ಸಿಎಂ ತೇಜೋವಧೆ, ಸರ್ಕಾರ ಅಸ್ಥಿರತೆ ಕುತಂತ್ರ ಖಂಡನೀಯ

KannadaprabhaNewsNetwork | Published : Aug 6, 2024 12:38 AM

ಸಾರಾಂಶ

ಶೋಷಿತ ಸಮುದಾಯಗಳ ನಾಯಕ, ಮುಖ್ಯಮಂತ್ರಿ ಸಿದ್ದರಾಮಯ್ಯ ತೇಜೋವಧೆ ಮಾಡಿ, ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ಮುಂದಾದ ರಾಜ್ಯಪಾಲರ ನಡೆಯನ್ನು ಖಂಡಿಸಿ ನಗರದಲ್ಲಿ ಸೋಮವಾರ ಜಿಲ್ಲಾ ಶೋಷಿತ ಸಮುದಾಯಗಳ ಒಕ್ಕೂಟದ ನೇತೃತ್ವದಲ್ಲಿ ದಾವಣಗೆರೆಯಲ್ಲಿ ಪ್ರತಿಭಟನೆ ನಡೆಸಲಾಯಿತು.

- ರಾಜ್ಯಪಾಲರ ನಡೆಗೆ ವಿರುದ್ಧ ಜಿಲ್ಲಾ ಶೋಷಿತ ಸಮುದಾಯಗಳ ಒಕ್ಕೂಟ ಆಕ್ರೋಶ । ಮುಖೇನ ಸರ್ಕಾರಕ್ಕೆ ಮನವಿ

- - - ಕನ್ನಡಪ್ರಭ ವಾರ್ತೆ ದಾವಣಗೆರೆ

ಶೋಷಿತ ಸಮುದಾಯಗಳ ನಾಯಕ, ಮುಖ್ಯಮಂತ್ರಿ ಸಿದ್ದರಾಮಯ್ಯ ತೇಜೋವಧೆ ಮಾಡಿ, ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ಮುಂದಾದ ರಾಜ್ಯಪಾಲರ ನಡೆಯನ್ನು ಖಂಡಿಸಿ ನಗರದಲ್ಲಿ ಸೋಮವಾರ ಜಿಲ್ಲಾ ಶೋಷಿತ ಸಮುದಾಯಗಳ ಒಕ್ಕೂಟದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಬಾಬಾ ಸಾಹೇಬರ ಪುತ್ಥಳಿಗೆ ಒಕ್ಕೂಟದ ಮುಖಂಡರು ಮಾಲಾರ್ಪಣೆ ಮಾಡುವುದರೊಂದಿಗೆ ರಾಜ್ಯಪಾಲರ ವಿರುದ್ಧ ಘೋಷಣೆ ಕೂಗಿದರು. ಬಳಿಕ ಉಪವಿಭಾಗಾಧಿಕಾರಿ ಕಚೇವರೆಗೆ ಸಾಗಿದರು. ಬಳಿಕ ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಮುಖಂಡರು ಮಾತನಾಡಿ, ರಾಜ್ಯದಲ್ಲಿ ಕೋಮುವಾದಿಗಳು, ಮತೀಯವಾದಿಗಳು, ಪಟ್ಟಭದ್ರ ಹಿತಾಸಕ್ತಿಗಳು ಅಧಿಕಾರ ದಾಹ ಮತ್ತು ಕುರ್ಚಿಯ ವ್ಯಾಮೋಹದಿಂದ ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ಷಡ್ಯಂತ್ರ ನಡೆಸಿದ್ದಾರೆ. ಜನಪರ, ಅಭಿವೃದ್ಧಿ ಪರ ಆಡಳಿತ ನೀಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ-ಜೆಡಿಎಸ್ ನಾಯಕರು ಒಂದಾಗಿ ಹೋರಾಟಕ್ಕೆ ಮುಂದಾಗಿದ್ದಾರೆ ಎಂದರು.

ಮುಡಾ ಹೆಸರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ದೊಡ್ಡ ಷಡ್ಯಂತ್ರ ರೂಪಿಸಲಾಗಿದೆ. 15 ಸಲ ವಿತ್ತ ಸಚಿವರಾಗಿ ಬಜೆಟ್ ಮಂಡಿಸಿದ, ವಿಪಕ್ಷ ನಾಯಕ, ಉಪ ಮುಖ್ಯಮಂತ್ರಿಯಾಗಿ, 2ನೇ ಅವಧಿಗೆ ಮುಖ್ಯಮಂತ್ರಿಯಾಗಿ ಸ್ವಚ್ಛ ಆಡಳಿತ ನೀಡುತ್ತಿರುವ ಸಿದ್ದರಾಮಯ್ಯ ರಾಜಕೀಯ ಜೀವನಕ್ಕೆ ಕಪ್ಪು ಚುಕ್ಕೆ। ತರಿವವ ಹುನ್ನಾರ ನಡೆಸಲಾಗಿದೆ. ಬಿಜೆಪಿ-ಜೆಡಿಎಸ್‌ ರಾಜ್ಯ ನಾಯಕರ ಕುತಂತ್ರಕ್ಕೆ ಈಗ ಬಿಜೆಪಿ ರಾಷ್ಟ್ರೀಯ ನಾಯಕರೂ ಕುಮ್ಮಕ್ಕು ನೀಡುತ್ತಿದ್ದಾರೆ. ರಾಜ್ಯಪಾಲರ ಮೂಲಕ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುವಂತಹ ಪಿತೂರಿ ನಡೆದಿದೆ ಎಂದು ಟೀಕಿಸಿದರು.

ಜೆಡಿಎಸ್ ನಾಯಕ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಪಕ್ಷ ನಾಯಕ ಆರ್.ಅಶೋಕ ಸೇರಿದಂತೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಸೇರಿದಂತೆ ಅನೇಕರು ಸಿದ್ದರಾಮಯ್ಯ ವಿರುದ್ಧ ಸಂಚು ಮಾಡಿದ್ದಾರೆ. ಮುಖ್ಯಮಂತ್ರಿ ಸ್ಥಾನದಿಂದ ಸಿದ್ದರಾಮಯ್ಯಗೆ ಇಳಿಸಿ, ಹಿಂದುಳಿದ ವರ್ಗಗಳ ನಾಯಕತ್ವವನ್ನೇ ಕೊನೆಗಾಣಿಸಬೇಕೆಂಬ ದೊಡ್ಡ ಷಡ್ಯಂತ್ರ ಮಾಡಿದ್ದಾರೆ ಎಂದು ಆರೋಪಿಸಿದರು.

ಒಕ್ಕೂಟದ ಮುಖಂಡರಾದ ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ, ವಿಪ ಸದಸ್ಯ ಕೆ.ಅಬ್ದುಲ್ ಜಬ್ಬಾರ್, ಕುರುಬ ಸಮಾಜದ ಮುಖಂಡರಾದ ಹರಿಹರ ಮಾಜಿ ಶಾಸಕ ಎಸ್.ರಾಮಪ್ಪ, ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಯದೇವ ನಾಯ್ಕ, ಜಿಪಂ ಮಾಜಿ ಅಧ್ಯಕ್ಷ ಎಚ್.ಬಿ.ಮಂಜಪ್ಪ, ಮಾಜಿ ಸದಸ್ಯ ಹದಡಿ ಜಿ.ಸಿ.ನಿಂಗಪ್ಪ, ಎಪಿಎಂಸಿ ಮಾಜಿ ಅಧ್ಯಕ್ಷ ಮುದೇಗೌಡ್ರ ಗಿರೀಶ, ಹಿರಿಯ ವಕೀಲ ಲೋಕಿಕೆರೆ ಸಿದ್ದಪ್ಪ, ಛಲವಾದಿ ಮಹಾಸಭಾ ಜಿಲ್ಲಾಧ್ಯಕ್ಷನಿತ್ತ ಎಸ್‌ಪಿ ಎನ್.ರುದ್ರಮುನಿ, ನೇಕಾರ ಒಕ್ಕೂಟದ ಆರ್.ಎಚ್‌.ನಾಗಭೂಷಣ್, ನಾಯಕ ಸಮಾಜದ ಕೆ.ಪಿ.ಪಾಲಯ್ಯ, ಎಸ್.ಮಲ್ಲಿಕಾರ್ಜುನ, ಹಿರಿಯ ವಕೀಲ ಅನೀಸ್ ಪಾಷ ಇತರರು ಇದ್ದರು.

- - - ಕೋಟ್‌ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ನೀಡಿರುವ ಪ್ರಾಸಿಕ್ಯೂಷನನ್ನು ರಾಜ್ಯಪಾಲರು ತಕ್ಷಣ ಹಿಂಪಡೆಯಬೇಕು. ಈ ಬಗ್ಗೆ ಉದಾಸೀನ ಮಾಡಿದರೆ ಶೀಘ್ರವೇ ರಾಜ್ಯವ್ಯಾಪಿ ಹಿಂದುಳಿದ ಶೋಷಿತ ವರ್ಗಗಳ ಜನರು ಬೆಂಗಳೂರಿನಲ್ಲಿ ರಾಜಭವನ ಚಲೋ ಹೋರಾಟ ನಡೆಸಬೇಕಾಗುತ್ತದೆ

- ಜಿಲ್ಲಾ ಶೋಷಿತ ಸಮುದಾಯಗಳ ಒಕ್ಕೂಟ

- - - -5ಕೆಡಿವಿಜಿ1:

ಶೋಷಿತ ಸಮುದಾಯಗಳ ನಾಯಕ, ಸಿಎಂ ಸಿದ್ದರಾಮಯ್ಯ ತೇಜೋವಧೆ ಮಾಡಿ, ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ಮುಂದಾದ ರಾಜ್ಯಪಾಲರ ನಡೆ ಖಂಡಿಸಿ ದಾವಣ ಗೆರೆಯಲ್ಲಿ ಸೋಮವಾರ ಜಿಲ್ಲಾ ಶೋಷಿತ ಸಮುದಾಯಗಳ ಒಕ್ಕೂಟದಿಂದ ಅಪರ ಡಿಸಿ ಪಿ.ಎನ್.ಲೋಕೇಶ ಮುಖಾಂತರ ಸರ್ಕಾರಕ್ಕೆ ಮನವಿ ಅರ್ಪಿಸಲಾಯಿತು. -ಕೆಡಿವಿಜಿ2, 3: ಶೋಷಿತ ಸಮುದಾಯಗಳ ನಾಯಕ, ಸಿಎಂ ಸಿದ್ದರಾಮಯ್ಯ ತೇಜೋವಧೆ ಮಾಡಿ, ರಾಜ್ಯ ಸರ್ಕಾರ ಅಸ್ಥಿರಗೊಳಿಸಲು ಮುಂದಾದ ರಾಜ್ಯಪಾಲರ ನಡೆ ಖಂಡಿಸಿ ದಾವಣಗೆರೆಯಲ್ಲಿ ಸೋಮವಾರ ಜಿಲ್ಲಾ ಶೋಷಿತ ಸಮುದಾಯಗಳ ಒಕ್ಕೂಟದಿಂದ ಪ್ರತಿಭಟಿಸಲಾಯಿತು.

Share this article