ಜಾಲಪ್ಪ ಜನ್ಮ ಶತಮಾನೋತ್ಸವದಲ್ಲಿ ಸಿಎಂ ಭಾಗಿ: ರಾಜೇಂದ್ರ

KannadaprabhaNewsNetwork |  
Published : Oct 16, 2025, 02:00 AM IST
ದೊಡ್ಡಬಳ್ಳಾಪುರದ ಆರ್‌ಎಲ್‌ಜೆಐಟಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ದೇವರಾಜ ಅರಸ್‌ ಶಿಕ್ಷಣ ಸಂಸ್ಥೆ ಉಪಾಧ್ಯಕ್ಷ ಜೆ.ರಾಜೇಂದ್ರ ಮಾತನಾಡಿದರು. | Kannada Prabha

ಸಾರಾಂಶ

ದೊಡ್ಡಬಳ್ಳಾಪುರ: ನಾಡಿನ ಹಿರಿಯ ರಾಜಕೀಯ ಮುತ್ಸದ್ದಿ ಹಾಗೂ ಮಾಜಿ ಕೇಂದ್ರ ಸಚಿವ ಆರ್.ಎಲ್.ಜಾಲಪ್ಪನವರ ಜನ್ಮ ಶತಮಾನೋತ್ಸವ ಅ.19ರಂದು ಆರ್‌ಎಲ್‌ಜೆಐಟಿ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ ಎಂದು ಶ್ರೀ ದೇವರಾಜ ಅರಸು ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಜೆ.ರಾಜೇಂದ್ರ ತಿಳಿಸಿದರು.

ದೊಡ್ಡಬಳ್ಳಾಪುರ: ನಾಡಿನ ಹಿರಿಯ ರಾಜಕೀಯ ಮುತ್ಸದ್ದಿ ಹಾಗೂ ಮಾಜಿ ಕೇಂದ್ರ ಸಚಿವ ಆರ್.ಎಲ್.ಜಾಲಪ್ಪನವರ ಜನ್ಮ ಶತಮಾನೋತ್ಸವ ಅ.19ರಂದು ಆರ್‌ಎಲ್‌ಜೆಐಟಿ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ ಎಂದು ಶ್ರೀ ದೇವರಾಜ ಅರಸು ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಜೆ.ರಾಜೇಂದ್ರ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇದೇ ವೇಳೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಸಂಸ್ಥೆಯ ಆವರಣದಲ್ಲಿ ನಿರ್ಮಿಸಲಾಗಿರುವ ಜಾಲಪ್ಪ ಅಕಾಡೆಮಿಯ ನೂತನ ಕಟ್ಟಡವನ್ನೂ ಅವರು ಉದ್ಘಾಟಿಸಲಿದ್ದಾರೆ. ಪ್ರೊ.ರವಿಕಿರಣ್‌ ಕೆ.ಆರ್ ಅವರು ಬರೆದಿರುವ "ನೇರ ನಿಷ್ಠುರ ನಡೆಯ ಹೃದಯವಂತ ಆರ್.ಎಲ್.ಜಾಲಪ್ಪ ಜೀವನ ಪಥ " ಪುಸ್ತಕವನ್ನು ಮುಖ್ಯಮಂತ್ರಿಗಳು ಲೋಕಾರ್ಪಣೆ ಮಾಡಲಿದ್ದಾರೆ ಎಂದು ವಿವರಿಸಿದರು.

ವಿವಿಧ ಕಟ್ಟಡಗಳ ಉದ್ಘಾಟನೆ, ಶಿಲಾನ್ಯಾಸ:

ಜಾಲಪ್ಪ ಜನ್ಮ ಶತಮಾನೋತ್ಸವ ಭವನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಶಿಲಾನ್ಯಾಸ ನೆರವೇರಿಸಲಿದ್ದು, ಶ್ರೀ ದೇವರಾಜ ಅರಸ್‌ ಅಂತಾರಾಷ್ಟ್ರೀಯ ವಸತಿ ಶಾಲೆ ನೂತನ ಕಟ್ಟಡ ನಿರ್ಮಾಣಕ್ಕೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಶಂಕುಸ್ಥಾಪನೆ ಮಾಡಲಿದ್ದಾರೆ.

ವೆಂಕಟಾಚಲಯ್ಯಗೆ ಪುರಸ್ಕಾರ:

ಮಾಜಿ ಶಾಸಕ ಆರ್.ಜಿ.ವೆಂಕಟಾಚಲಯ್ಯ ಅವರಿಗೆ ಆರ್.ಎಲ್.ಜಾಲಪ್ಪ ಜನ್ಮಶತಮಾನೋತ್ಸವ ಪುರಸ್ಕಾರ ನೀಡಲಾಗುತ್ತಿದೆ. ಜೊತೆಗೆ ಸುಮಾರು 30ಕ್ಕೂ ಹೆಚ್ಚು ಹಿರಿಯ ಗಣ್ಯರಿಗೆ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ತಿಳಿಸಿದರು.

ಪುಸ್ತಕದ ಕನಸು ನನಸು:

ಜಾಲಪ್ಪನವರು ಬದುಕಿದ್ದ ಕಾಲದಲ್ಲೇ ಅವರ ಕುರಿತು ಪುಸ್ತಕವೊಂದನ್ನು ಬರೆಸಬೇಕೆಂಬ ಆಕಾಂಕ್ಷೆ ಇತ್ತು. ಆದರೆ ಅವರು ಒಪ್ಪಿರಲಿಲ್ಲ. ಮಾಜಿ ಪ್ರಧಾನಿ ದೇವೇಗೌಡರು ಒಮ್ಮೆ ಮನೆಗೆ ಬಂದಾಗಲೂ ಈ ಬಗ್ಗೆ ಹೇಳಿದ್ದರು. ಜಾಲಪ್ಪ ಅವರ ನಿಧನದ ಬಳಿಕ, ಆರಂಭಗೊಂಡ ಪ್ರಕ್ರಿಯೆ ಇದೀಗ ಕೈಗೂಡಿದ್ದು, ಅವರ ಜನ್ಮ ಶತಮಾನೋತ್ಸವ ಸಂದರ್ಭದಲ್ಲೇ ಜೀವನ ಗಾಥೆ ಬಿಡುಗಡೆಗೊಳ್ಳುತ್ತಿದೆ. ಪುಸ್ತಕಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುನ್ನಡಿ ಬರೆದಿರುವುದು ವಿಶೇಷ ಎಂದು ತಿಳಿಸಿದರು.

ಕಾಲೇಜು ರಜತ ಮಹೋತ್ಸವ:

ಅ.17 ಮತ್ತು 18ರಂದು ಆರ್.ಎಲ್.ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯ ಹಾಗೂ ಕೈಗಾರಿಕಾ ತರಬೇತಿ ಸಂಸ್ಥೆಗಳ ಬೆಳ್ಳಿ ಹಬ್ಬ ನಡೆಯಲಿದ್ದು, ಶುಕ್ರವಾರ 17ರಂದು ನಡೆಯುವ ಘಟಿಕೋತ್ಸವದಲ್ಲಿ ವಿಜ್ಞಾನಿ, ಐಐಎಸ್ಸಿ ನಿವೃತ್ತ ಪ್ರಾಧ್ಯಾಪಕ ಪ್ರೊ.ಕೆ.ಪಿ.ಜೆ ರೆಡ್ಡಿ ಪಾಲ್ಗೊಳ್ಳಲಿದ್ದಾರೆ.

18ರಂದು ಶನಿವಾರ ನಡೆಯುವ ಬೆಳ್ಳಿ ಹಬ್ಬದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಉಪಕುಲಪತಿ ಡಾ.ಎಸ್‌.ವಿದ್ಯಾಶಂಕರ್‌, ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಮತ್ತಿತರರು ಭಾಗವಹಿಸುವರು. ಅಂದು ಸಂಜೆ ಪ್ರಸಿದ್ದ ಗಾಯಕಿ ಅನುರಾಧಾ ಭಟ್‌ ಹಾಗೂ ಗಾಯಕ ಕಂಬದ ರಂಗಯ್ಯ ತಂಡದಿಂದ ಸಾಂಸ್ಕೃತಿಕ ಸಂಜೆ ನಡೆಯಲಿದೆ. ಸಂಸ್ಥೆಯ ಅಧ್ಯಕ್ಷ ಜಿ.ಎಚ್.ನಾಗರಾಜ ಮತ್ತು ಕಾರ್ಯದರ್ಶಿ ಕೆ.ಜಿ.ಹನುಮಂತರಾಜು ಅವರ ಮಾರ್ಗದರ್ಶನದಲ್ಲಿ ಸಿದ್ದತೆಗಳು ನಡೆದಿವೆ ಎಂದು ತಿಳಿಸಿದರು.

ಕಾಲೇಜಿನ ಪ್ರಾಂಶುಪಾಲ ಡಾ.ಪಿ.ವಿಜಯಕಾರ್ತಿಕ್‌, ಲಯನ್ಸ್ ಕ್ಲಬ್‌ ಅಧ್ಯಕ್ಷ ಪ್ರೊ.ಕೆ.ಆರ್.ರವಿಕಿರಣ್, ಮಾನವ ಸಂಪನ್ಮೂಲ ನಿರ್ದೇಶಕ ಬಾಬು ರೆಡ್ಡಿ, ಉಪಪ್ರಾಂಶುಪಾಲ ಡಾ.ಶಿವಪ್ರಸಾದ್‌, ಡೀನ್ ಡಾ.ಶ್ರೀನಿವಾಸರೆಡ್ಡಿ ಮತ್ತಿತರರು ಉಪಸ್ಥಿತರಿದ್ದರು.

ಫೋಟೋ-

15ಕೆಡಿಬಿಪಿ2- ದೊಡ್ಡಬಳ್ಳಾಪುರದ ಆರ್‌ಎಲ್‌ಜೆಐಟಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ದೇವರಾಜ ಅರಸ್‌ ಶಿಕ್ಷಣ ಸಂಸ್ಥೆ ಉಪಾಧ್ಯಕ್ಷ ಜೆ.ರಾಜೇಂದ್ರ ಮಾತನಾಡಿದರು.

PREV

Recommended Stories

ಆರೆಸ್ಸೆಸ್‌ ವಿಚಾರಕ್ಕೆ ಪ್ರಿಯಾಂಕ್‌ಗೆ ಬೆದರಿಕೆ ಕರೆ ಮಾಡಿದ್ದವನ ಬಂಧನ
2,350 ಕೋಟಿ ವೆಚ್ಚದಲ್ಲಿ ಕ್ರಿಕೆಟ್‌ ಸ್ಟೇಡಿಯಂ ನಿರ್ಮಾಣಕ್ಕೆ ಒಪ್ಪಿಗೆ