ವರ್ಷಕ್ಕೆ 2 ಕೋಟಿ ಉದ್ಯೋಗ ಕೊಡ್ತೀವಿ ಅಂದ ಮೋದಿ ವಿಫಲ

KannadaprabhaNewsNetwork |  
Published : Jan 25, 2024, 02:01 AM IST
52 | Kannada Prabha

ಸಾರಾಂಶ

ಮಹಾತ್ಮಗಾಂಧಿ ಹೇಳಿದ ರಘು ಪತಿ ರಾಘವ ರಾಜಾರಾಮನನ್ನು ನಾವು ಪೂಜಿಸುತ್ತೇವೆ, ನಾವೂ ಭಜಿಸುತ್ತೇವೆ. ಜನದ್ರೋಹವನ್ನು ಬಚ್ಚಿಟ್ಟುಕೊಳ್ಳಲು ಶ್ರೀರಾಮನನ್ನು ಮುಂದಿಟ್ಟು ರಾಜಕೀಯ ಮಾಡುತ್ತಿರುವ ಬಿಜೆಪಿಯನ್ನು ಕ್ಷಮಿಸಬೇಡಿ. ಬೆಂಬಲಿಸಬೇಡಿ

- - ಇದನ್ನು ಮುಚ್ಚಿಕೊಳ್ಳಲು ಶ್ರೀರಾಮನನ್ನು ಮುಂದಿಡುತ್ತಿದ್ದಾರೆ- ಸಿಎಂ ಟೀಕೆ

- ಮಹಾತ್ಮಗಾಂಧಿ ಹೇಳಿದ ರಘು ಪತಿ ರಾಘವ ರಾಜಾರಾಮನನ್ನು ನಾವು ಪೂಜಿಸುತ್ತೇವೆ

- ನಮ್ಮ ಸರ್ಕಾರವೇ ಮಂಜೂರು ಮಾಡಿ, ನಾನೇ ಯೋಜನೆಗೆ ಶಂಕುಸ್ಥಾಪನೆ ಮಾಡಿ ಈಗ ಉದ್ಘಾಟನೆ ಮಾಡುತ್ತಿದ್ದೇನೆ:

-----------

ಕನ್ನಡಪ್ರಭ ವಾರ್ತೆ ಪಿರಿಯಾಪಟ್ಟಣ

ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೀವಿ ಎಂದಿದ್ದ ಪ್ರಧಾನಿ ಮೋದಿ ಅದರಲ್ಲಿ ವಿಫಲರಾದರು. ಹತ್ತು ವರ್ಷದಲ್ಲಿ 20 ಕೋಟಿ ಉದ್ಯೋಗ ಕೊಡಬೇಕಿತ್ತು. ಆಗಲಿಲ್ಲ. ಈ ವೈಫಲ್ಯ ಮುಚ್ಚಿಕೊಳ್ಳಲು ಶ್ರೀರಾಮನನ್ನು ಮುಂದಿಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಲೇವಡಿ ಮಾಡಿದರು.

ಪಿರಿಯಾಪಟ್ಟಣ ತಾಲೂಕಿನ 79 ಗ್ರಾಮಗಳ 150 ಕೆರೆಗಳಿಗೆ ಮತ್ತು ಕಟ್ಟೆಗಳಿಗೆ ಕಾವೇರಿ ನದಿಯ ನೀರು ತುಂಬಿಸುವ ಯೋಜನೆಯನ್ನು ಮುತ್ತಿನಮುಳುಸೋಗೆಯಲ್ಲಿ ಉದ್ಘಾಟಿಸಿ ಮಾತನಾಡಿದರು.

ಮಹಾತ್ಮಗಾಂಧಿ ಹೇಳಿದ ರಘು ಪತಿ ರಾಘವ ರಾಜಾರಾಮನನ್ನು ನಾವು ಪೂಜಿಸುತ್ತೇವೆ, ನಾವೂ ಭಜಿಸುತ್ತೇವೆ. ಜನದ್ರೋಹವನ್ನು ಬಚ್ಚಿಟ್ಟುಕೊಳ್ಳಲು ಶ್ರೀರಾಮನನ್ನು ಮುಂದಿಟ್ಟು ರಾಜಕೀಯ ಮಾಡುತ್ತಿರುವ ಬಿಜೆಪಿಯನ್ನು ಕ್ಷಮಿಸಬೇಡಿ. ಬೆಂಬಲಿಸಬೇಡಿ ಎಂದು ಅವರು ಹೇಳಿದರು.

ಪಿರಿಯಾಪಟ್ಟಣದ ಜನ, ಜಾನವಾರು, ಕೃಷಿಯ ಅನುಕೂಲಕ್ಕಾಗಿ ಮತ್ತು ಇಲ್ಲಿನ ಅಂತರ್ಜಲ ಹೆಚ್ಚಳಕ್ಕೆ ನಾನೇ ಶಂಕುಸ್ಥಾಪನೆ ಮಾಡಿ ನಾನೇ ಈಗ ಉದ್ಘಾಟಿಸಿದ್ದೇನೆ. 79 ಹಳ್ಳಿ 93 ಸಾವಿರ ಜನರಿಗೆ ಇದರಿಂದ ಲಾಭ ಆಗುತ್ತಿದೆ. ಇದು ನಮ್ಮ ಸರ್ಕಾರ ಪಿರಿಯಾಪಟ್ಟಣದಲ್ಲಿ ನಿರ್ವಹಿಸಿದ ಜವಾಬ್ದಾರಿ ಎಂದರು. ದೇವೇಗೌಡರು ಈಗ ಪ್ರದಾನಿ ಮೋದಿ ಮತ್ತು ಬಿಜೆಪಿ ಜತೆ ತಮ್ಮ ಅಸ್ತಿತ್ವಕ್ಕಾಗಿ ಹೊಂದಾಣಿಕೆ ಮಾಡಿಕೊಂಡಿದ್ದಾರೆ. ಪ್ರಧಾನಿಗೆ ಹೇಳಿ ರಾಜ್ಯಕ್ಕೆ ಬರಬೇಕಾದ ರಾಜ್ಯದ ಪಾಲಿನ ಬರ ಪರಿಹಾರವನ್ನು ದೊರಕಿಸಿ ಕೊಡಲಿ. ಜಾತ್ಯತೀತ ಎಂದು ಪಕ್ಷದ ಹೆಸರಿಟ್ಟುಕೊಂಡು ಈಗ ಬಿಜೆಪಿ ಜತೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ ಎಂದು ಅವರು ಲೇವಡಿಯಾಡಿದರು.

ರಾಜ್ಯದ ಒಂದು ಕೋಟಿ 30 ಲಕ್ಷ ಕುಟುಂಬಗಳ ನಾಲ್ಕೂವರೆ ಕೋಟಿ ಜನರಿಗೆ ಪ್ರತೀ ತಿಂಗಳು 4 ರಿಂದ 6 ಸಾವಿರ ರೂಪಾಯಿ ಕೈ ಸೇರುವ ರೀತಿಯಲ್ಲಿ ಗ್ಯಾರಂಟಿ ಯೋಜನೆಗಳನ್ನು ರೂಪಿಸಿದ್ದೇವೆ. ಇಲ್ಲಿಯವರೆಗೂ 139 ಕೋಟಿ ಮಹಿಳೆಯರು ಉಚಿತವಾಗಿ ಬಸ್ ಗಳಲ್ಲಿ ಪ್ರಯಾಣ ಮಾಡಿದ್ದಾರೆ ಎಂದರು.

ರೇಷ್ಮೆ ಮತ್ತು ಪಶುಸಂಗೋಪನಾ ಸಚಿವ ಕೆ. ವೆಂಕಟೇಶ್ ಅಧ್ಯಕ್ಷತೆ ವಹಿಸಿದ್ದರು. ಜಲಸಂಪನ್ಮೂಲ ಸಚಿವ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ. ಮಹದೇವಪ್ಪ, ಸಣ್ಣ ನೀರಾವರಿ ಸಚಿವ ಎನ್.ಎಸ್. ಬೋಸರಾಜು, ಶಾಸಕರಾದ ಮರಿತಿಬ್ಬೇಗೌಡ, ಡಿ. ರವಿಶಂಕರ್, ಟಿ.ಎಸ್. ಶ್ರೀವತ್ಸ, ಸಿ. ಅನಿಲ್ ಕುಮಾರ್, ಕೆ. ಹರೀಶ್ ಗೌಡ, ಮಂಥರ್ ಗೌಡ, ಡಾ.ಡಿ. ತಿಮ್ಮಯ್ಯ, ಯುವ ಮುಖಂಡ ನಿತಿನ್ ವೆಂಕಟೇಶ್ ಸೇರಿ ಹಲವರು ಇದ್ದರು.

-- ಬಾಕ್ಸ್‌ 1---- ಕೆರೆಗಳಿಗೆ ಮರುಹುಟ್ಟು--

ನಮ್ಮ ಸರ್ಕಾರದ ಒಂದು ಯೋಜನೆ ಕೋಲಾರ, ಚಿಕ್ಕಬಳ್ಳಾಪುರದ ಕೆರೆಗಳಿಗೆ ಮರುಹುಟ್ಟು ನೀಡಿದೆ. ಇದೇ ರೀತಿ ಪಿರಿಯಾಪಟ್ಟಣದ ಕೆರೆಗಳಿಗೆ ಮರು ಜೀವ ನೀಡಿ ಇಲ್ಲಿನ ಅಂತರ್ಜಲ ವೃದ್ಧಿಗೆ ಈ ಯೋಜನೆ ಜೀವದಾನವಾಗಲಿದೆ. ನುಡಿದಂತೆ ನಡೆಯೋದು, ಕೊಟ್ಟ ಮಾತಿನಂತೆ ನಡೆದುಕೊಳ್ಳುವುದು ನಮ್ಮ ಸರ್ಕಾರದ, ಕಾಂಗ್ರೆಸ್ ಸರ್ಕಾರದ ಸಂಸ್ಕಾರ. ಬಿಜೆಪಿ ಕೊಟ್ಟ ಮಾತುಗಳಲ್ಲಿ ಯಾವುದನ್ನೂ ಈಡೇರಿಸಿಲ್ಲ. ರಾಜ್ಯದಲ್ಲಿ ತೀವ್ರ ಬರಗಾಲ ಇದ್ದರೂ ಜನ ಜಾನವಾರಿಗೆ, ಕುಡಿಯುವ ನೀರಿಗೆ ತೊಂದರೆ ಆಗದಂತೆ, ಜನರು ಗುಳೆ ಹೋಗದಂತೆ ತಡೆದಿದ್ದೇವೆ. ಇದು ನಮ್ಮ ಸಾಧನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

-- ಬಾಕ್ಸ್‌2--

ಕಳೆದ ವರ್ಷ ಸೆಪ್ಟೆಂಬರ್ ನಿಂದ ಇವತ್ತಿನವರೆಗೂ ನಾನು ರಾಜ್ಯದ ಪಾಲಿನ ಬರ ಪರಿಹಾರದ ಹಣವನ್ನು ಕೊಡಿ ಎಂದು ಪತ್ರ ಬರೆಯುತ್ತಿದ್ದೇವೆ. ನಾವೇ ಖುದ್ದಾಗಿ ಹೋಗಿ ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಅವರನ್ನು ಭೇಟಿ ಮಾಡಿದರೂ ಕೇಂದ್ರ ಸರ್ಕಾರ ಒಂದೇ ಒಂದು ರೂಪಾಯಿಯನ್ನು ರಾಜ್ಯಕ್ಕೆ ನೀಡಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದ ಜನ ಪ್ರತಾಪ್ ಸಿಂಹ ಸೇರಿ 25 ಮಂದಿ ಸಂಸದರನ್ನು ಗೆಲ್ಲಿಸಿದರು. ಒಬ್ಬೇ ಒಬ್ಬ ಬಿಜೆಪಿ ಸಂಸದರು ರಾಜ್ಯಕ್ಕೆ ಒಂದೇ ಒಂದು ರೂಪಾಯಿ ಬರ ಪರಿಹಾರ ತರಲಿಲ್ಲ ಎಂದು ವಿವರಿಸಿದ ಮುಖ್ಯಮಂತ್ರಿಗಳು, ಮಿಸ್ಟರ್ ಪ್ರತಾಪ್ ಸಿಂಹ ಏಕೆ ಒಂದೇ ಒಂದು ರೂಪಾಯಿ ತರಲಿಲ್ಲ. ಇಷ್ಟು ಎಂಪಿಗಳಿದ್ದು ನಾಚಿಕೆ ಆಗುವುದಿಲ್ಲವೇ ನಿಮಗೆ? " ಎಂದು ಖಾರವಾಗಿ ಪ್ರಶ್ನಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಮಸ್ಯೆ ಬಗೆಹರಿದ್ರೆ 6 ತಿಂಗಳಲ್ಲಿ 1 ಲಕ್ಷ ನೇಮಕಾತಿ : ಸಾರಿಗೆ ಸಚಿವ
ಸರ್ಕಾರದಿಂದ ಮಹತ್ವದ ನಿರ್ಧಾರ : ವಿಪತ್ತು ವೇಳೆ ಇಡೀ ಊರಿನ ರೈತರಿಗೆ ಪರಿಹಾರ