ಕನ್ನಡಪ್ರಭ ವಾರ್ತೆ ಬೆಂಗಳೂರು
ಪ್ರಸ್ತುತ ಸಂಪುಟ ವಿಸ್ತರಣೆ ಕುರಿತು ಉಂಟಾಗಿರುವ ಬಂಡಾಯ ಶಮನಗೊಳಿಸಲು ಡಿ.ಕೆ.ಶಿವಕುಮಾರ್ ಅವರು ಮೊದಲನೆಯದಾಗಿ ಸಂಪುಟದಲ್ಲಿ ಕೆಲ ಬದಲಾವಣೆ ಮಾಡುವ ಬಗ್ಗೆ ಸೋಮವಾರ ವರಿಷ್ಠರೊಂದಿಗೆ ಚರ್ಚಿಸಲಿದ್ದಾರೆ.
ಎರಡನೇಯದಾಗಿ, ನೂತನ ಸಚಿವರ ಖಾತೆ ಹಂಚಿಕೆ ಬಗ್ಗೆ ಒಪ್ಪಿಗೆ ಪಡೆಯಲಿದ್ದಾರೆ. ಇದರ ಜತೆಗೆ 3ನೇ ವಿಷಯವಾಗಿ, ‘ಜೂ.3 ರಂದು ಪ್ರಮಾಣವಚನ ಸ್ವೀಕರಿಸಿ ವಿವಿಧ ಇಲಾಖೆಗಳ ಹೊಣೆಗಾರಿಕೆ ವಹಿಸಿಕೊಂಡ 5-6 ಮಂದಿ ಸಚಿವರ ಇಲಾಖೆಗಳನ್ನೂ ಅದಲು ಬದಲು ಮಾಡಲು ಚರ್ಚೆ ನಡೆಸಲಿದ್ದಾರೆ’ ಎಂದು ಮೂಲಗಳು ತಿಳಿಸಿವೆ.ಕೆಲ ಹಿರಿಯ ಸಚಿವರಿಗೆ ತಮಗೆ ವಹಿಸಿರುವ ಖಾತೆಗಳ ಬಗ್ಗೆ ಅಸಮಾಧಾನ ಮುಂದುವರೆದಿದೆ. ಹೀಗಾಗಿ ಜಲಸಂಪನ್ಮೂಲ, ಲೋಕೋಪಯೋಗಿ, ಮುಜರಾಯಿ, ಆರೋಗ್ಯ, ಕ್ರೀಡೆ ಮತ್ತು ಯುವಜನ ಸೇವೆ ಸೇರಿದಂತೆ 5-6 ಖಾತೆಗಳು ಬದಲಾಗಲಿವೆ ಎಂದು ಹೇಳಲಾಗಿದೆ.
ದೆಹಲಿಗೆ ತೆರಳುವ ಬಗ್ಗೆ ಪ್ರತಿಕ್ರಿಯಿಸಿರುವ ಶಿವಕುಮಾರ್ ಅವರು, ‘ದೆಹಲಿಗೆ ಹೋಗಲೇ ಬೇಕಲ್ಲವೆ?, ನಿಮಗೆ ಮಾಹಿತಿ ನೀಡಿಯೇ ಹೋಗುತ್ತೇವೆ. ಭೇಟಿಯ ಸಮಯ ನಿಗದಿಪಡಿಸಿಕೊಂಡು ದೆಹಲಿಗೆ ಹೋಗಲಿದ್ದೇನೆ’ ಎಂದು ದೆಹಲಿಗೆ ಹೋಗುವ ಬಗ್ಗೆ ಸ್ಪಷ್ಟತೆ ನೀಡಿದ್ದಾರೆ.
ಮೂಲಗಳ ಪ್ರಕಾರ ಭಾನುವಾರ ಸಂಜೆ ಡಿ.ಕೆ.ಶಿವಕುಮಾರ್ ಅವರು ದೆಹಲಿಗೆ ತೆರಳಲಿದ್ದು, ಸೋಮವಾರದ ವೇಳೆಗೆ ವರಿಷ್ಠರೊಂದಿಗೆ ಚರ್ಚಿಸಿ ಸಂಪುಟ ಸದಸ್ಯರಲ್ಲಿನ ಕೆಲ ಬದಲಾವಣೆ ಹಾಗೂ ಖಾತೆ ಹಂಚಿಕೆ ಬಗ್ಗೆ ಸ್ಪಷ್ಟತೆ ಪಡೆಯಲಿದ್ದಾರೆ ಎಂದು ತಿಳಿದುಬಂದಿದೆ.
ಈ ಸಮಸ್ಯೆ ಬಗೆಹರಿಸಲು ಕೆಲ ಆಯ್ಕೆಗಳನ್ನು ಸಿದ್ಧಪಡಿಸಿಕೊಂಡಿರುವ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ವರಿಷ್ಠರೊಂದಿಗೆ ಚರ್ಚಿಸಿ ಅನುಮತಿ ಪಡೆಯಲಿದ್ದಾರೆ ಎಂದು ತಿಳಿದುಬಂದಿದೆ.
ಮಹಿಳಾ ಕೋಟಾ ಭರ್ತಿ ಮಾಡುವ ಬಗ್ಗೆ ವರಿಷ್ಠರ ಮಟ್ಟದಲ್ಲಿ ತೀವ್ರ ಚರ್ಚೆ ನಡೆಯಲಿದೆ. ಬಳ್ಳಾರಿ ಮೂಲದ ಸಚಿವರ ರಾಜೀನಾಮೆ ಕೊಡಿಸಿ ಬಳ್ಳಾರಿ ಮೂಲದ ಸಂಸದರ ಪತ್ನಿ ಹಾಗೂ ಶಾಸಕರಾಗಿರುವ ಮಹಿಳೆಗೆ ಅವಕಾಶ ನೀಡುವ ಬಗ್ಗೆ ಚರ್ಚೆ ನಡೆಯುತ್ತಿದೆ. ಮತ್ತೊಂದೆಡೆ ಮಹಿಳಾ ಸಚಿವ ಸ್ಥಾನಕ್ಕೆ ಪರಿಷತ್ನಿಂದಲೂ ಪೈಪೋಟಿಯಿದ್ದು, ವಿಧಾನಸಭೆಯಿಂದ ಆಯ್ಕೆಯಾದವರು ಮಹಿಳಾ ಸಚಿವರಾಗುತ್ತಾರೋ ಅಥವಾ ವಿಧಾನ ಪರಿಷತ್ನಿಂದ ಆಗುತ್ತಾರೋ ಎಂಬುದು ಸಹ ಮುಖ್ಯಮಂತ್ರಿಗಳ ದೆಹಲಿ ಭೇಟಿ ವೇಳೆ ತೀರ್ಮಾನವಾಗಲಿದೆ.