ್ಲಿ ಜಿಲ್ಲೆಗೆ ಪರಿಹಾರ ಬಂದಿರುವುದನ್ನು ಇಲ್ಲಿ ಸ್ಮರಿಸಬಹುದು ಎಂದರು.
ಕರ್ನಾಟಕ ರೇಷ್ಮೆ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರಾದ ಕಲಬುರಗಿ ಉತ್ತರ ಶಾಸಕಿ ಕನೀಜ್ ಫಾತಿಮಾ, ಎಂಎಲ್ಸಿ ಜಗದೇವ ಗುತ್ತೇದಾರ, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜರ್ ಆಲಂ ಖಾನ್ ಇದ್ದರು.