ಪಿಂಚಣಿ ಮರುಜಾರಿಗೆ ಸಿಎಂಗೆ ಒತ್ತಾಯ: ತಮ್ಮಯ್ಯ

KannadaprabhaNewsNetwork |  
Published : Feb 12, 2026, 01:15 AM IST
ಎರಡು ದಿನಗಳ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ | Kannada Prabha

ಸಾರಾಂಶ

ಚಿಕ್ಕಮಗಳೂರುರಾಜ್ಯದ ಸರ್ಕಾರಿ ನೌಕರರಿಗೆ ಹಳೇ ಪಿಂಚಣಿ ಯೋಜನೆಯ‌ನ್ನು ಮರು ಜಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಒತ್ತಾಯಿಸಲಾಗುವುದು ಎಂದು ಚಿಕ್ಕಮಗಳೂರು ಶಾಸಕ ಎಚ್.ಡಿ.ತಮ್ಮಯ್ಯ ಭರವಸೆ ನೀಡಿದರು.

ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು

ರಾಜ್ಯದ ಸರ್ಕಾರಿ ನೌಕರರಿಗೆ ಹಳೇ ಪಿಂಚಣಿ ಯೋಜನೆಯ‌ನ್ನು ಮರು ಜಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಒತ್ತಾಯಿಸಲಾಗುವುದು ಎಂದು ಚಿಕ್ಕಮಗಳೂರು ಶಾಸಕ ಎಚ್.ಡಿ.ತಮ್ಮಯ್ಯ ಭರವಸೆ ನೀಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಸರ್ಕಾರಿ ನೌಕರರ ಸಂಘದ ವತಿಯಿಂದ ನಗರದ ಸುಭಾಷ್ ಚಂದ್ರ ಬೋಸ್ ಜಿಲ್ಲಾ ಆಟದ ಮೈದಾನದಲ್ಲಿ ಆಯೋಜಿಸಿದ್ದ ಎರಡು ದಿನಗಳ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟದ ಅಧ್ಯಕ್ಷತೆ ವಹಿಸಿ ಮಾತನಾಡಿ ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ವ್ಯವಸ್ಥೆಯನ್ನೇ (ಒಪಿಎಸ್) ಮುಂದುವರಿಸುವಂತೆ ಮುಖ್ಯಮಂತ್ರಿಗಳಿಗೆ ಒತ್ತಾಯಿಸಿರುವುದಲ್ಲದೆ, ವಿಧಾನಸಭೆಯಲ್ಲೂ ಈ ಕುರಿತು ಮಾತನಾಡುವುದಾಗಿ ಭರವಸೆ ನೀಡಿದರು.

ಮನುಷ್ಯನಿಗೆ ಆರೋಗ್ಯವೇ ದೊಡ್ಡ ಭಾಗ್ಯ, ಅದು ಲಭಿಸಬೇಕಾದರೆ ಕ್ರೀಡಾಕೂಟಗಳಲ್ಲಿ ಭಾಗವಹಿಸಬೇಕು. ಮುಂದಿನ ವರ್ಷದ ಕ್ರೀಡಾ ಕೂಟಕ್ಕೆ ಸರ್ಕಾರಿ ನೌಕರರಿಗೆ ಟ್ರ್ಯಾಕ್‌ಸೂಟ್‌ಗಳನ್ನು ನೀಡುವುದಾಗಿ ಹೇಳಿದರು.

ನೌಕರರ ಸಮುದಾಯ ಭವನದ ನಿರ್ಮಾಣಕ್ಕೆ ತಾವು ಈಗಾಗಲೇ ₹10 ಲಕ್ಷ ಒದಗಿಸಿದ್ದು, ಇನ್ನೂ ಹೆಚ್ಚಿನ ಸಹಕಾರ ನೀಡುವ ಭರವಸೆ ನೀಡಿದರು.

ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ, ನಿತ್ಯದ ಬದುಕಿನ ಜಂಜಾಟದ ನಡುವೆ ನಿಮಗೆ ಕ್ರೀಡಾಕೂಟದ ದಿನ ಸಿಕ್ಕಿದೆ. ಅದನ್ನು ಸದುಪಯೋಗಪಡಿಸಿಕೊಳ್ಳಿ. ಎಲ್ಲರೂ ಒಂದಲ್ಲ ಒಂದು ರೀತಿ ಒತ್ತಡದಲ್ಲಿದ್ದಾರೆ. ಒತ್ತಡದ ನಡುವೆ ಕೆಲಸ ಮಾಡುವುದು ಕಷ್ಟ, ಹಾಗಾಗಿ ಒತ್ತಡ ನಿವಾರಣೆಗೆ ಪ್ರತಿನಿತ್ಯ ವಾಕಿಂಗ್, ಯೋಗಾಭ್ಯಾಸ ಮಾಡಬೇಕು ಎಂದು ಸಲಹೆ ನೀಡಿದರು. ಕ್ರೀಡಾ ಕೂಟಗಳಲ್ಲಿ ಭಾಗವಹಿಸುವುದರಿಂದ ದೇಹ ಸದೃಢವಾಗಿ ಒತ್ತಡ ನಿವಾರಣೆಯಾಗುತ್ತದೆ ಎಂದರು.

ಸರ್ಕಾರ ಹೊಸ ಪಿಂಚಣಿ ವ್ಯವಸ್ಥೆ ಕೈ ಬಿಟ್ಟು ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ವ್ಯವಸ್ಥೆಯನ್ನೇ (ಒಪಿಎಸ್) ಮುಂದುವರಿ ಸಬೇಕು. ಹಳೆಯ ಪಿಂಚಣಿ ವ್ಯವಸ್ಥೆ ಮುಂದುವರಿಸುವುದರಿಂದ ಸರ್ಕಾರಿ ನೌಕರರ ನಿವೃತ್ತ ಜೀವನ ಸುಖಮಯವಾಗುತ್ತದೆ ಎಂದರು.

ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ಮಾತನಾಡಿ, ಸದಾ ಒತ್ತಡದ ನಡುವೆ ಕೆಲಸ ಮಾಡುವ ಸರ್ಕಾರಿ ನೌಕರರಿಗೆ ಕ್ರೀಡಾ ಕೂಟ ಅತ್ಯಂತ ಅವಶ್ಯಕ. ಸರ್ಕಾರಿ ನೌಕರರು ದಿನನಿತ್ಯದ ಜಂಜಾಟ, ಒತ್ತಡ ಬದಿಗಿಟ್ಟು ಕ್ರೀಡಾಕೂಟದಲ್ಲಿ ಭಾಗವಹಿಸ ಬೇಕು. ಕ್ರೀಡೆಗಳಲ್ಲಿ ಪಾಲ್ಗೊಳ್ಳುವವರು ಸೋಲಿಗೆ ಕುಗ್ಗಬಾರದು, ಗೆಲುವಿಗೆ ಹಿಗ್ಗಬಾರದು, ಎರಡನ್ನೂ ಸಮವಾಗಿ ಸ್ವೀಕರಿಸಬೇಕು ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಚ್.ಎಸ್. ಕೀರ್ತನಾ ಮಾತನಾಡಿ, ಕ್ರೀಡಾಕೂಟ ನಡೆಯುವ ಈ 2 ದಿನ ನಿಮ್ಮದು ಅದನ್ನು ಸಮರ್ಪಕವಾಗಿ ಬಳಸಿಕೊಳ್ಳಿ, ಎಲ್ಲವನ್ನೂ ಮರೆತು ಕ್ರೀಡೆಗಳಲ್ಲಿ ಪಾಲ್ಗೊಳ್ಳಿ ಎಂದು ಸರ್ಕಾರಿ ನೌಕರರಿಗೆ ಸಲಹೆ ನೀಡಿದರು.

ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ದೇವೇಂದ್ರ ಮಾತನಾಡಿ, ಸಂಘದಿಂದ ನಗರದಲ್ಲಿ ನಿರ್ಮಿಸುತ್ತಿರುವ ಸರ್ಕಾರಿ ನೌಕರರ ಸಮುದಾಯ ಭವನಕ್ಕೆ ಅನುದಾನ ನೀಡುವಂತೆ ವೇದಿಕೆಯಲ್ಲಿದ್ದ ಶಾಸಕ ಎಚ್.ಡಿ.ತಮ್ಮಯ್ಯ, ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡರಿಗೆ ಮನವಿ ಮಾಡಿದರು.

ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ ಸರ್ಕಾರಿ ನೌಕರರನ್ನು ಸಮಾರಂಭದಲ್ಲಿ ಸನ್ಮಾನಿಸಲಾಯಿತು. ನಗರಾ ಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಚ್.ಪಿ. ಮಂಜೇಗೌಡ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಂ.ಸಿ.ಶಿವಾನಂದ ಸ್ವಾಮಿ, ನಗರಸಭೆ ಅಧ್ಯಕ್ಷೆ ಶೀಲಾ ದಿನೇಶ್, ಉಪಾಧ್ಯಕ್ಷೆ ಲಲಿತ ನಾಯಕ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪನಿರ್ದೇಶಕಿ ಡಾ.ಎಚ್.ಪಿ.ಮಂಜುಳ, ಜಿಲ್ಲಾ ಸರಕಾರಿ ನೌಕರರ ಸಂಘದ ಗೌರವಾಧ್ಯಕ್ಷ ಸಿ.ಎಸ್.ಮಂಜುನಾಥ ಸ್ವಾಮಿ, ಖಜಾಂಚಿ ಪೂರ್ಣೇಶ್, ರಾಜ್ಯ ಪರಿಷತ್ ಸದಸ್ಯ ಮಂಜುನಾಥ್, ಕಾರ್ಯದರ್ಶಿ ಟಿ.ಪದ್ಮರಾಜ್. ಕಾರ್ಯಾಧ್ಯಕ್ಷ ಬಿ.ಎನ್.ಸುಂದರೇಶ್, ಹಿರಿಯ ಉಪಾಧ್ಯಕ್ಷರಾದ ಕೆ.ಬಿ.ಶೇಖರ್, ಸುದೀಪ್ ರಾಜೇಂದ್ರ, ಅನಂತ್, ಪುಟ್ಟಸ್ವಾಮಿ, ಮಂಜುನಾಥ್, ನಾಗೇಶ್ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜಿಲ್ಲಾಸ್ಪತ್ರೆಯಲ್ಲಿ ಹೆಚ್ಚುವರಿ ಹಾಸಿಗೆಗಳ ತೀವ್ರ ನಿಗಾ ಘಟಕ ಲೋಕಾರ್ಪಣೆ
ಶಿವಶರಣದ ಆಶಯದಂತೆ ಸರ್ಕಾರದ ಆಡಳಿತ: ಸಚಿವ ಕೆ.ಜೆ. ಜಾರ್ಜ್‌